ರಾಷ್ಟ್ರೀಯ ಪಕ್ಷದ ಸ್ಥಾನಮಾನಕ್ಕೆ ಕೋರಿ ಎಎಪಿ ಅರ್ಜಿ ಸಲ್ಲಿಕೆ: ಅರ್ಜಿ ಪುರಸ್ಕರಿಸಿದ ಹೈಕೋರ್ಟ್
ಬೆಂಗಳೂರು, ಏಪ್ರಿಲ್ 06: ರಾಷ್ಟ್ರೀಯ ಪಕ್ಷದ ಮಾನ್ಯತೆ ಪಡೆಯುವಲ್ಲಿ ವಿಳಂಬವಾಗುತ್ತಿದೆ ಎಂದು ಆರೋಪಿಸಿರುವ ಆಮ್ ಆದ್ಮಿ ಪಕ್ಷವು (ಎಎಪಿ) ಕರ್ನಾಟಕ ರಾಜ್ಯ ಹೈಕೋರ್ಟ್ ಗೆ ಸಲ್ಲಿಸಿದೆ.
ಆಮ್ ಆದ್ಮಿ ಪಕ್ಷವು (ಎಎಪಿ) ಅರ್ಜಿಯನ್ನು ಗುರುವಾರ ರಾಜ್ಯ ಹೈಕೋರ್ಟ್ ಪುರಸ್ಕರಿಸಿದೆ ಎಂದು ಪಕ್ಷ ತಿಳಿಸಿದೆ. ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಅಮೋಘ ಸಾಧನೆ ತೋರಿದ್ದ ಆಮ್ ಆದ್ಮಿ ಪಕ್ಷ ರಾಷ್ಟ್ರೀಯ ಪಕ್ಷದ ಮಾನ್ಯತೆಗೆ ಅರ್ಹತೆಯನ್ನು ಪಡೆದುಕೊಂಡಿತ್ತು. ಆದರೆ, ಇಲ್ಲಿಯವರೆಗೂ ಮಾನ್ಯತೆ ನೀಡದಿರುವುದನ್ನು ಪ್ರಶ್ನಿಸಿ ಎಎಪಿ ಕರ್ನಾಟಕ ಹೈ ಕೋರ್ಟ್ ಗೆ ಆಮ್ ಆದ್ಮಿ ಪಕ್ಷದ ರಾಜ್ಯ ಕಾರ್ಯದರ್ಶಿ ದರ್ಶನ್ ಜೈನ್ ರಿಟ್ ಅರ್ಜಿ ಸಲ್ಲಿಸಿದ್ದಾರೆ.

ಒಂದು ಪಾರ್ಟಿ ರಾಷ್ಟ್ರೀಯ ಪಕ್ಷವಾಗಿ ಗುರುತಿಸಿಕೊಳ್ಳಲು ನಾಲ್ಕು ರಾಜ್ಯಗಳಲ್ಲಿ ರಾಜ್ಯ ಪಕ್ಷವಾಗಿರಬೇಕು, ಹಾಗೂ ನಾಲ್ಕು ರಾಜ್ಯಗಳಲ್ಲಿ ಕನಿಷ್ಟ 6 ಪ್ರತಿಶದಷ್ಟು ಮತ ಪಡೆದಿರಬೇಕು.
ದೆಹಲಿ, ಪಂಜಾಬ್, ಗೋವಾ ಮತ್ತು ಗುಜರಾತ್ ರಾಜ್ಯಗಳಲ್ಲಿ ರಾಜ್ಯ ಪಕ್ಷವಾಗಿರುವ ಆಮ್ ಆದ್ಮಿ ಪಕ್ಷ ಹೊರ ಹೊಮ್ಮಿದೆ. ಆಮ್ ಆದ್ಮಿ ಪಕ್ಷ ರಾಷ್ಟ್ರೀಯ ಪಕ್ಷವಾಗುವ ಎಲ್ಲಾ ಷರತ್ತುಗಳನ್ನು ಪೂರೈಸಿದ್ದರೂ ಸಹ ರಾಷ್ಟ್ರೀಯ ಸ್ಥಾನಮಾನ ಪಡೆಯಲು ವಿಳಂಬ ಆಗುತ್ತಿದೆ. ಇದನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಲಾಗಿತ್ತು.
ಆಮ್ ಆದ್ಮಿ ಪಕ್ಷದ ಅರ್ಜಿಯನ್ನು ಪುರಸ್ಕರಿಸಿದ ಕರ್ನಾಟಕ ಹೈಕೋರ್ಟ್ ಎಪ್ರಿಲ್ 13ರ ಒಳಗೆ ರಾಷ್ಟ್ರೀಯ ಪಕ್ಷದ ಮಾನ್ಯತೆಯನ್ನು ಆಮ್ ಆದ್ಮಿ ಪಕ್ಷಕ್ಕೆ ನೀಡಬೇಕೆಂದು ಚುನಾವಣಾ ಆಯೋಗಕ್ಕೆ ನಿರ್ದೇಶಿಸಿದೆ.

ಬೆಂಗಳೂರಿನಲ್ಲಿ ಸುಪ್ರೀಂ ಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ
ಬೆಂಗಳೂರಿನಲ್ಲಿ ಸುಪ್ರೀಂ ಕೋರ್ಟ್ ಪೀಠವನ್ನು ಸ್ಥಾಪನೆ ಕುರಿತು ಬೇರೆ ಪಕ್ಷಗಳು ಪ್ರತಿಕ್ರಿಯೆ ನೀಡಬೇಕು. ಇಲ್ಲವಾದರೆ ಒಂದು ವಾರದಲ್ಲಿ ಆಮ್ ಆದ್ಮಿ ಪಾರ್ಟಿ ಸರ್ವ ಪಕ್ಷ ಸಭೆ ಕರೆದು ತೀರ್ಮಾನ ತೆಗೆದುಕೊಳ್ಳಲಿದೆ ಎಂದು ನೀತಿ ಸಂಹಿತೆ ಜಾರಿಗೆ ಮುನ್ನ ಎಎಪಿ ರಾಜ್ಯ ಸಂವಹನಾ ಉಸ್ತುವಾರಿ ಬ್ರಿಜೇಶ್ ಕಾಳಪ್ಪ ಹೇಳಿದ್ದರು.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಅವರು, ಬೆಂಗಳೂರಿನ ಗಾಲ್ಫ್ ಕ್ಲಬ್ಗೆ ಸೇರಿದ 80 ಎಕರೆ ಜಾಗದಲ್ಲಿ ಸುಪ್ರೀಂ ಕೋರ್ಟ್ ಪೀಠ ಸ್ಥಾಪನೆಯಾಗಲಿದೆ ಎಂಬ ವದಂತಿಯು ಕೆಲ ವರ್ಷಗಳ ಹಿಂದೆ ವಾಟ್ಸಪ್ನಲ್ಲಿ ಹರಿದಾಡುತ್ತಿತ್ತು. ಇದಕ್ಕೆ ಸ್ಪಷ್ಟನೆ ನೀಡಿದ್ದ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು, ದೆಹಲಿಯ ಹೊರಗೆ ಸುಪ್ರೀಂ ಕೋರ್ಟ್ ಪೀಠ ಸ್ಥಾಪಿಸುವ ಅವಶ್ಯಕತೆ ಇಲ್ಲ ಎಂದು 2010ರಲ್ಲೇ ಸುಪ್ರೀಂ ಕೋರ್ಟ್ ನಿರ್ಣಯ ತೆಗೆದುಕೊಂಡಿರುವುದಾಗಿ ತಿಳಿಸಿದ್ದರು ಎಂದರು.
ಕರ್ನಾಟಕದಲ್ಲಿ ಪಕ್ಷಗಳಿಂದ ಸ್ಪಂದನೆ ಇಲ್ಲ
ಕಳೆದ ಮಾರ್ಚ್ 26ರಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ರವರು ಚೆನ್ನೈನಲ್ಲಿ ಸುಪ್ರೀಂ ಕೋರ್ಟ್ ಪೀಠ ಸ್ಥಾಪಿಸಬೇಕೆಂದು ಬೇಡಿಕೆ ಇಟ್ಟಿದ್ದಾರೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಧನಂಜಯ್ ಚಂದ್ರಚೂಡ್ ಹಾಗೂ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಸಮ್ಮುಖದಲ್ಲೇ ಎಂ.ಕೆ.ಸ್ಟಾಲಿನ್ ಈ ಬೇಡಿಕೆ ಇಟ್ಟಿದ್ದಾರೆ. ಇದಾಗಿ ಎರಡು ದಿನಗಳಾದರೂ ಕರ್ನಾಟಕದ ಯಾವುದೇ ಜನಪ್ರತಿನಿಧಿ ಇದಕ್ಕೆ ಪ್ರತಿಕ್ರಿಯಿಸಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.
ಪ್ರಮುಖ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಬೆಂಗಳೂರಿನಲ್ಲಿ ಸುಪ್ರೀಂ ಕೋರ್ಟ್ ಪೀಠ ಸ್ಥಾಪಿಸುವ ವಿಚಾರವನ್ನು ಹಗುರವಾಗಿ ಪರಿಗಣಿಸಿವೆ ಎಂದು ಅವರು ವಾಗ್ದಾಳಿ ನಡೆಸಿದರು. ಎಎಪಿ ಈ ಬಗ್ಗೆ ಮಾತನಾಡುದ ಎರಡೇ ದಿನಕ್ಕೆ ನೀತಿ ಸಂಹಿತೆ ಜಾರಿ ಆಯಿತು.












Click it and Unblock the Notifications