ಪ್ರತಿ ಜಿಲ್ಲೆಯಲ್ಲೂ ವಿಧಿ ವಿಜ್ಞಾನ ಪ್ರಯೋಗಾಲಯ ತೆರೆಯಲು ಚಿಂತನೆ: ಗೃಹ ಸಚಿವ ಬೊಮ್ಮಾಯಿ
ಬೆಂಗಳೂರು, ಏಪ್ರಿಲ್ 02 : ಅಪರಾಧ ಪ್ರಕರಣಗಳ ತ್ವರಿತ ಪತ್ತೆಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಗೊಂದು ವಿಧಿ ವಿಜ್ಞಾನ ಪ್ರಯೋಗಾಲಯ ತೆರೆಯಲು ಚಿಂತನೆ ನಡೆದಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನ ಕೋರಮಂಗಲ ಕೆಎಸ್ ಆರ್ಪೈ ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಸೈಬರ್ ಅಪರಾಧ ಕೃತ್ಯಗಳನ್ನು ಪತ್ತೆ ಮಾಡುವಲ್ಲಿ ರಾಜ್ಯ ಪೊಲೀಸರು ದಕ್ಷತೆ ಮರೆದಿದ್ದಾರೆ. ಡ್ರಗ್ಸ್ ಜಾಲವನ್ನು ಪತ್ತೆ ಮಾಡುವಲ್ಲಿ ನಮ್ಮ ಪೊಲೀಸರು ಯಶಸ್ವಿಯಾಗಿದ್ದಾರೆ. ಇದೀಗ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಕಾಲೇಜು ಹೆಣ್ಣು ಮಕ್ಕಳಿಗೆ ಸ್ವಯಂ ರಕ್ಷಣೆ ಬಗ್ಗೆ ಪೊಲೀಸ್ ಕಡೆಯಿಂದಲೇ ತರಬೇತಿ ನೀಡುವ ಕಾರ್ಯಕ್ರಮ ಇಲಾಖೆಯಿಂದ ಹಮ್ಮಿಕೊಂಡಿದ್ದೇವೆ. ನಮ್ಮ ಪೊಲೀಸರು ಯಾವುದೇ ಸವಾಲನ್ನು ಮೆಟ್ಟಿ ನಿಲ್ಲುತ್ತಾರೆ. ಕ್ಲಿಷ್ಟ ಪರಿಸ್ಥಿತಿಯಲ್ಲೂ ಕ್ಷಾಣಾಕ್ಷತೆ ಮರೆದಿದ್ದಾರೆ. ತೀರಾ ಕಷ್ಟಕರ ಪ್ರಕರಣಗಳನ್ನು ಸಹ ನಮ್ಮ ಪೊಲೀಸರು ಬಗೆ ಹರಿಸಿದ್ದಾರೆ ಎಂದು ಶ್ಲಾಘಿಸಿದರು.

ರಮೇಶ್ ಜಾರಕಿಹೊಳಿ ಪ್ರಕರಣದಲ್ಲಿ ಎಸ್ಐಟಿ ಬಗ್ಗೆ ಕೇಳಿ ಬಂದ ಟೀಕೆ ಕುರಿತು ಸೂಕ್ಷ್ಮವಾಗಿ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು, ಇವತ್ತಿನ ಪರಿಸ್ಥಿತಿಯಲ್ಲಿ ಎಲ್ಲಾ ಕಡೆಯಿಂದ ಟೀಕೆ ಟಿಪ್ಪಣೆ ಬರುತ್ತಿದೆ. ನಮ್ಮ ಗುರಿ ದಾರಿ ತಪ್ಪಿಸುವ ಪ್ರಯತ್ನಗಳು ನಡೆಯುತ್ತಿವೆ. ಆದ್ರೆ ನಮ್ಮ ಪೊಲೀಸರು ತಾಳ್ಮೆಯಿಂದ ಟೀಕೆ ಟಿಪ್ಪಣಿಗಳನ್ನು ಸಹಿಸಿ ಉತ್ತರ ಕೊಡುವ ವಿಶ್ವಾಸವಿದೆ ಎಂದು ಬೊಮ್ಮಾಯಿ ಹೇಳಿದರು.

Recommended Video
ಇದಕ್ಕೂ ಮೊದಲು ಸಮಾರಂಭ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಹಬ್ಬ ಹರಿದಿನ ಬಿಟ್ಟರೆ ರಜೆ ಇಲ್ಲದೇ ಜನರನ್ನು ಕಾಯುವ ಪೊಲೀಸರಿಗ ಮೊದಲು ನಾನು ಅಭಿನಂದನೆ ಸಲ್ಲಿಸುತ್ತೇನೆ. ದೆಶದಲ್ಲಿಯೇ ಕರ್ನಾಟಕ ಪೊಲೀಸರಿಗೆ ಒಳ್ಳೆಯ ಹೆಸರಿದೆ. ಕಾನೂನು ಸುವ್ಯವಸ್ಥೆ ಪಾಲನೆ ಮತ್ತು ತಂತ್ರಜ್ಞಾನ ಬಳಕೆಯಲ್ಲಿ ನಮ್ಮ ಕರ್ನಾಟಕ ಪೊಲೀಸರು ಮುಂಚೂಣಿಯಲ್ಲಿದ್ದಾರೆ. ನಿಮ್ಮ ಸೇವೆ ಸದಾ ಕಾಲಕ್ಕೂ ಮಾದರಿಯಾಗಿರಲಿ ಎಂದು ಅಭಿನಂದನೆ ಸಲ್ಲಿಸಿದರು. ಕರ್ನಾಟಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪೊಲೀಸ್ ಪದಕವನ್ನು ನೀಡಿ ಗೌರವಿಸಲಾಯಿತು.












Click it and Unblock the Notifications