DK Shivakumar:ಲೋಕಸಭಾ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಭುಗಿಲೆದ್ದ ಅಸಮಾಧಾನ, ಡಿಕೆಶಿ ಡಿನ್ನರ್ಗೆ ಹಲವರು ಚಕ್ಕರ್!
ಬೆಂಗಳೂರು, ಫೆಬ್ರವರಿ.25: ಮುಂಬರುವ ಲೋಕಸಭೆ ಚುನಾವಣೆ 2024 ಕುರಿತು ಚರ್ಚಿಸಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಾರ್ಯತಂತ್ರ ಸಭೆ ಆಯೋಜಿಸಿದ್ದರು. ತಮ್ಮ ಗೃಹ ಕಚೇರಿಯಲ್ಲಿ ಡಿನ್ನರ್ ಪಾರ್ಟಿ ಆಯೋಜಿಸಿದ್ದರು. ಆದರೆ, ಕೆಲವು ಸಚಿವರು ಈ ಭೋಜನಕೂಟಕ್ಕೆ ಹಾಜರಾಗಿಲ್ಲ. ಈ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಈ ಬಾರಿ ವಿಧಾನಸಭಾ ಚುನಾವನೆಯಲ್ಲಿ ಗೆದ್ದಂತೆಯೇ ಮತ್ತೆ ಭರ್ಜರಿ ಜಯ ಗಳಿಸಬೇಕು ಎಂಬ ಆಕಾಂಕ್ಷೆಯಲ್ಲಿದೆ. ಇದೇ ಕಾರಣಕ್ಕೆ ಹಲವು ಸಚಿವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ. ಆದರೆ, ಇದಕ್ಕೆ ಕೆಲವರು ರಾಷ್ಟ್ರ ರಾಜಕಾರಣಕ್ಕೆ ಬರಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ತಮಗೆ ರಾಷ್ಟ್ರ ರಾಜಕಾರಣಕ್ಕೆ ಹೋಗಲು ಇಷ್ಟವಿಲ್ಲ. ಆದರೆ, ತಮಗೆ ನೀಡಬೇಖಿರುವ ಕ್ಷೇತ್ರದಲ್ಲಿ ತಮ್ಮ ಮಕ್ಕಳಿಗೆ ಕಾಂಗ್ರೆಸ್ ಟಿಕೆಟ್ ನೀಡಲಿ ಎಂದು ಹೇಳಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಯೋಜಿಸಿದ್ದ ಔತಣಕೂಟಕ್ಕೆ ಹಲವರು ಗೈರಾಗಿದ್ದಾರೆ. ಈ ಮೂಲಕ ಕಾಂಗ್ರೆಸ್ನಲ್ಲಿ ಅಸಮಾಧಾನ ಭುಗಿಲೆದ್ದಿದ್ದು,ಇದು ಚುನಾವಣೆ ಮೇಲೆ ಭಾರಿ ಪ್ರಭಾವ ಬೀರಲಿದೆ.
ಡಿಕೆಶಿ ಡಿನ್ನರ್ಗೆ ಹಾಕರಾಗದ ಸಚಿವರು!
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಯೋಜಿಸಿದ್ದ ಔತಣಕೂಟಕ್ಕೆ ಗೈರಾದ ಸಚಿವರಲ್ಲಿ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಪ್ರಮುಖರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಇಬ್ಬರೂ ಡಾ.ಎಚ್.ಸಿ.ಮಹದೇವಪ್ಪ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿ ಎಂದು ಒತ್ತಾಯಿಸಿದ್ದಾರೆ.
ಇತ್ತೀಚೆಗಷ್ಟೇ ಸಿಎಂ ಮತ್ತು ಡಿಸಿಎಂಗೆ ಉತ್ತರಿಸಿದ ಸಚಿವ ಡಾ.ಎಚ್.ಸಿ.ಮಹದೇವಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಇಬ್ಬರೂ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿ, ಅದರಲ್ಲೂ ಹೆಚ್ಚಿನವರು ಈ ಅವಕಾಶಕ್ಕೆ ಅರ್ಹರು ಎಂದು ವ್ಯಂಗ್ಯವಾಡಿದ್ದರು.
ಬೆಳಗಾವಿ ಸ್ಥಾನಕ್ಕೆ ಸಂಭಾವ್ಯ ಅಭ್ಯರ್ಥಿ ಎಂದು ಹೆಸರು ಕೇಳಿಬರುತ್ತಿದ್ದ ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿ ಕೂಡ ಔತಣಕೂಟಕ್ಕೆ ಹಾಜರಾಗಿಲ್ಲ. ಸಚಿವರಾದ ಕೆ.ಎನ್.ರಾಜಣ್ಣ, ಬೈರತಿ ಸುರೇಶ್, ಸಂತೋಷ್ ಲಾಡ್, ಶರಣಬಸಪ್ಪ ದರ್ಶನಾಪುರ ಅವರು ಗೈರು ಹಾಜರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆದರೆ ಡಿಸಿಎಂ ಶಿವಕುಮಾರ್ ಬೆಂಬಲಿಗರು ಬಹುತೇಕ ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕೆಲವು ಮೊದಲೆ ಹಲವು ಕಾರ್ಯಕ್ರಮಗಳನ್ನು ಒಪ್ಪಿಕೊಂಡಿದ್ದ ಕಾರಣ ಅವರು ಬಂದಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ. ಭಾಗವಹಿಸಿದ್ದ ಸಚಿವರೊಂದಿಗೆ ಸಿಎಂ ಮತ್ತು ಡಿಸಿಎಂ ಇಬ್ಬರೂ ಆಯಾ ಲೋಕಸಭಾ ಕ್ಷೇತ್ರಗಳು ಮತ್ತು ಸಂಭಾವ್ಯ ಅಭ್ಯರ್ಥಿಗಳ ಬಗ್ಗೆ ಪ್ರತ್ಯೇಕವಾಗಿ ಚರ್ಚಿಸಿದ್ದಾರೆ.
ಇನ್ನು, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಇಬ್ಬರು ರಾಜ್ಯದಲ್ಲಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಲು 28 ಲೋಕಸಭಾ ಕ್ಷೇತ್ರಗಳಲ್ಲಿ 20 ಸ್ಥಾನಗಳನ್ನು ಗೆಲ್ಲಲು ಬಯಸುತ್ತಾರೆ. ಜೊತೆಗೆ ಲೋಕಸಭೆ ಚುನಾವಣೆಯ ನಂತರವೂ ತಮ್ಮ ಹುದ್ದೆಗಳಲ್ಲಿ ಮುಂದುವರಿಯಲು ಬಯಸುತ್ತಾರೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ.
ಮಾಜಿ ಕೇಂದ್ರ ಸಚಿವ ದಿಗ್ವಿಜಯ ಸಿಂಗ್ ಮತ್ತು ಕಾಂಗ್ರೆಸ್ನ ರಾಜ್ಯಸಭಾ ಅಭ್ಯರ್ಥಿ ಅಜಯ್ ಮಾಕನ್ ಕೂಡ ಔತಣಕೂಟದಲ್ಲಿ ಭಾಗವಹಿಸಿದ್ದರು. "ನಾವು ಲೋಕಸಭೆ ಚುನಾವಣೆ ಮತ್ತು ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರವಾಗಿ ಘೋಷಿಸಬೇಕಾದ ಅಗತ್ಯದ ಬಗ್ಗೆ ಚರ್ಚಿಸಿದ್ದೇವೆ. ಸ್ಕ್ರೀನಿಂಗ್ ಕಮಿಟಿ ಅಭ್ಯರ್ಥಿಗಳ ಆಯ್ಕೆ ಪಟ್ಟಿಯ ಬಗ್ಗೆ ಒಂದು ಸುತ್ತಿನ ಮಾತುಕತೆ ನಡೆಸಿದೆ" ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
"ಮತ್ತೊಂದು ಸಭೆ ನಡೆಸಿದ ನಂತರ, ಅಂತಿಮ ಪಟ್ಟಿಯು ಕೇಂದ್ರ ಚುನಾವಣಾ ಸಮಿತಿಗೆ (CEC) ಹೋಗುತ್ತದೆ. ಲೋಕಸಭೆ ಚುನಾವಣೆಯಲ್ಲಿ ಸಚಿವರನ್ನು ಅಭ್ಯರ್ಥಿಗಳಾಗಿ ಕಣಕ್ಕಿಳಿಸುವ ಕುರಿತು ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ" ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಸುದ್ದಿಗಾರರಿಗೆ ತಿಳಿಸಿದ್ದಾರೆ. ಆದರೆ, ಸಚಿವರು ಮಾತ್ರ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ತಯಾರಿಲ್ಲ.












Click it and Unblock the Notifications