ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನಾಕಾರರಿಗೆ ರಾಜ್ಯ ಗೃಹ ಸಚಿವರ ಸಂದೇಶ
ಬೆಂಗಳೂರು, ಡಿಸೆಂಬರ್.20: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ರಾಜ್ಯದಲ್ಲೂ ತೀವ್ರ ವಿರೋಧ ವ್ಯಕ್ತವಾಗಿದೆ. ಗುರುವಾರ ಹೊತ್ತಿ ಉರಿದ ಬೆಂಗಳೂರು, ಮಂಗಳೂರಿನಲ್ಲಿ ಪರಿಸ್ಥಿತಿ ಇಂದು ಸ್ವಲ್ಪ ತಿಳಿಗೊಂಡಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವ ಬಸವರಾಜ ಬೊಮ್ಮಾಯಿ, ಮಂಗಳೂರಿನಲ್ಲಿ ಪರಿಸ್ಥಿತಿ ಶಾಂತಿಯುತವಾಗಿದೆ ಎಂದರು. ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಪ್ರತಿಭಟನೆಗೆ ಸಂಬಂಧಿಸಿದಂತೆ ಧಾರ್ಮಿಕ ಮುಖಂಡರ ಜೊತೆ ಚರ್ಚೆ ನಡೆಸುವುದಾಗಿ ಹೇಳಿದರು.
ಗುಜರಾತ್ ನಲ್ಲಿ ಖಾಕಿ ಮೇಲೆ ಕಲ್ಲು ತೂರಿದವರ ಬಂಧನ
ಗುರುವಾರವಷ್ಟೇ ಕೇಂದ್ರ ಸರ್ಕಾರದ ನೂತನ ಕಾಯ್ದೆ ವಿರುದ್ಧ ಮಂಗಳೂರು ಹೊತ್ತಿ ಉರಿದಿದ್ದು, ಇಂದು ಕಾಂಗ್ರೆಸ್ ನಾಯಕರು ಮಂಗಳೂರಿಗೆ ಭೇಟಿ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ನಾಯಕರ ಭೇಟಿ ಕುರಿತು ಯಾವುದೇ ಮಾಹಿತಿಯಿಲ್ಲ ಎಂದರು.
"ಶಾಂತಿ-ಸುವ್ಯವಸ್ಥೆ ವಿಚಾರದಲ್ಲಿ ರಾಜಕೀಯ ಸಲ್ಲದು"
ಮಂಗಳೂರಿನಲ್ಲಿ ಪರಿಸ್ಥಿತಿ ಇದೀಗ ಕೊಂಚ ತಿಳಿಗೊಂಡಿದೆ. ರಾಜ್ಯದಲ್ಲಿ ಶಾಂತಿ-ಸುವ್ಯವಸ್ಥೆಗೆ ಸಂಬಂಧಿಸಿದ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು ಎಂದು ಸಚಿವ ಬಸವರಾಜ ಬೊಮ್ಮಾಯಿ ಮನವಿ ಮಾಡಿಕೊಂಡರು. ಗುರುವಾರವಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿ ಮಾಡಿ ರಾಜ್ಯದಲ್ಲಿನ ಪರಿಸ್ಥಿತಿ ಬಗ್ಗೆ ಮಾಹಿತಿ ನೀಡಿದ್ದೇನೆ. ಶಾಂತಿಗೆ ಭಂಗ ಬಾರದಂತೆ ಎಚ್ಚರಿಕೆ ವಹಿಸಲು ಕೇಂದ್ರ ಸಚಿವರು ಸಲಹೆ ನೀಡಿದ್ದಾರೆ ಎಂದು ಹೇಳಿದರು.
ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ; ಯಡಿಯೂರಪ್ಪ ಮನವಿ ಏನು?
ಇನ್ನು, ಇತಿಹಾಸತಜ್ಞ ರಾಮಚಂದ್ರ ಗುಹಾ ಅವರ ಬಂಧನದ ಬಗ್ಗೆಯೂ ಮಾತನಾಡಿದ ಬೊಮ್ಮಾಯಿ, ಅವರ ಬಗ್ಗೆ ಬಹಳ ಗೌರವವಿದೆ ಎಂದರು. ಕೇಂದ್ರ ಸರ್ಕಾರ ಜಾರಿಗೊಳಿಸಿದ ಪೌರತ್ವ ತಿದ್ದುಪಡಿ ಕಾಯ್ದೆಯಲ್ಲಿ ಏನಾದರೂ ದೋಷವಿದ್ದಲ್ಲಿ, ಅವರನ್ನು ಕರೆದುಕೊಂಡು ಹೋಗಿ ನಮ್ಮ ಕೇಂದ್ರ ಸಚಿವರನ್ನು ಭೇಟಿ ಮಾಡಿಸಲು ಸಿದ್ಧನಿದ್ದೇನೆ. ಅವರ ಜೊತೆ ಸಭೆ ನಡೆಸಲು ಏರ್ಪಾಟು ಮಾಡುತ್ತೇನೆ. ಪ್ರತಿಭಟನೆ ಮತ್ತು ಹಿಂಸಾಚಾರ ಏನೂ ಪ್ರಯೋಜನವಾಗದು. ಹಿಂಸೆಯಿಂದ ಜನರಿಗೆ ಸಮಸ್ಯೆ ಆಗುತ್ತದೆ. ಹೀಗಾಗಿ ಅದಕ್ಕೆ ಅವಕಾಶ ಮಾಡಿಕೊಡಬೇಡಿ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮನವಿ ಮಾಡಿದ್ದಾರೆ.