ನಾಳೆ ನನ್ನೆದುರು ಹಾಜರಾಗಿ: ಅತೃಪ್ತ ಶಾಸಕರಿಗೆ ಸ್ಪೀಕರ್ ನೋಟಿಸ್
ಬೆಂಗಳೂರು, ಜುಲೈ 22: ರಾಜೀನಾಮೆ ನೀಡಿರುವ ಅತೃಪ್ತ ಶಾಸಕರಿಗೆ ಸ್ಪೀಕರ್ ಕಚೇರಿಯಿಂದ ನೋಟಿಸ್ ನೀಡಲಾಗಿದೆ.
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕಾಂಗ್ರೆಸ್ ಮತ್ತು ಜೆಡಿಎಸ್ನ ಎಲ್ಲ 15 ಶಾಸಕರಿಗೂ ನೋಟಿಸ್ ನೀಡಲಾಗಿದೆ. ವಿಶ್ವಾಸಮತ ಯಾಚನೆ ಮಾಡುವವರೆಗೂ ಬೆಂಗಳೂರಿಗೆ ಬರುವುದಿಲ್ಲ ಎಂದು ಮುಂಬೈನಲ್ಲಿರುವ ಅತೃಪ್ತ ಶಾಸಕರು ಪಟ್ಟು ಹಿಡಿದಿದ್ದಾರೆ. ಅವರ ಕಚೇರಿಗಳಿಗೆ ನೋಟಿಸ್ ಕಳುಹಿಸಲಾಗಿದೆ.
ಪಕ್ಷದ ಸೂಚನೆಗಳನ್ನು ಮೀರಿ ರಾಜೀನಾಮೆ ನೀಡಿರುವುದಕ್ಕಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಸ್ಪೀಕರ್ ಅವರಿಗೆ ದೂರು ನೀಡಿದ್ದವು. ಅದರ ಆಧಾರದಲ್ಲಿ ನೋಟಿಸ್ ನೀಡಲಾಗಿದೆ. ಪಕ್ಷಾಂತರ ನಿಷೇಧ ದೂರಿನ ಹಿನ್ನೆಲೆಯಲ್ಲಿ ನಿಮ್ಮನ್ನು ಏಕೆ ಅನರ್ಹತೆ ಮಾಡಬಾರದು ಎಂದು ಸ್ಪೀಕರ್ ರಮೇಶ್ ಕುಮಾರ್ ಪ್ರಶ್ನಿಸಿದ್ದಾರೆ.

ಮಂಗಳವಾರ ಬೆಳಿಗ್ಗೆ 11 ಗಂಟೆಯ ಒಳಗೆ ತಮ್ಮ ಮುಂದೆ ಹಾಜರಾಗುವಂತೆ ಸ್ಪೀಕರ್ ರಮೇಶ್ ಕುಮಾರ್ ಅವರು ಸೂಚನೆ ನೀಡಿದ್ದಾರೆ.
ಕಾಂಗ್ರೆಸ್ನ 12 ಅತೃಪ್ತ ಶಾಸಕರಾದ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಯಶವಂತಪುರ ಶಾಸಕ ಎಸ್ಟಿ ಸೋಮಶೇಖರ್, ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್, ಕೆಆರ್ ಪುರ ಶಾಸಕ ಭೈರತಿ ಬಸವರಾಜ್, ಅಥಣಿ ಶಾಸಕ ಮಹೇಶ್ ಕುಮಟಳ್ಳಿ, ಹಿರೇಕೆರೂರು ಶಾಸಕ ಬಿ.ಸಿ. ಪಾಟೀಲ್, ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ, ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್, ರಾಣೆಬೆನ್ನೂರು ಶಾಸಕ ಆರ್. ಶಂಕರ್, ಶಿವಾಜಿನಗರ ಶಾಸಕ ರೋಷನ್ ಬೇಗ್, ವಿಜಯನಗರ ಶಾಸಕ ಆನಂದ್ ಸಿಂಗ್ ಮತ್ತು ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಅವರಿಗೆ ನೋಟಿ್ ನೀಡಲಾಗಿದೆ.
ಜೆಡಿಎಸ್ನ ಹುಣಸೂರು ಶಾಸಕ ಎಚ್. ವಿಶ್ವನಾಥ್, ಕೆಆರ್ ಪೇಟೆ ಶಾಸಕ ನಾರಾಯಣ ಗೌಡ, ಮಹಾಲಕ್ಷ್ಮಿ ಲೇಔಟ್ ಶಾಸಕ ಗೋಪಾಲಯ್ಯ ಅವರಿಗೂ ಸ್ಪೀಕರ್ ನೋಟಿಸ್ ನೀಡಿದ್ದಾರೆ.












Click it and Unblock the Notifications