ಆರೋಪಗಳ ಮೇಲೆ ಆರೋಪ: 'ವಿಷಕಂಠ'ನಾದ ಸಿದ್ದರಾಮಯ್ಯ!
ಬೆಂಗಳೂರು, ಜುಲೈ 25: 'ಆರೋಪಗಳ ವಿಷ ಕುಡಿದು ಕುಡಿದು ನಾನು ವಿಷಕಂಠನಾಗಿದ್ದೇನೆ' ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ವಿರುದ್ಧದ ಆರೋಪಗಳಿಗೆ ಮಾರ್ಮಿಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
'ಸಿದ್ದರಾಮಯ್ಯ ಅವರು ನಮ್ಮ ನಾಯಕರು. ಅವರು ಹೇಳಿದಂತೆಯೇ ಯಾರ ಸಂಪರ್ಕಕ್ಕೂ ಸಿಗದೆ ದೂರದಲ್ಲಿದ್ದೇವೆ' ಎಂದು ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಅವರು ಬುಧವಾರ ರಾತ್ರಿ ಹೇಳಿಕೆ ನೀಡಿದ್ದರು ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.
ಇದು ಶಾಸಕರ ರಾಜೀನಾಮೆ ಮತ್ತು ಅದರ ಸುತ್ತಲೂ ನಡೆದಿರುವ ನಡೆದಿರುವ ಘಟನೆಗಳ ಸೂತ್ರಧಾರ ತಾವೇ ಎಂಬ ಅನುಮಾನ ಮೂಡಿಸುವಂತಿದೆ ಎಂದು ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.
ರಾಜಕೀಯ ವಲಯದಲ್ಲಿ ಈ ಕುರಿತು ಹಲವು ಚರ್ಚೆಗಳು ನಡೆದಿವೆ. ಸಿದ್ದರಾಮಯ್ಯ ಅವರಿಗೆ ಆಪ್ತರಾಗಿದ್ದ, ಅವರೊಟ್ಟಿಗೆ ಗುರುತಿಸಿಕೊಂಡಿದ್ದ ಶಾಸಕರು ಕೂಡ ರಾಜೀನಾಮೆ ನೀಡಿರುವ ಅತೃಪ್ತರ ಬಣದಲ್ಲಿ ಸೇರಿಕೊಂಡಿರುವುದು ಈ ಆರೋಪಗಳನ್ನು ಮತ್ತಷ್ಟು ಬಲಪಡಿಸಿವೆ. ಆದರೆ, ಅತೃಪ್ತ ಶಾಸಕರಲ್ಲಿ ತಮ್ಮ ಆಪ್ತರಿದ್ದರೂ ಪಕ್ಷಕ್ಕೆ ಹಾಗೂ ಸರ್ಕಾರಕ್ಕೆ ದ್ರೋಹ ಮಾಡಿದವರನ್ನು ಅನರ್ಹಗೊಳಿಸದೆ ಬಿಡುವುದಿಲ್ಲ. ಪ್ರಳಯವಾದರೂ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಸಿದ್ದರಾಮಯ್ಯ ಬಹಿರಂಗವಾಗಿ ಹೇಳಿದ್ದಾರೆ.
ಶಿವರಾಮ್ ಹೆಬ್ಬಾರ್ ಅವರು ನೀಡಿದ್ದಾರೆ ಎನ್ನಲಾದ ಹೇಳಿಕೆ ಬಗ್ಗೆ ಅವರು ಅಸಮಾಧಾನ ಮತ್ತು ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ಗಳನ್ನು ಮಾಡಿದ್ದಾರೆ.

ನನ್ನ ಮುಂದೆ ಬಂದು ಹೇಳಲಿ
'ಸಿದ್ದರಾಮಯ್ಯನವರು ನಮ್ಮ ನಾಯಕರು, ಅವರಿಂದಾಗಿಯೇ ನಾವು ರಾಜೀನಾಮೆ ಕೊಟ್ಟಿರುವುದು' ಎಂದು ಕೆಲವು ಅತೃಪ್ತ ಶಾಸಕರು ನೀಡಿದ್ದಾರೆನ್ನಲಾದ ಹೇಳಿಕೆಗಳು ಮಾಧ್ಯಮಗಳಲ್ಲಿ ವರದಿಯಾಗುತ್ತಿವೆ. ಇದು ಸಂಪೂರ್ಣ ಸುಳ್ಳು ಮತ್ತು ದುರುದ್ದೇಶಪೂರಿತ. ಈ ಮಾತನ್ನು ಅವರು ನನ್ನ ಮುಂದೆ ಬಂದು ಹೇಳಲಿ ಅದಕ್ಕೆ ತಕ್ಕ ಉತ್ತರ ಕೊಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಹಿಂದೆ ಯಾರೋ ಸಂಚುಕೋರರು ಇದ್ದಾರೆ
'ಸಿದ್ದರಾಮಯ್ಯನವರು ನಮ್ಮ ನಾಯಕರು' ಎಂದು ಅತೃಪ್ತ ಶಾಸಕರು ಹೇಳಿಕೆ ನೀಡಿದ್ದರೆ ಅವರಿಗೆ ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳುವ ದುರುದ್ದೇಶ ಇರಬಹುದು. ಅವರು ನೀಡದೆ ಇದ್ದ ಹೇಳಿಕೆಯನ್ನು ಮಾಧ್ಯಮಗಳು ವರದಿ ಮಾಡುತ್ತಿದ್ದರೆ ಇದರ ಹಿಂದೆ ಯಾರೋ ಸಂಚುಕೋರರು ಇದ್ದಾರೆಂದು ಅರ್ಥ. ಸತ್ಯ ಬಯಲಾಗುವ ಕಾಲ ಬಂದೇ ಬರುತ್ತದೆ ಎಂದು ತೀಕ್ಷ್ಣವಾಗಿ ಹೇಳಿದ್ದಾರೆ.

ಆರೋಪದ ವಿಷ ಕುಡಿದು ವಿಷಕಂಠನಾಗಿದ್ದೇನೆ
"ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಕೂಡಾ ನನ್ನ ಮೇಲೆ ಸುಳ್ಳು ಆರೋಪಗಳ ಸುರಿಮಳೆ ಆಗಿವೆ. ನನ್ನ ರಾಜಕೀಯ ಜೀವನದಲ್ಲಿ ಇವೆಲ್ಲ ಮೊದಲನೆಯದಲ್ಲ, ಬಹುಶ: ಕೊನೆಯದೂ ಅಲ್ಲ. ಇಂತಹ ಸುಳ್ಳು ಆರೋಪಗಳ ವಿಷಕುಡಿದು, ಕುಡಿದು ನಾನು ವಿಷಕಂಠನ್ನಾಗಿದ್ದೇನೆ. ಕೊನೆಗೆ ಸತ್ಯವೇ ಗೆಲ್ಲುವುದು. ಸತ್ಯಮೇವ ಜಯತೇ!" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ರಾಹುಲ್ ಹೇಳಿದ್ದು ಯಾರಿಗೆ?
"ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಕೂಟವು ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ದಿನದಿಂದ ಪಕ್ಷದೊಳಗಿನ ಹಾಗೂ ಹೊರಗಿನ ಸ್ವಹಿತಾಸಕ್ತಿಗಳಿಗೆ ಗುರಿಯಾಗಿದೆ. ಈ ಮೈತ್ರಿ ಕೂಟವನ್ನು ತಮ್ಮ ಅಧಿಕಾರದ ಹಾದಿಯ ಅಡೆತಡೆ, ಆತಂಕ ಎಂದು ಅವರು ಭಾವಿಸಿದ್ದರು. ಅವರ ದುರಾಸೆ ಇಂದು ಗೆದ್ದಿದೆ. ಪ್ರಜಾಪ್ರಭುತ್ವ, ಪ್ರಾಮಾಣಿಕತೆ ಹಾಗೂ ಕರ್ನಾಟಕದ ಜನರು ಸೋತಿದ್ದಾರೆ" ಎಂದು ರಾಹುಲ್ ಗಾಂಧಿ ಅವರು ಟ್ವೀಟ್ ಮಾಡಿದ್ದರು. ಪಕ್ಷದೊಳಗಿನ ಸ್ವ ಹಿತಾಸಕ್ತಿ ಎಂಬ ಪದವು ಸಿದ್ದರಾಮಯ್ಯ ಅವರನ್ನು ಉದ್ದೇಶಿಸಿದ್ದು ಎಂದು ವ್ಯಾಖ್ಯಾನಿಸಲಾಗಿದೆ.












Click it and Unblock the Notifications