ಡ್ಯಾಗರ್ನಿಂದ ಚುಚ್ಚಿ ಸಾಯಿಸಿದ್ದ ಆರೋಪಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್
ಬೆಂಗಳೂರು, ಜುಲೈ 1: ಮದ್ಯ ಸೇವಿಸಿ ಕಿರುಚಾಡುತ್ತಾ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಕಾರಣಕ್ಕೆ ತನಗೆ ಕಪಾಳ ಮೋಕ್ಷ ಮಾಡಿದ್ದ ಯುವಕನನ್ನು ಡ್ಯಾಗರ್ನಿಂದ ಚುಚ್ಚಿ ಬರ್ಬರವಾಗಿ ಕೊಲೆ ಮಾಡಿದ ಆರೋಪಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ.
ಆರೋಪಿ ಕೊಲೆ ಮಾಡಿ ಫೇಮಸ್ ಆಗಬೇಕೆಂಬ ಮನಸ್ಥಿತಿ ಇದ್ದವನು. ಹಾಗಾಗಿ ಕೊಲೆ ಮಾಡುವ ಉದ್ದೇಶವು ಆರೋಪಿಗೆ ಇರಲಿಲ್ಲವೆಂದು ಹೇಳಲಾಗದು ಎಂದು ಅಭಿಪ್ರಾಯಪಟ್ಟಿದೆ. ಪ್ರಕರಣದ ಸಂಬಂಧ ಕಳೆದ ಎಂಟು ತಿಂಗಳಿಂದ ನ್ಯಾಯಾಂಗ ಬಂಧನದಲ್ಲಿರುವ ಬೆಂಗಳೂರಿನ ಕನವನಹಳ್ಳಿ ಮುಖ್ಯರಸ್ತೆಯ ಕೂಡ್ಲು ಸ್ಲಂ ಕ್ವಾಟರ್ರ್ಸ್ ನಿವಾಸಿ ಕೆ.ನವೀನ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರ ಪೀಠ ಆದೇಶಿಸಿದೆ.

ಅರ್ಜಿದಾರ ಪರ ವಕೀಲರು, ದಿಢೀರ್ ಆಗಿ ಏರ್ಪಟ್ಟ ಜಗಳದಿಂದ ಕೊಲೆ ಘಟನೆ ನಡೆದಿದೆ. ಮೃತನನ್ನು ಕೊಲೆ ಮಾಡುವ ಉದ್ದೇಶ ಆರೋಪಿಗೆ ಇರಲಿಲ್ಲ ಎಂದು ವಾದಿಸಿದ್ದರು. ಆದರೆ ಆ ವಾದವನ್ನು ನ್ಯಾಯಾಲಯ ತಿರಸ್ಕರಿಸಿದೆ.
ಫೇಮಸ್ ಆಗಲು ಕೊಲೆ ಮಾಡಿದ್ದಾನೆ ಎಂದ ನ್ಯಾಯಾಲಯ
"ಆರೋಪಿಯು ಕೊಲೆ ಮಾಡಿ ಫೇಮಸ್ ಆಗಬೇಕೆಂದು ಪದೇ ಪದೇ ಹೇಳುತ್ತಿದ್ದ. ಮೃತನ ತಾಯಿ ಹಾಗೂ ಇತರೆ ಪ್ರತ್ಯಕ್ಷ ದರ್ಶಿಗಳ ಹೇಳಿಕೆ ಪ್ರಕಾರ ಆರೋಪಿ ಮೃತನ ಕುತ್ತಿಗೆಗೆ ಡ್ಯಾಗರ್ನಿಂದ ಚುಚ್ಚಿದ್ದಾನೆ. ನಂತರ ಓಡಿಹೋಗುತ್ತಿದ್ದ ಮೃತನನ್ನು ಬೆನ್ನಟ್ಟಿ ಮತ್ತೆ ಕುತ್ತಿಗೆ ಮತ್ತು ಹೊಟ್ಟೆಗೆ ಡ್ಯಾಗರ್ನಿಂದ ಚುಚ್ಚಿದ್ದಾನೆ. ಶವಪರೀಕ್ಷೆಯ ವರದಿ ಪ್ರಕಾರ ಮೃತನ ದೇಹದ ಮೇಲೆ ಏಳು ಗಂಭೀರಗಾಯಗಳಿವೆ. ಆಘಾತ ಮತ್ತು ತೀವ್ರ ರಕ್ತಸ್ರಾವದಿಂದ ವ್ಯಕ್ತಿ ಸಾವನ್ನಪ್ಪಿದ್ದಾನೆ" ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ.
ಪ್ರಕರಣದ ಸ್ವರೂಪ ಮತ್ತು ಗಂಭೀರತೆ ಪರಿಗಣಿಸಿದರೆ ಜಾಮೀನು ಮೇಲೆ ಆರೊಪಿಯನ್ನು ಬಿಡುಗಡೆಗೊಳಿಸಲು ಇದು ಅರ್ಹ ಪ್ರಕರಣವಲ್ಲ ಎಂದು ತೀರ್ಮಾನಿಸಿದ ನ್ಯಾಯಪೀಠ ಅರ್ಜಿ ವಜಾಗೊಳಿಸಿದೆ.
ಏನಿದು ಪ್ರಕರಣ?
ಅರ್ಜಿದಾರ ಆರೋಪಿ ನವೀನ್ ಮದ್ಯದ ಚಟಕ್ಕೆ ದಾಸನಾಗಿದ್ದ. ಜನಪ್ರಿಯವಾಗಲು ಒಂದು ಕೊಲೆ ಮಾಡುತ್ತೇನೆ ಎಂದು ಪದೇ ಪದೇ ಹೇಳಿಕೊಳ್ಳುತ್ತಿದ್ದ. 2022ರ ಅಕ್ಟೋಬರ್ 3 ರಂದು ರಾತ್ರಿ 10 ಗಂಟೆಗೆ ಕಿರುಚಾಡುತ್ತಾ, ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದ.
ಈ ಸಂದರ್ಭದಲ್ಲಿ ಅನಿಲ್ ಕುಮಾರ್ (24) ಎನ್ನುವವರು ನವೀನ್ಗೆ ಬುದ್ದಿ ಹೇಳಿದ್ದ, ಆಗ ಇಬ್ಬರ ನಡುವೆ ಗಲಾಟೆಯಾಗಿದ್ದು, ಅನಿಲ್ ನವೀನ್ಗೆ ಕಪಾಳಕ್ಕೆ ಹೊಡೆದಿದ್ದ. ಇದರಿಂದ ಸಿಟ್ಟಿಗೆದ್ದ ನವೀನ್ 2022ರ ಅಕ್ಟೋಬರ್ 9ರಂದು ಸಂಜೆ 6.10 ಗಂಟೆಗೆ ಮನೆಯಿಂದ ಹೊರಗೆ ಬಂದ ಅನಿಲ್ ಮೇಲೆರಗಿ ಕುತ್ತಿಗೆಗೆ ಡ್ಯಾಗರ್ ನಿಂದ ಚುಚ್ಚಿದ್ದ.
ಅನಿಲ್ ರಕ್ಷಣೆಗೆ ಮುಂದಾದ ಮೂವರಿಗೆ ಜೀವ ಬೆದರಿಕೆ ಹಾಕಿದ್ದ. ಈ ವೇಳೆ ತಪ್ಪಿಸಿಕೊಂಡು ಓಡುತ್ತಿದ್ದ ಅನಿಲ್ನನ್ನು ಬೆನ್ನಟ್ಟಿ ಹಿಡಿದು ಮತ್ತೆ ಕುತ್ತಿಗೆ, ಹೊಟ್ಟೆ ಮತ್ತು ದೇಹದ ಇತರೆ ಭಾಗಗಳಿಗೆ ಡ್ಯಾಗರ್ನಿಂದ ಚುಚ್ಚಿ ಪರಾರಿಯಾಗಿದ್ದ. ತೀವ್ರ ಗಾಯಗೊಂಡಿದ್ದ ಅನಿಲ್ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದ.
ಮೃತನ ತಾಯಿಯ ದೂರು ಆಧರಿಸಿ ತನಿಖೆ ನಡೆಸಿದ್ದ ಬೆಳ್ಳಂದೂರು ಠಾಣಾ ಪೊಲೀಸರು ನವೀನನ್ನು ಬಂಧಿಸಿದ್ದರು. ಜಾಮೀನು ಕೋರಿ ಬಂಧಿತ ಹೈಕೋರ್ಟ್ ಮೊರೆ ಹೋಗಿದ್ದ. ನವೀನ್ ಪರ ವಕೀಲರು, ಹಿಂದೆ ನಡೆದಿದ್ದ ಜಗಳದ ವೇಳೆ ಮೃತನು ಕಪಾಳಕ್ಕೆ ಹೊಡೆದಿದ್ದ. ದಿಢೀರ್ ಆಗಿನಡೆದ ಘಟನೆಯಿಂದ ಅರ್ಜಿದಾರ ಕೊಲೆಗೈದಿದ್ದಾನೆ. ಕೊಲೆ ಮಾಡುವ ಉದ್ದೇಶ ಆರೋಪಿಗೆ ಇರಲಿಲ್ಲ. ಆರೋಪಿಗೆ 22 ವರ್ಷವಾಗಿದ್ದು, 2022ರ ಅ.10ರಿಂದ ನ್ಯಾಯಾಂಗ ಬಂಧನದಲ್ಲಿದ್ದು, ಅಗತ್ಯ ಷರತ್ತುಗಳನ್ನು ವಿಧಿಸಿ ಜಾಮೀನು ನೀಡುವಂತೆ ಕೋರಿದ್ದರು












Click it and Unblock the Notifications