ಬಿಬಿಎಂಪಿ ಚುನಾವಣೆ, ಸರ್ಕಾರದ ಮಧ್ಯಂತರ ಅರ್ಜಿ ವಜಾ
ಬೆಂಗಳೂರು, ಜೂ. 22 : 2011ರ ಜನಗಣತಿ ಅನ್ವಯ ಕ್ಷೇತ್ರ ಪುನರ್ ವಿಂಗಡನೆ ಮಾಡಲು ಕಾಲಾವಕಾಶ ನೀಡುವಂತೆ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಆದ್ದರಿಂದ 2015ರ ಆಗಸ್ಟ್ 5ರೊಳಗೆ ಬಿಬಿಎಂಪಿ ಚುನಾವಣೆ ನಡೆಸುವುದು ಅನಿವಾರ್ಯವಾಗಿದೆ.
ಬಿಬಿಎಂಪಿ ಚುನಾವಣೆ ಸಂಬಂಧ 2011ರ ಜನಗಣತಿ ಆಧರಿಸಿ ವಾರ್ಡ್ ಮರು ವಿಂಗಡಣೆ ಮತ್ತು ಮೀಸಲಾತಿ ನಿಗದಿಗೆ ಅನುಮತಿ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರ ಏಕಸದಸ್ಯ ಪೀಠ ಸೋಮವಾರ ತೀರ್ಪು ಪ್ರಕಟಿಸಿತು. [3 ತಿಂಗಳಲ್ಲಿ ಚುನಾವಣೆ ನಡೆಸಿ : ಸುಪ್ರೀಂ]

ಸುಪ್ರೀಂಕೋರ್ಟ್ ಆದೇಶವನ್ನು ಮಾರ್ಪಾಡು ಮಾಡುವಂತಿಲ್ಲ ಎಂದು ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದ ಕೋರ್ಟ್, ಶೀಘ್ರವೇ ಚುನಾವಣಾ ವೇಳಾಪಟ್ಟಿಯನ್ನು ಘೋಷಣೆ ಮಾಡುವಂತೆ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿತು. ಬಿಬಿಎಂಪಿ ಚುನಾವಣೆಗೆ ಕಾಲಾವಕಾಶ ಕೇಳಿದ್ದ ಸರ್ಕಾರದ ಅರ್ಜಿಯನ್ನು ವಜಾಗೊಳಿಸಿತು. [ಬಿಬಿಎಂಪಿ ಚುನಾವಣೆ : ಏಕಸದಸ್ಯ ಪೀಠದ ಆದೇಶ ರದ್ದು]
ಏನಿದು ಅರ್ಜಿ?: ಕರ್ನಾಟಕ ಸರ್ಕಾರ, ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಆಯೋಗ ಪ್ರತ್ಯೇಕವಾಗಿ ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದವು. 2011ರ ಜನಗಣತಿ ಆಧರಿಸಿ ಬಿಬಿಎಂಪಿ ವಾರ್ಡ್ ಮರು ವಿಂಗಡಣೆ ಮತ್ತು ಮೀಸಲು ಪಟ್ಟಿ ನಿಗದಿ ಮಾಡುತ್ತೇವೆ. ಇದಕ್ಕೆ ಸಮಯಾವಕಾಶ ಬೇಕಾಗಿದೆ. ಆದ್ದರಿಂದ ಬಿಬಿಎಂಪಿ ಚುನಾವಣೆಯನ್ನು ಮುಂದೂಡಲು ಅನುಮತಿ ನೀಡಬೇಕು ಎಂದು ಮನವಿ ಮಾಡಲಾಗಿತ್ತು.
ಆಯೋಗದ ಆಕ್ಷೇಪ : ಈ ಅರ್ಜಿಗೆ ರಾಜ್ಯ ಚುನಾವಣಾ ಆಯೋಗ ಆಕ್ಷೇಪ ವ್ಯಕ್ತಪಡಿಸಿತ್ತು. ಸುಪ್ರೀಂ ಕೋರ್ಟ್ ಆದೇಶದಂತೆ ಆಗಸ್ಟ್ 5ರೊಳಗೆ ಚುನಾವಣೆ ನಡೆಸಬೇಕು. ಸರ್ಕಾರದ ಅರ್ಜಿ ಪರಿಗಣಿಸಿದರೆ ಮೂರು ತಿಂಗಳು ಚುನಾವಣೆ ಮುಂದೂಡಬೇಕಾಗುತ್ತದೆ. ಜುಲೈ ಅಂತ್ಯದೊಳಗೆ ಚುನಾವಣೆ ನಡೆಸಲು ಆಯೋಗ ಸಿದ್ಧವಾಗಿದ್ದು, ಸರ್ಕಾರದ ಮನವಿ ಪುರಸ್ಕರಿಸಬಾರದು ಎಂದು ಮನವಿ ಮಾಡಿತ್ತು.
ಕೋರ್ಟ್ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಆಯೋಗ ಮತ್ತು ಕರ್ನಾಟಕ ಸರ್ಕಾರದ ಅರ್ಜಿಯನ್ನು ವಜಾಗೊಳಿಸಿದೆ. ಆದ್ದರಿಂದ, ಸುಪ್ರೀಂಕೋರ್ಟ್ ಆದೇಶದ ಅನ್ವಯ ಆಗಸ್ಟ್ 5ರೊಳಗೆ 2001ರ ಜನಗಣತಿ ಅನ್ವಯ ಬಿಬಿಎಂಪಿ ಚುನಾವಣೆ ನಡೆಯಲಿದೆ.
ಮಂಗಳವಾರ ಸಭೆ : ಕರ್ನಾಟಕ ಸರ್ಕಾರದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವುದರಿಂದ ರಾಜ್ಯ ಚುನಾವಣಾ ಆಯೋಗ ಜೂನ್ 23ರ ಮಂಗಳವಾರ ತುರ್ತು ಸಭೆ ನಡೆಸಲಿದೆ. ಮೂರು ದಿನದಲ್ಲಿ ಬಿಬಿಎಂಪಿ ಚುನಾವಣಾ ವೇಳಾಪಟ್ಟಿ ಪ್ರಕಟಗೊಳ್ಳುವ ಸಾಧ್ಯತೆ ಇದೆ.












Click it and Unblock the Notifications