ಆಸ್ಪತ್ರೆಯಿಂದ ನಾಪತ್ತೆ ಸುದ್ದಿ: ಶಾಸಕ ಬಿ ನಾಗೇಂದ್ರ ಸ್ಪಷ್ಟನೆ
ಬೆಂಗಳೂರು, ಜುಲೈ 20: ಎದೆನೋವಿನ ಕಾರಣ ಆಸ್ಪತ್ರೆಗೆ ದಾಖಲಾಗಿರುವ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ. ನಾಗೇಂದ್ರ ಅವರು ಆಸ್ಪತ್ರೆಯಿಂದ ನಾಪತ್ತೆಯಾಗಿದ್ದಾರೆ ಎಂಬ ಸುದ್ದಿ ಹರಡಿತ್ತು. ಆದರೆ, ಇದು ಸತ್ಯವಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಖಾಸಗಿ ವಾಹಿನಿಯೊ೦ದರೊಂದಿಗೆ ಮಾತನಾಡಿದ ನಾಗೇಂದ್ರ, ತಾವು ಎಲ್ಲಿಗೂ ಹೋಗಿಲ್ಲ. ಆಸ್ಪತ್ರೆಯಲ್ಲಿಯೇ ಇರುವುದಾಗಿ ತಿಳಿಸಿದ್ದಾರೆ.
ನಾಗೇಂದ್ರ ಅವರು ಹೆಬ್ಬಾಳ ಬಳಿಯ ಆಸ್ಪತ್ರೆಯೊಂದರಲ್ಲಿ ಜುಲೈ 12ರಿಂದ ದಾಖಲಾಗಿದ್ದರು. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರ ಆರೋಗ್ಯ ವಿಚಾರಿಸಿದ್ದರು. ವಿಧಾನಸಭೆ ಕಲಾಪ ಆದ ದಿನದಿಂದಲೂ ಅವರು ಸದನಕ್ಕೆ ಹಾಜರಾಗಿರಲಿಲ್ಲ.

ವಿಶ್ವಾಸಮತ ಯಾಚನೆಯ ಸಂದರ್ಭದಲ್ಲಿ ಸದನಕ್ಕೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಅವರು ತಿಳಿಸಿದ್ದರು. ಆದರೆ, ಶುಕ್ರವಾರ ರಾತ್ರಿ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ನಾಪತ್ತೆಯಾಗಿದ್ದಾರೆ. ಯಾರ ಫೋನ್ ಸಂಪರ್ಕಕ್ಕೂ ಸಿಗುತ್ತಿಲ್ಲ ಎಂದು ಹೇಳಲಾಗಿತ್ತು. ಅತೃಪ್ತ ಶಾಸಕರ ಪಟ್ಟಿಯಲ್ಲಿ ನಾಗೇಂದ್ರ ಅವರ ಹೆಸರೂ ಇದ್ದಿದ್ದರಿಂದ ಇದಕ್ಕೆ ಮತ್ತಷ್ಟು ಪುಷ್ಟಿ ದೊರಕಿತ್ತು.
'ನಾನು ನಾಗೇಂದ್ರ ಅವರೊಂದಿಗೇ ಇದ್ದೇನೆ. ಅವರು ಆರೋಗ್ಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ' ಎಂದು ಗೃಹ ಸಚಿವ ಎಂಬಿ ಪಾಟೀಲ್ ಅವರು ವಾಹಿನಿಗಳಿಗೆ ಸ್ಪಷ್ಟಪಡಿಸಿದ್ದಾರೆ. ನಾಗೇಂದ್ರ ಅವರೊಂದಿಗೆ ಜಮೀರ್ ಅಹ್ಮದ್ ಕೂಡ ಸಂಪರ್ಕದಲ್ಲಿ ಇದ್ದಾರೆ ಎನ್ನಲಾಗಿದೆ.












Click it and Unblock the Notifications