ಫೆ.11ರಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ವಿತರಣೆ
ಬೆಂಗಳೂರು, ಫೆಬ್ರವರಿ 6 : ಕರ್ನಾಟಕ ಮಾಧ್ಯಮ ಅಕಾಡೆಮಿಯ 2018ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ಅಕಾಡೆಮಿ ಪ್ರಕಟಿಸಿರುವ ಪುಸ್ತಕಗಳ ಲೋಕಾರ್ಪಣೆ ಸಮಾರಂಭವನ್ನು ಫೆಬ್ರವರಿ 11ರಂದು ಸೋಮವಾರ ಸಂಜೆ 5.30ಕ್ಕೆ ಬೆಂಗಳೂರಿನ ವಸಂತನಗರದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದೆ.
ಪತ್ರಿಕೋದ್ಯಮದಲ್ಲಿ ಜೀವಮಾನ ಸಾಧನೆಗೆ ನೀಡುವ ವಿಶೇಷ ಪ್ರಶಸ್ತಿಯೂ ಸೇರಿದಂತೆ 50 ಮಂದಿ ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು. ಇದರೊಂದಿಗೆ ವಿಶೇಷ ಪ್ರಶಸ್ತಿಗಳಾದ ಆಂದೋಲನ ಪತ್ರಿಕಾ ಸಂಸ್ಥೆಯವರು ಸ್ಥಾಪಿಸಿರುವ ಅತ್ಯುತ್ತಮ ಜಿಲ್ಲಾ ಪತ್ರಿಕೆಗೆ ನೀಡುವ 'ಆಂದೋಲನ' ಪ್ರಶಸ್ತಿ, ಅಭಿಮಾನಿ ಸಂಸ್ಥೆಯವರು ಸ್ಥಾಪಿಸಿರುವ 'ಅಭಿಮಾನಿ' ಹಾಗೂ 'ಅರಗಿಣಿ' ಪ್ರಶಸ್ತಿ, ಮೈಸೂರು ದಿಗಂತ ಪತ್ರಿಕಾ ಸಂಸ್ಥೆಯವರು ಸ್ಥಾಪಿಸಿರುವ 'ಮೈಸೂರು ದಿಗಂತ' ಪ್ರಶಸ್ತಿ ಹಾಗೂ ಪತ್ರಕರ್ತ ಕೆ. ಶಿವಕುಮಾರ್ ಸ್ಥಾಪಿಸಿರುವ 'ಡಾ.ಬಿ.ಆರ್. ಅಂಬೇಡ್ಕರ್ ಮೂಕನಾಯಕ' ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು.
ಮುಖ್ಯಮಂತ್ರಿಗಳಾದ ಎಚ್.ಡಿ. ಕುಮಾರಸ್ವಾಮಿಯವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಮಾಧ್ಯಮ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವಿವಿಧ ಬರಹಗಾರರು ಬರೆದಿರುವ ಪುಸ್ತಕಗಳ ಲೋಕಾರ್ಪಣೆಯನ್ನು ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ ಅವರು ಮಾಡಲಿದ್ದಾರೆ. ಪ್ರಶಸ್ತಿ ಪುರಸ್ಕೃತರ ಪರಿಚಯ ಪುಸ್ತಕವನ್ನು ಜಲ ಸಂಪನ್ಮೂಲ ಹಾಗೂ ಕನ್ನಡ ಸಂಸ್ಕೃತಿ ಸಚಿವರಾದ ಡಿ. ಕೆ ಶಿವಕುಮಾರ್ ಅವರು ಬಿಡುಗಡೆ ಮಾಡಲಿದ್ದಾರೆ.

ಸಮಾರಂಭದ ಅಧ್ಯಕ್ಷತೆಯನ್ನು ವಿಧಾನ ಸಭಾ ಸದಸ್ಯರು ಹಾಗೂ ಮಾಜಿ ಸಚಿವರಾದ ಆರ್. ರೋಷನ್ ಬೇಗ್ ಅವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾನ್ಯ ಲೋಕಸಭಾ ಸದಸ್ಯರಾದ ಪಿ.ಸಿ. ಮೋಹನ್ ಹಾಗೂ ಸರ್ಕಾರದ ಕಾರ್ಯದರ್ಶಿಗಳಾದ ಪಂಕಜ್ಕುಮಾರ್ ಪಾಂಡೆ ಭಾ.ಆ.ಸೇ., ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕರಾದ ಎಂ. ರವಿಕುಮಾರ್ ಭಾಗವಹಿಸಲಿದ್ದಾರೆ. ಆಶಯ ನುಡಿಯನ್ನು ಅಕಾಡೆಮಿ ಅಧ್ಯಕ್ಷರಾದ ಎಂ. ಸಿದ್ದರಾಜು ಅವರು ನೆರವೇರಿಸಲಿದ್ದಾರೆ.












Click it and Unblock the Notifications