ಕರ್ನಾಟಕದ ಶನಿವಾರದ ಸುದ್ದಿಗಳ ತುಣುಕು ನೋಟ
ಬೆಂಗಳೂರು, ಅ.19 : ರಾಜ್ಯದಲ್ಲಿ 24 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಹೇಳಿದ್ದಾರೆ. ಶಾಲಾ-ಕಾಲೇಜುಗಳಲ್ಲಿ ಶಿಕ್ಷಕರ ಕೊರತೆ ತಪ್ಪಿಸಲು ಹನ್ನೆರಡು ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಶನಿವಾರ ಮಾತನಾಡಿದ ಕಿಮ್ಮನೆ ರತ್ನಾಕರ್, ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡುವ 371ನೇ ಜೆ ತಿದ್ದುಪಡಿ ಹೊರಬಿದ್ದ ತಕ್ಷಣ 6 ಸಾವಿರ ಶಿಕ್ಷಕರ ನೇಮಕಾತಿ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.
ಸದ್ಯ ಶಾಲಾ ಕಾಲೇಜುಗಳಲ್ಲಿ ಶಿಕ್ಷಕರ ಕೊರತೆ ಬಗೆಹರಿಸಲು 12 ಸಾವಿರ ಅತಿಥಿ ಶಿಕ್ಷರನ್ನು ನೇಮಕ ಮಾಡಿಕೊಳ್ಳಲಾಗಿದೆ. ಈ ವರ್ಷ 4 ಸಾವಿರ ಶಿಕ್ಷಕರು ನಿವೃತ್ತರಾಗಲಿದ್ದು, ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಅವರ ಸೇವೆ ಮುಂದುವರೆಸಲಾಗುವುದು ಎಂದರು.
ಶಾಲೆ ಮತ್ತು ಕಾಲೇಜುಗಳಿಗೆ ಅಗತ್ಯವಿರುವ ಶಿಕ್ಷಕೇತರ ಸಿಬ್ಬಂದಿ ಕುರಿತು ಇಲಾಖೆ ಮಾಹಿತಿ ಸಂಗ್ರಹಿಸುತ್ತದೆ. ಸಿಬ್ಬಂದಿ ನೇಮಕಕ್ಕೆ ಕುರಿತಂತೆ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗುತ್ತದೆ. ಅದಲ್ಲಿಂದ ಒಪ್ಪಿಗೆ ದೊರೆತ ತಕ್ಷಣ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಸಚಿವರ ಹೇಳಿದರು. (ಶನಿವಾರದ ಇತರ ಸುದ್ದಿಗಳು)

24 ಸಾವಿರ ಶಿಕ್ಷಕರ ಹುದ್ದೆ ಖಾಲಿ ಇದೆ
ರಾಜ್ಯದಲ್ಲಿ 24 ಸಾವಿರ ಶಿಕ್ಷಕರ ಹುದ್ದೆ ಖಾಲಿ ಇದೆ. ಶಾಲಾ ಕಾಲೇಜುಗಳಲ್ಲಿ ಶಿಕ್ಷಕರ ಕೊರತೆ ತಪ್ಪಿಸಲು 12 ಸಾವಿರ ಅತಿಥಿ ಉಪನ್ಯಾಸಕರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಈ ವರ್ಷದ ಶೈಕ್ಷಣಿಕ ಅವಧಿ ಅಂತ್ಯದವರೆಗೆ ಶಿಕ್ಷಕರ ಸೇವೆಯನ್ನು ಮುಂದುವರೆಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಹೇಳಿದ್ದಾರೆ.

ಭೂಮಿ ಪರಭಾರೆ ಬೇಡ
ಗಗನಚುಕ್ಕಿ ಮತ್ತು ಭರಚುಕ್ಕಿ ಜಲಪಾತಗಳ ಸುತ್ತಲಿನ 15 ಸಾವಿರ ಎಕರೆ ಭೂಮಿಯನ್ನು ಖಾಸಗಿಯವರಿಗೆ ಪರಭಾರೆ ಮಾಡಲು ಚಾಮರಾಜನಗರ ಜಿಲ್ಲಾಧಿಕಾರಿ ನಿರ್ಧರಿಸಿದ್ದಾರೆ. ಇದರ ಹಿಂದೆ ಸರ್ಕಾರದ ಕೈವಾಡವಿದೆ ಎಂದು ವಿಧಾನಪರಿಷತ್ ಸದಸ್ಯ ಗೋ.ಮಧುಸೂದನ್ ಆರೋಪಿಸಿದ್ದಾರೆ. ಮೈಸೂರಿನಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ಹೈಕೋರ್ಟ್ ಆದೇಶವನ್ನು ಮೀರಿ ಜಲಪಾತದ ಸುತ್ತಲಿನ 15 ಸಾವಿರ ಎಕರೆ ಭೂಮಿಯನ್ನು ಖಾಸಗಿ ಅವರಿಗೆ ಪರಭಾರೆ ಮಾಡಲು ಜಿಲ್ಲಾಡಳಿತ ಸಜ್ಜಾಗಿದೆ ಎಂದು ಅವರು ದೂರಿದ್ದಾರೆ.

ಸಾಮಾಜಿಕ ತಾಣಗಳಲ್ಲಿ ಪ್ರಚಾರ
2014ರ ಲೋಕಸಭೆ ಚುನಾವಣೆಯ ಪ್ರಚಾರ ಕಾರ್ಯಕ್ಕೆ ಸಾಮಾಜಿಕ ಜಾಲತಾಣಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ಮಾಜಿ ಸಚಿವ ಅರವಿಂದ ಲಿಂವಾವಳಿ ಹೇಳಿದ್ದಾರೆ. ಶನಿವಾರ ಪಕ್ಷದ ಕಚೇರಿಯಲ್ಲಿ ನಡೆದ ಸಂವಹನ ಪ್ರಕೋಷ್ಟದ ರಾಜ್ಯ ಕಾರ್ಯಕಾರಣಿ ಉದ್ಘಾಟಿಸಿ ಮಾತನಾಡಿದ ಅವರು, ಯುವಜನರನ್ನು ತಲುಪಲು ಸಾಮಾಜಿಕ ಜಾಲತಾಣಗಳಿಂದ ಮಾತ್ರ ಸಾಧ್ಯ. ಆದ್ದರಿಂದ ಪಕ್ಷದ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳನ್ನು ಪ್ರಚಾರಕ್ಕೆ ಬಳಸಿಕೊಳ್ಳಬೇಕೆಂದು ಕರೆ ನೀಡಿದರು.

ವಾಟಾಳ್ ಏಕಾಂಗಿ ಹೋರಾಟ
ಬೆಳವಾವಿಯಲ್ಲಿ ನಿರ್ಮಾಣಗೊಂಡಿರುವ ಸುವರ್ಣ ವಿಧಾನಸೌಧ ಕಟ್ಟದ ಅನಾಥವಾಗಿದೆ. ಉತ್ತರ ಕರ್ನಾಟಕ ಜನರ ಸಮಸ್ಯೆ ಬಗೆಹರಿಸಲು ನಿರ್ಮಿಸಿದ ಸೌಧದ ಉದ್ದೇಶ ನೆರವೇರುತ್ತಿಲ್ಲ ಎಂದು ಆರೋಪಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಸುವರ್ಣವಿಧಾನಸೌಧದ ಮುಂದೆ ಶನಿವಾರ ಏಕಾಂಗಿ ಪ್ರತಿಭಟನೆ ನಡೆಸಿದರು. ಸರ್ಕಾರಿ ಕಚೇರಿಗಳನ್ನು ಇಲ್ಲಿಗೆ ಸ್ಥಳಾಂತರ ಮಾಡಬೇಕು ಮತ್ತು ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳಿಗೆ ಸೌಧ ಪರಿಹಾರ ಸೂಚಿಸುವಂತಾಗಬೇಕು ಎಂದು ವಾಟಾಳ್ ಆಗ್ರಹಿಸಿದರು. ಐವರು ಸಚಿವರು ಪ್ರತಿ ತಿಂಗಳು ಸುವರ್ಣ ವಿಧಾನಸೌಧಕ್ಕೆ ಆಗಮಿಸುವಂತಾಗಬೇಕೆಂದು ಅವರು ಒತ್ತಾಯಿಸಿದರು.

ಮೇನಕಾ ವಿರುದ್ಧ ಸರ್ಕಸ್ ಮಾಲೀಕರ ಆರೋಪ
ಸರ್ಕಸ್ ನಲ್ಲಿರುವ ಪ್ರಾಣಿಗಳಿಗೆ ಕಿರುಕುಳ ನೀಡುತ್ತಿದ್ದೇವೆ ಎಂದು ಪ್ರಾಣಿದಯಾ ಸಂಘದ ರಾಷ್ಟ್ರೀಯ ಅಧ್ಯಕ್ಷೆ ಮೇನಕಾ ಗಾಂಧಿ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಜಂಬೂ ಸರ್ಕಸ್ ವ್ಯವಸ್ಥಾಪಕರಾದ ಬಾಬು ಆರೋಪಿಸಿದ್ದಾರೆ. ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಸರ್ಕಾರಿ ವೈದ್ಯರು ಪ್ರತಿದಿನ ನಮ್ಮ ಸರ್ಕಸ್ ಗೆ ಭೇಟಿ ನೀಡಿ ಪ್ರಾಣಿಗಳ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ. ಪ್ರಾಣಿಗಳು ಆರೋಗ್ಯವಾಗಿವೆ. ಆದರೆ, ಎನ್ ಜಿಓವೊಂದು ನಮ್ಮ ವಿರುದ್ಧ ಪ್ರಾಣಿದಯಾ ಸಂಘಕ್ಕೆ ದೂರು ನೀಡಿದೆ. ಮೇನಕಾ ಗಾಂಧಿ ಅವರು ಪ್ರಾಣಿಗಳಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ವರದಿ ನೀಡುವಂತೆ ವೈದ್ಯರಿಗೆ ಒತ್ತಡ ಹೇರುತ್ತಿದ್ದಾರೆ ಎಂದು ಅವರು ದೂರಿದ್ದಾರೆ.












Click it and Unblock the Notifications