ಶಾಸಕ ವಸಂತ್ ಆಸ್ನೋಟಿಕರ್ ಶೌಟೌಟ್ ಕೇಸ್: ಆರೋಪಿಗೆ ಜೀವಾವಧಿ ಶಿಕ್ಷೆ ಕಾಯಂ
ಬೆಂಗಳೂರು, ಏಪ್ರಿಲ್ 17: ಕಳೆದ 24 ವರ್ಷದ ಹಿಂದೆ ಕಾರವಾರ ಶಾಸಕರಾಗಿದ್ದ ವಸಂತ್ ಆಸ್ನೋಟಿಕರ್ ಶೂಟೌಟ್ ಪ್ರಕರಣದ ಆರೋಪಿ ಶಾರ್ಪ್ ಶೂಟರ್ ರಾಜನ್ ಅಲಿಯಾಸ್ ಸಂಜಯ್ ಕಿಶನ್ ಮೊಹಿತೆಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೊರ್ಟ್ ಎತ್ತಿಹಿಡಿದಿದೆ. ಹಾಗಾಗಿ ಆತ ಶಿಕ್ಷೆಯನ್ನು ಅನುಭವಿಸಲೇಬೇಕಾಗಿದೆ.
ಪ್ರಕರಣದ ಆರನೇ ಆರೋಪಿಯಾಗಿದ್ದ ಮುಂಬೈ ಪಶ್ಚಿಮದ ಅಂಧೇರಿಯ ಮೂಲದ ಸಂಜಯ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಪಿ ಸಂದೇಶ್ ಮತ್ತು ರಾಮಚಂದ್ರ ಹುದ್ದಾರ್ ಅವರಿದ್ದ ಧಾರವಾಠ ಪೀಠ ಈ ಆದೇಶ ನೀಡಿದೆ.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಘಟನೆ ಸಂಬಂಧ ಲಭ್ಯವಿರುವ ಹಲವು ಪ್ರತ್ಯಕ್ಷ ಸಾಕ್ಷ್ಯಿಗಳಿದ್ದು, ಮೇಲ್ಮನವಿದಾರರ ಕೃತ್ಯವನ್ನು ಗುರುತಿಸಿದ್ದಾರೆ. ವಿಚಾರಣಾ ನ್ಯಾಯಾಲಯಕ್ಕೆ ಸಾಕ್ಷ್ಯಗಳನ್ನು ಹೇಳಿಕೆಗಳನ್ನು ನಿಡಿದ್ದಾರೆ. ಕೆಲ ಸಾಕ್ಷ್ಯಧಾರಗಳಲ್ಲಿ ವಿರೋಧಾಭಾಸವಿರಬಹುದು. ಆದರೆ, ಅದಕ್ಕೆಲ್ಲಾ ಖಚಿತ ಆಧಾರಗಳಿವೆ. ಪ್ರತ್ಯಕ್ಷ ಸಾಕ್ಷಿಗಳು ಆರೋಪಕ್ಕೆ ಪೂರಕವಾಗಿದ್ದಾಗ ಇತರೆ ಸಾಕ್ಷಿಗಳನ್ನು ನಂಬ ಬೇಕಾಗುತ್ತದೆ ಎಂದು ತಿಳಿಸಿದೆ.
ಅಲ್ಲದೇ ಗುಂಡಿನ ಸಾಳಿ ಅಸಮಾನ್ಯವಾಗಿತ್ತು. ಕಾರವಾದಂತಹ ನಗರಗಲ್ಲಿ ಈ ರೀತಿಯ ಚಲನಚಿತ್ರಗಳಲ್ಲಿಯೂ ಕಾಣದಂತಹ ಘಟನೆಯಾಗಿದ್ದರ ಪರಿಣಾಮ ಪ್ರತ್ಯಕ್ಷ ಸಾಕ್ಷ್ಯಗಳಿಗೆ ನೆನಪಿನಲ್ಲಿ ಉಳಿಯುವಂತೆ ಆಗಿದೆ ಎಂದು ಪೀಠ ತಿಳಿಸಿದೆ.
ಸಾಕ್ಷಿದಾರರು ಪಾಟಿಸವಾಲು ಸಂದರ್ಭದಲ್ಲಿ ನೀಡಿರುವ ಹೇಳಿಕೆ ನಂಬಲಾರ್ಹವಲ್ಲ ಎಂಬುದಕ್ಕೆ ಸಾಧ್ಯವೇ ಇಲ್ಲ. ಕಾನೂನಿನಲ್ಲಿ ಈ ಎಲ್ಲ ವಾಸ್ತವಿಕ ಅಂಶಗಳನ್ನು ಪರಿಶೀಲನೆ ನಡೆಸಿದಲ್ಲಿ ವಿಚಾರಣಾ ನ್ಯಾಯಾಲಯದ ಆದೇಶ ಕಾನೂನು ಬಾಹಿರ ಹಾಗೂ ದೋಷದಿಂದ ಕೂಡಿದೆ ಎಂದು ಸಾಬೀತು ಪಡಿಸುವುದಕ್ಕೆ ಯಾವುದೇ ಆಧಾರಗಳು ಇಲ್ಲ. ಆದ ಕಾರಣದ ಮೇಲ್ಮನವಿಯನ್ನು ವಜಾಗೊಳಿಸುತ್ತಿರುವುದಾಗಿ ಪೀಠ ತಿಳಿಸಿದೆ.
ಮೇಲ್ಮನವಿಯಲ್ಲಿ ಅರ್ಜಿದಾರರು, ಘಟನೆ ನಡೆದ ದಿನದಂದು ಆರೋಪಿ ಕಾರವಾದಲ್ಲಿದ್ದರು ಎಂಬುದಾಗಿ ತನಿಖಾಧಿಕಾರಿಗಳು ತಪ್ಪಾಗಿ ದಾಖಲೆಗಳನ್ನು ಸೃಷ್ಠಿಸಿದ್ದಾರೆ. ಹೊಸದಾಗಿ ಆರೋಪ ಪಟ್ಟಿ ಸಲ್ಲಿಸಿದ್ದು, ಪ್ರಕರಣದಲ್ಲಿ ತಮ್ಮನ್ನು ಸಿಲುಕಿಸಿದ್ದಾರೆ. ಅಲ್ಲದೇ ಘಟನೆ ನಡೆದ ಎರಡು ವರ್ಷಗಳ ಬಳಿಕ ಸಾಕ್ಷ್ಯಗಳ ಪೆರೆಡ್ ನಡೆಸಿದ್ದಾರೆ. ಸಾಕ್ಷಿಗಳಿಗೆ ತರಬೇತಿ ನೀಡಿ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ ಎಂದು ವಾದ ವಿವರಿಸಿದ್ದರು.
ಪ್ರಕರಣದ ಹಿನ್ನೆಲೆ ಏನು..?
ಕಾರವಾರದ ಕಲ್ಯಾಣ ಮಂಟಪವೊಂದರಲ್ಲಿ ತಮ್ಮ ಮಗಳ ವಿವಾಹದ ಆರತಕ್ಷತೆ ಕಾರ್ಯಕ್ಕೆ ಸಿದ್ದತೆ ನಡೆಸುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಬಂದಿದ್ದ ಇಬ್ಬರು ಆರೋಪಿಗಳು ಆಸ್ನೋಟಿಕರ್ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸಿದ್ದರಾದರೂ, ಚಿಕಿತ್ಸೆ ಫಲಕಾರಿಯಾದೆ ಮೃತಪಟ್ಟಿದ್ದರು. ಘಟನೆಯಲ್ಲಿ ಗಣಪತಿ ಉಲ್ವೆಕರ್ ಎಂಬುವರು ಗಾಯಗೊಂಡಿದ್ದರು.
ಪ್ರಕರಣದ ಮೊದಲ ಆರೋಪಿ ದಿಲೀಪ್ ಅರ್ಜಿನ್ ನಾಯ್ಕ್, ಇತರೆ ಆರೋಪಿಗಳಾದ ಆಂಟೋನಿ ಅಲಿಯಾಸ್ ಟೋನಿ ರೊಜಾರಿಯೋ ಮತ್ತು ಓಂ ಪ್ರಕಾಶ್ ಗಿರಿ ಅಲಿಯಾಸ್ ಪಕ್ಯಾ ಅಲಿಯಾಸ್ ಬಾಬು ಎಂಬುವರು ವಿಚಾರಣೆ ಹಂತದಲ್ಲಿಯೇ ಮೃತಪಟ್ಟಿದ್ದರು. ಹೀಗಾಗಿ ಈ ಆರೋಪಿಗಳ ವಿರುದ್ಧದ ಆರೋಪವನ್ನು ನ್ಯಾಯಾಲಯ ಕೈಬಿಟ್ಟಿತ್ತು.
ಪ್ರಕರಣದ ವಿಚಾರಣೆ ನಡೆಸಿದ್ದ ಉತ್ತರ ಕನ್ನಡ ಜಿಲ್ಲೆಯ ೧ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಆರೋಪಿಯ ವಿರುದ್ಧ ಕೊಲೆ, ಕೊಲೆಯತ್ನ, ಪಿತೂರಿ, ಸಾಕ್ಷ್ಯನಾಶ, ಶಸ್ತ್ರಾಸ್ತ್ರ ಕಾಯಿದೆ ಉಲ್ಲಂಘನೆ ಆರೋಪದಲ್ಲಿ ಸಂಜಯ್ ಮೊಹಿತೆ ಅವರಿಗೆ ಜೀವಾವಧಿ ಶಿಕ್ಷೆ ಮತ್ತು ೬೮ ಸಾವಿರ ರೂ ದಂಡ ವಿಧಿಸಿ ಆದೇಶಿಸಿತ್ತು.












Click it and Unblock the Notifications