Crackers Ban : ದೀಪಾವಳಿ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಪಟಾಕಿ ನಿಷೇಧಿಸಲು ಚಿಂತನೆ
ಬೆಳಕಿನ ಹಬ್ಬ ದೀಪಾವಳಿ ಸಂದರ್ಭದಲ್ಲಿ ಬೆಂಗಳೂರು ನಗರದಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಕರ್ನಾಟಕ ಗೃಹ ಸಚಿವ ಜಿ ಪರಮೇಶ್ವರ ಅವರು ಬುಧವಾರ ಹೇಳಿದ್ದಾರೆ.
ಅಕ್ಟೋಬರ್ ಆರಂಭದಲ್ಲಿ ಬೆಂಗಳೂರು ಸಮೀಪದ ಅತ್ತಿಬೆಲೆಯಲ್ಲಿ ಸಂಭವಿಸಿದ ಭೀಕರ ಬೆಂಕಿ ದುರಂತದಲ್ಲಿ 17 ಮಂದಿ ಸಾವನ್ನಪ್ಪಿದ ಹಿನ್ನಲೆಯಲ್ಲಿ ಪರಮೇಶ್ವರ್ ಅವರು ಈ ಹೇಳಿಕೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ವರ್ಷ ದೀಪಾವಳಿ ಸಂದರ್ಭದಲ್ಲಿ ಇಂತಹ ಬೆಂಕಿ ಅವಘಡಗಳು ಸಂಭವಿಸುತ್ತಿದ್ದು, ಮಂಗಳವಾರ ಕೂಡ ತಮಿಳುನಾಡಿನಲ್ಲಿ ಸುಮಾರು 12 ಮಂದಿ ಸಾವನ್ನಪ್ಪಿದ್ದಾರೆ, ಇಂತಹ ಘಟನೆಗಳು ನಡೆಯದಂತೆ ನಿಯಂತ್ರಿಸಲು ಮುಂದಿನ ದಿನಗಳಲ್ಲಿ ಹೊಸ ಕಾನೂನು ತರುತ್ತೇವೆ. ಈ ಘಟನೆ ನಮಗೆ ಪಾಠ ಕಲಿಸಿದೆ, ಅಗತ್ಯ ಬಿದ್ದರೆ ಈಗ ಇರುವ ಕಾನೂನಿಗೆ ತಿದ್ದುಪಡಿ ತರಲಾಗುವುದು" ಎಂದು ಹೇಳಿದರು.
ಪಟಾಕಿ ನಿಷೇಧಕ್ಕೆ ಚಿಂತನೆ
ಮುಂಬರುವ ದೀಪಾವಳಿ ಹಬ್ಬದಂದು ಬೆಂಗಳೂರು ನಗರದಲ್ಲಿ ಪಟಾಕಿ ಸಿಡಿಸಲು ಅವಕಾಶ ನೀಡಬೇಕೋ ಬೇಡವೋ ಎಂಬ ಬಗ್ಗೆ ಸರ್ಕಾರ ಚಿಂತನೆ ನಡೆಸಬೇಕಿದೆ ಎಂದು ಸಚಿವ ಪರಮೇಶ್ವರ್ ಹೇಳಿದರು.
"ಹಲವು ಅಮಾಯಕರು ಸಾಯುತ್ತಾರೆ, ಕೆಲವರು ದೃಷ್ಟಿ ಕಳೆದುಕೊಳ್ಳುತ್ತಾರೆ, ಇಂತಹ ಘಟನೆಗಳು ನಡೆಯುತ್ತವೆ. ದೆಹಲಿಯಲ್ಲಿ, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ, ಬೆಂಗಳೂರು ನಗರದಲ್ಲಿ ಇದನ್ನು ನಿಷೇಧಿಸಬಹುದೇ ಎಂದು ನಾವು ಪರಿಶೀಲಿಸುತ್ತೇವೆ." ಎಂದು ಹೇಳಿದರು.
ಅಕ್ಟೋಬರ್ 7 ರಂದು ಪಟಾಕಿ ಸಂಗ್ರಹಿಸಿದ್ದ ಖಾಸಗಿ ವ್ಯಾಪಾರಿಗಳಿಗೆ ಸೇರಿದ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡು 14 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಸಂದರ್ಭದಲ್ಲಿ ಮೂವರು ಸಾವನ್ನಪ್ಪುವ ಮೂಲಕ ಒಟ್ಟು 17 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಘಟನೆಯ ಕುರಿತು ಮ್ಯಾಜಿಸ್ಟ್ರೇಟ್ ತನಿಖೆಗೆ ಕರ್ನಾಟಕ ಸರ್ಕಾರ ಮಂಗಳವಾರ ಆದೇಶಿಸಿದೆ.
ತಮಿಳುನಾಡಿನಲ್ಲಿ ಪಟಾಕಿ ಉತ್ಪಾದನೆಯಲ್ಲಿ ಮೊದಲ ಸ್ಥಾನದಲ್ಲಿದ್ದು, ರಾಜ್ಯಕ್ಕೆ ಅಲ್ಲಿಂದಲೇ ಪಟಾಕಿ ಪೂರೈಕೆ ಆಗುತ್ತದೆ. ದೀಪಾವಳಿ ಸಂದರ್ಭದಲ್ಲಿ ಪಟಾಕಿ ಮಾರಾಟ ಉದ್ಯಮದಲ್ಲಿ ನೂರಾರು ಕೋಟಿ ರೂಪಾಯಿ ವ್ಯವಹಾರ ನಡೆಯುತ್ತದೆ. ಪಟಾಕಿ ನಿಷೇಧಿಸುವುದರಿಂದ ಪಟಾಕಿ ವ್ಯಾಪಾರಸ್ಥರು, ಉದ್ಯಮಿಗಳು, ಇದನ್ನೇ ನಂಬಿಕೊಂಡಿರುವ ಸಾವಿರಾರು ಕೂಲಿ ಕಾರ್ಮಿಕರು ಬೀದಿಗೆ ಬೀಳುತ್ತಾರೆ ಎನ್ನುವ ವಾದವೂ ಇದೆ.
ದೀಪಾವಳಿ ಸಂದರ್ಭದಲ್ಲಿ ಸರ್ಕಾರ ಪಟಾಕಿ ನಿಷೇಧಿಸಿದರೆ ವಿವಾದ ಉಂಟಾಗುವ ಸಾಧ್ಯತೆ ಕೂಡ ಇದೆ. ಎಲ್ಲಾ ರೀತಿಯಿಂದಲೂ ಚಿಂತನೆ ನಡೆಸಿ ಸರ್ಕಾರ ನಿರ್ಧಾರ ಮಾಡಲಿದೆ.












Click it and Unblock the Notifications