ಸ್ಪೀಕರ್ ಜತೆ ಸಿದ್ದರಾಮಯ್ಯ, ಕುಮಾರಸ್ವಾಮಿ ಬಿಸಿ ಬಿಸಿ ಚರ್ಚೆ
ಬೆಂಗಳೂರು, ಜುಲೈ 17: ಅತೃಪ್ತ ಶಾಸಕರು ಮತ್ತು ಸ್ಪೀಕರ್ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಬುಧವಾರ ತೀರ್ಪು ಪ್ರಕಟಿಸಿರುವುದರಿಂದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಸಿಎಲ್ಪಿ ನಾಯಕ ಸಿದ್ದರಾಮಯ್ಯ ಸೇರಿದಂತೆ ದೋಸ್ತಿ ಸರ್ಕಾರದ ಮುಖಂಡರು ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾಂಗ್ರೆಸ್ ನಾಯಕರಾದ ಕೆಜೆ ಜಾರ್ಜ್, ಕೃಷ್ಣಬೈರೇಗೌಡ ಸೇರಿದಂತೆ ಮೈತ್ರಿ ಸರ್ಕಾರದ ನಾಯಕರು ಬುಧವಾರ ಮಧ್ಯಾಹ್ನ ಸ್ಪೀಕರ್ ಕಚೇರಿಗೆ ತೆರಳಿ ಸಮಾಲೋಚನೆ ನಡೆಸಿದರು.
ಅತೃಪ್ತ ಶಾಸಕರ ರಾಜೀನಾಮೆ ಕುರಿತ ತೀರ್ಮಾನವನ್ನು ಆದಷ್ಟು ಬೇಗನೆ ತೆಗೆದುಕೊಳ್ಳಬೇಕು. ಅವರು ಕಲಾಪಕ್ಕೆ ಹಾಜರಾಗಬೇಕೆಂದು ಒತ್ತಾಯ ಮಾಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಸುಪ್ರೀಂಕೋರ್ಟ್ ಆದೇಶದ ವ್ಯಾಪ್ತಿಯಲ್ಲಿ ಹಾಗೂ ಅದರಾಚೆಗಿನ ಸ್ಪೀಕರ್ ಅಧಿಕಾರದಲ್ಲಿ ಯಾವ ತೀರ್ಮಾನಗಳನ್ನು ತೆಗೆದುಕೊಳ್ಳಬಹುದು ಎಂದು ವಿಚಾರವಾಗಿ ಉಭಯ ಪಕ್ಷಗಳ ನಾಯಕರು ಚರ್ಚಿಸಿದ್ದಾರೆ.

ಅಲ್ಲದೆ, ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ನಾಳಿನ ವಿಶ್ವಾಸಮತ ಯಾಚನೆಯನ್ನು ಮುಂದೂಡುವುದು ಸೂಕ್ತವೇ. ಹಾಗೆ ಮುಂದೂಡುವ ಮೂಲಕ ಸರ್ಕಾರ ಉಳಿಸಿಕೊಳ್ಳಲು ಸಾಧ್ಯವೇ ಎಂಬ ಬಗ್ಗೆ ಚರ್ಚಿಸಲಾಗಿದೆ.
ಗುರುವಾರ ವಿಶ್ವಾಸಮತ ಯಾಚನೆಗೆ ಕುಮಾರಸ್ವಾಮಿ ಅವರು ಸಿದ್ಧರಾಗಿರುವುದರಿಂದ, ಅಂದು ಯಾವ ಕ್ರಮಗಳನ್ನು ಅನುಸರಿಸಬೇಕು, ಮುಂದಿನ ನಡೆಗಳೇನು ಎಂಬ ಬಗ್ಗೆ ಸಲಹೆ ಸೂಚನೆಗಳನ್ನು ಪಡೆದುಕೊಂಡರು.
ಈ ಹಿಂದೆಯೇ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಮತ್ತು ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಅವರ ಅನರ್ಹತೆಗೆ ದೂರು ಸಲ್ಲಿಸಲಾಗಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ್ದ ರಮೇಶ್ ಕುಮಾರ್ ಅವರು ಇಂದು ಸಂಜೆಯೇ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ. ಅಲ್ಲದೆ, ಪಕ್ಷೇತರ ಶಾಸಕ ಆರ್. ಶಂಕರ್ ಅವರ ಅನರ್ಹತೆಗೂ ಕಾಂಗ್ರೆಸ್ ನಾಯಕರು ಮನವಿ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಆರ್. ಶಂಕರ್ ಅವರು ಸಚಿವರಾಗಿ ಸರ್ಕಾರದೊಳಗೆ ಸೇರಿಕೊಳ್ಳುವ ಮುನ್ನ ತಮ್ಮ ಪಕ್ಷವನ್ನು ಕಾಂಗ್ರೆಸ್ನೊಂದಿಗೆ ವಿಲೀನಗೊಳಿಸಿದ್ದರು. ಹೀಗಾಗಿ ಅವರು ತಾಂತ್ರಿಕವಾಗಿ ಕಾಂಗ್ರೆಸ್ ಶಾಸಕರೇ ಆಗಲಿದ್ದಾರೆ. ಹೀಗಾಗಿ ಅವರನ್ನು ಪಕ್ಷ ವಿರೋಧಿ ಚಟುವಟಿಕೆಗಳ ಅಡಿಯಲ್ಲಿ ಅನರ್ಹಗೊಳಿಸಬೇಕು ಎಂದು ಸಿಎಲ್ಪಿ ನಾಯಕ ಸಿದ್ದರಾಮಯ್ಯ ಅವರು ದೂರು ನೀಡಿದ್ದಾರೆ ಎಂದು ಹೇಳಲಾಗಿದೆ.












Click it and Unblock the Notifications