ಮಂಗಳೂರು ಗಲಭೆ: 16 ಮಂದಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು
ಬೆಂಗಳೂರು, ಫೆಬ್ರವರಿ 27: ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆದ ಪ್ರತಿಭಟನೆ ವೇಳೆ ಸಂಭವಿಸಿದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 16 ಮಂದಿಗೆ ಹೈಕೋರ್ಟ್ ಗುರುವಾರ ಷರತ್ತುಬದ್ಧ ಜಾಮೀನು ನೀಡಿದೆ.
ಸಿಎಎ ಮತ್ತು ಎನ್ಆರ್ಸಿ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಆಗ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿ ಠಾಣೆಗೆ ಬೆಂಕಿ ಹಚ್ಚಿದ ಆರೋಪದಡಿ ಬಂಧನಕ್ಕೆ ಒಳಗಾಗಿದ್ದ 16 ಮಂದಿಗೆ ಜಾಮೀನು ಮಂಜೂರು ಮಾಡಲಾಗಿದೆ.
ಸುಹೇಲ್, ತಂಜೀಲ್ ಸೇರಿದಂತೆ 16 ಆರೋಪಿಗಳು ಹೈಕೋರ್ಟ್ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಅವರ ಜಾಮೀನು ಅರ್ಜಿಗಳು ಮಂಗಳೂರು 4ನೇ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯಗಳಲ್ಲಿ ತಿರಸ್ಕೃತಗೊಂಡಿದ್ದವು. ಹೀಗಾಗಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅವರ ಅರ್ಜಿಯನ್ನು ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ.

ಸಿಎಎ ವಿರುದ್ಧ ನಡೆದ ಪ್ರತಿಭಟನೆ ವೇಳೆ 2019ರ ಡಿ. 19ರಂದು ನಡೆದಿದ್ದ ಇದೇ ಪ್ರಕರಣದಲ್ಲಿ ಫೆ. 20ರಂದು ಹೈಕೋರ್ಟ್ 21 ಜನರಿಗೆ ಜಾಮೀನು ನೀಡಿತ್ತು.












Click it and Unblock the Notifications