ಬೆಂಗಳೂರು: ಕೋವಿಡ್ ಪತ್ತೆಗೆ ಮನೆ ಮನೆಗೆ ವೈದ್ಯರ ಭೇಟಿ
ಬೆಂಗಳೂರು, ಆಗಸ್ಟ್ 10: ನಗರದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್-19 ಸೋಂಕಿನ ಪ್ರಮಾಣ ತಗ್ಗಿಸಲು ಸ್ವಾತಂತ್ರ್ಯೋತ್ಸವ ದಿನಾಚರಣೆ ನಂತರ ವೈದ್ಯರ ನಡೆ ಸೋಂಕಿತರ ಮನೆ ಕಡೆ ಎಂಬ ವಿನೂತನ ಕಾರ್ಯಕ್ರಮ ಜಾರಿಗೆ ಬಿಬಿಎಂಪಿ ಮುಂದಾಗಿದೆ.
ನಗರದಲ್ಲಿ ಕೋವಿಡ್ ಸೋಂಕರನ್ನು ಪ್ರಾರಂಭಿಕ ಹಂತದಲ್ಲಿಯೇ ನಿಯಂತ್ರಿಸುವ ನಿಟ್ಟಿನಲ್ಲಿ ಆ.16ರಿಂದ ಪಾಲಿಕೆ ವ್ಯಾಪ್ತಿಯಲ್ಲಿರುವ ಪ್ರತಿಯೊಂದು ಮನೆಗೂ ವೈದ್ಯರ ತಂಡವನ್ನು ಕಳುಹಿಸಿ ಆರೋಗ್ಯ ತಪಾಸಣೆ ನಡೆಸುವ ವಿನೂತನ ಯೋಜನೆ ಜಾರಿಗೊಳಿಸಲಾಗುತ್ತಿದೆ.
ಈ ಕುರಿತು ಪ್ರಾಯೋಗಿಕವಾಗಿ 108 ತಂಡಗಳನ್ನು ರಚಿಸಲಿದ್ದು, ಈ ತಂಡಗಳನ್ನು ಮನೆ-ಮನೆಗೆ ಕಳುಹಿಸಿ ಮನೆಯ ಎಲ್ಲಾ ಸದಸ್ಯರ ಆರೋಗ್ಯ ತಪಾಸಣೆಗೆ ಒಳಪಡಿಸಲು ಯೋಜಿಸಲಾಗಿದೆ.

ಸೋಮವಾರ ಕೋವಿಡ್ ನಿರ್ವಹಣೆಗೆ ಸಂಬಂಧಿಸಿದ್ದಂತೆ ನಡೆದ ಸಭೆಯ ಬಳಿಕ ಕಂದಾಯ ಸಚಿವ ಆರ್.ಅಶೋಕ್ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಮನೆಗೆ ಭೇಟಿ ನೀಡುವ ವೇಳೆ ಏನೇನು ಪ್ರಶ್ನೆಗಳು ಕೇಳಬಹುದು ಎಂಬ ಪ್ರಶ್ನಾ ಪಟ್ಟಿ ಸಿದ್ಧಪಡಿಸಿಕೊಂಡು ಎಲ್ಲಾ ಮನೆಯಲ್ಲಿ ಸಂಗ್ರಹಿಸುವ ಮಾಹಿತಿಯನ್ನು ಶಾಶ್ವತವಾಗಿಡುವ ನಿಟ್ಟಿನಲ್ಲಿ ತಂತ್ರಾಂಶ ರೂಪಿಸಲು ಸಿದ್ಧತೆ ನಡೆಸಿದ್ದೇವೆ.
ಜತೆಗೆ ನಾಗರಿಕರಲ್ಲಿ ಅರಿವು ಮೂಡಿಸುವ ಕರಪತ್ರ ನೀಡಲಾಗುವುದು, ಮನೆಗೆ ಭೇಟಿ ನೀಡುವ ವೇಳೆ ಲಸಿಕೆ ಪಡೆದಿರುವ ಬಗ್ಗೆ ಖಾತರಿ ಮತ್ತು ಸೋಂಕು ಲಕ್ಷಣಗಳಿದ್ದರೆ ಪರೀಕ್ಷೆ ನಡೆಸಿರುವ ಕುರಿತು ಯಾವುದಾದರೂ ಕಾಯಿಲೆಗಳು ಇವೆಯೇ ಎಂಬುದು ಸೇರದಂತೆ ಇತರೆ ಮಾಹಿತಿ ಇರಲಿದೆ.
ರೋಗಿಗಳ ರಕ್ಷಣೆ, ರೋಗ ಬಾರದಂತೆ ತಡೆಗಟ್ಟಲು, ಜನರಲ್ಲಿ ಆತ್ಮಸ್ಥೈರ್ಯ ತುಂಬಲು ಈ ಕಾರ್ಯಕ್ರಮ ರೂಪಿಸಲಾಗಿದೆ. ಅದಕ್ಕಾಗಿ ವಾಹನ ಹಾಗೂ ಇನ್ನಿತರೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಮಾಹಿತಿ ನೀಡಿದರು.
ಪಾಲಿಕೆ ವ್ಯಾಪ್ತಿಯ ಬೊಮ್ಮನಹಳ್ಳಿ, ಮಹದೇವಪುರ ಹಾಗೂ ಪೂರ್ವ ವಲಯ, ಯಲಹಂಕ ವಿಧಾನಸಭಾ ಕ್ಷೇತ್ರಗಳಲ್ಲಿ ಹೆಚ್ಚು ಕೋವಿಡ್ ಪ್ರಕರಣಗಳಿವೆ. ಆದ್ದರಿಂದ ಪಾಲಿಕೆಯಿಂದ ಈಗಿನಿಂದಲೇ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಪೈಕಿ ಪ್ರಾಯೋಗಿಕವಾಗಿ ಪ್ರತಿ ವಿಧಾನಸಭಾ ಕ್ಷೇತ್ರದ 2 ವಾರ್ಡ್ ಗಳಲ್ಲಿ ಮನೆ ಮನೆಗೆ ವೈದ್ಯರ ತಂಡವನ್ನು ಕಳುಹಿಸಿ ಆರೋಗ್ಯ ತಪಾಸಣೆ ನಡೆಸಲಾಗುವುದು. ಅದಕ್ಕಾಗಿ ಹೆಚ್ಚುವರಿಯಾಗಿ ವೈದ್ಯರನ್ನು ನಿಯೋಜನೆ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಪಾಲಿಕೆ ವ್ಯಾಪ್ತಿಯಲ್ಲಿರುವ ಅಪಾರ್ಟ್ಮೆಂಟ್ಗಳಲ್ಲಿ ಹೆಚ್ಚು ಕೋವಿಡ್ ಪ್ರಕರಣಗಳು ಕಂಡುಬರುತ್ತವೆ. ಆದ್ದರಿಂದ ಮೂರು ಮತ್ತು ಮೂರಕ್ಕಿಂತ ಹೆಚ್ಚು ಪ್ರಕರಣಗಳು ಕಂಡು ಬಂದಲ್ಲಿ ಅದನ್ನು ಕಂಟೈನ್ಮೆಂಟ್ ವಲಯವನ್ನಾಗಿ ಮಾಡಲಾಗುತ್ತಿದೆ.
ಅಲ್ಲದೆ, ಅಪಾರ್ಟ್ಮೆಂಟ್ನಲ್ಲಿರುವ ಎಲ್ಲರಿಗೂ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲು ಸೂಚಿಸಿದ್ದೇವೆ, ಅಪಾರ್ಟ್ಮೆಂಟ್ನಲ್ಲಿರುವ ಈಜುಕೊಳ, ಉದ್ಯಾನ, ಜಿಮ್ಗಳಿಗೆ ನಿರ್ಬಂಧವಿದ್ದು, ಅದನ್ನು ಸರಿಯಾಗಿ ಹಾಗೂ ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಿದ್ದೇವೆ ಎಂದು ಆರ್. ಅಶೋಕ್ ಹೇಳಿದ್ದಾರೆ.
ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆಯ ಭೀತಿ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಡೆಲ್ಟಾ ಪ್ಲಸ್ ರೂಪಾಂತರ ತಳಿಯ ನಾಲ್ಕನೇ ಪ್ರಕರಣ ವರದಿ ಆಗಿರುವುದರ ಮಧ್ಯೆ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.0.89ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 2.02ರಷ್ಟಿದೆ.
ರಾಜ್ಯದಲ್ಲಿ ಒಂದು ದಿನದಲ್ಲಿ 1186 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1776 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 24 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 36817 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಕಳೆದ ಒಂದು ದಿನದಲ್ಲಿ 296 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1230782ಕ್ಕೆ ಏರಿಕೆಯಾಗಿದೆ. 1 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 15915ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ಜಿಲ್ಲೆಯಲ್ಲಿ 8378 ಸಕ್ರಿಯ ಪ್ರಕರಣಗಳಿವೆ.












Click it and Unblock the Notifications