ನಮ್ಮದು ಹಗರಣಮುಕ್ತ ಸರ್ಕಾರ: ಸಿದ್ದರಾಮಯ್ಯ
ಬೆಂಗಳೂರು ಫೆಬ್ರವರಿ 5: ಪ್ರಸ್ತುತ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಯಾವುದೇ ಭ್ರಷ್ಟಾಚಾರ ಪ್ರಕರಣಗಳಿಗೆ ಸಿಲುಕದೆ ದೇಶದಲ್ಲಿಯೇ ಹಗರಣಮುಕ್ತ ಸರ್ಕಾರವೆನಿಸಿಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಫೆ.4 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಪಟ್ಟಣದ ಶ್ರೀ ಚೆನ್ನಭೈರೇಗೌಡ ಕ್ರೀಡಾಂಗಣದಲ್ಲಿ ದಿ ಟೌನ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ನ ಶತಮಾನೋತ್ಸವ ಸಮಾರಂಭದ ಉದ್ಘಾಟನೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಭವನ, ರೈತ ಸಂಪರ್ಕ ಕೇಂದ್ರಗಳು ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಅವರು ಮಾತಾನಾಡಿದರು.
ಕ್ಷೀರಭಾಗ್ಯ, ವಿದ್ಯಾಸಿರಿ, ಅನ್ನಭಾಗ್ಯ, ಋಣಮುಕ್ತ, ರೈತರ ಸಾಲಮನ್ನಾ ಸೇರಿದಂತೆ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಎಲ್ಲಾ ವರ್ಗದ ಜನರ ಆಶೋತ್ತರಗಳನ್ನು ಈಡೇರಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು ಎಂದರಲ್ಲದೆ, ಮುಂದಿನ ಆಯವ್ಯಯದಲ್ಲಿ ಎಲ್ಲಾ ಬಿಪಿಎಲ್ ಹಾಗೂ ಎಪಿಎಲ್ ಕುಟುಂಬಗಳಿಗೆ ಉಚಿತ ಆರೋಗ್ಯ ಸೇವೆ ಒದಗಿಸುವ ಬಗ್ಗೆ ಘೋಷಿಸಲಾಗುವುದು ಎಂದು ತಿಳಿಸಿದರು.

ವೇದಿಕೆ ಕಾರ್ಯಕ್ರಮ ಆರಂಭಕ್ಕೂ ಮುನ್ನ ಮುಖ್ಯಮಂತ್ರಿಗಳು ನಗರಸಭೆ ವತಿಯಿಂದ ತಾಲ್ಲೂಕು ಕಚೇರಿ ಆವರಣದಲ್ಲಿ ಅಂದಾಜು ರೂ. 73.76 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಇಂದಿರಾ ಕ್ಯಾಂಟಿನ್ ಉದ್ಘಾಟಿಸಿದರು ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ, ನಗರಾಭಿವೃದ್ಧಿ, ಮೂಲಭೂತ ಸೌಕರ್ಯ ಮತ್ತು ವಕ್ಫ್ ಇಲಾಖೆ ಸಚಿವ ರೋಷನ್ ಬೇಗ್, ಚಿಕ್ಕಬಳ್ಳಾಪುರ ಲೋಕಸಭಾ ಸದಸ್ಯರಾದ ಡಾ.ಎಂ.ವೀರಪ್ಪಮೊಯಿಲಿ, ವಿಧಾನ ಪರಿಷತ್ ಸದಸ್ಯರಾದ ಎ.ಆರ್.ರಮೇಶ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ವಿ.ಪ್ರಸಾದ್, ಉಪಾಧ್ಯಕ್ಷರಾದ ಪಿ.ಎನ್.ಅನಂತಕುಮಾರಿ, ಜಿಲ್ಲಾಧಿಕಾರಿ ಎಸ.ಪಾಲಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಸಿಂಗ್, ಸಿಇಓ ಕೆ.ಎ.ದಯಾನಂದ್, ದಿ ಟೌನ್ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷರಾದ ಶಶಿಧರ, ವ್ಯವಸ್ಥಾಪಕರಾದ ಶಂಕರಪ್ಪ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸಿದ್ದರು. ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಹೊಸಕೋಟೆ ಶಾಸಕರಾದ ಎಂ.ಟಿ.ಬಿ.ನಾಗರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. (ಕೃಪೆ: ಕರ್ನಾಟಕ ವಾರ್ತೆ)











Click it and Unblock the Notifications