ಬೆಂಗಳೂರಿನಲ್ಲಿ ಅಂಗನವಾಡಿ ಕಾರ್ಯಕರ್ತರು, ಸಾರಿಗೆ ನೌಕರರಿಂದ ಪ್ರತಿಭಟನೆ
ಬೆಂಗಳೂರು, ಮಾರ್ಚ್ 02: ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತರು ಹಾಗೂ ಸಾರಿಗೆ ನೌಕರರು ಇಂದು ನಗರದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ಬಾರಿಯ ಕರ್ನಾಟಕ ಬಜೆಟ್ನಲ್ಲಿ ಸಾರಿಗೆ ನೌಕರರ 6ನೇ ವೇತನ ಆಯೋಗ ಜಾರಿಯಾಗಬೇಕು ಎನ್ನುವ ಬೇಡಿಕೆ ಮುಂದಿಟ್ಟುಕೊಂಡು ಸಾರಿಗೆ ನೌಕರರು ಮೌರ್ಯ ವೃತ್ತದಲ್ಲಿ ಒಂದು ದಿನದ ಉಪವಾಸ ಕೈಗೊಳ್ಳಲಿದ್ದಾರೆ.
ಡಿಸೆಂಬರ್ ತಿಂಗಳಲ್ಲಿ ಮುಷ್ಕರ ನಡೆಯುತ್ತಿದ್ದ ಸಂದರ್ಭದಲ್ಲಿ ಸರ್ಕಾರ 10 ಬೇಡಿಕೆಗಳಲ್ಲಿ 9 ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿತ್ತು. ಅದರಲ್ಲಿ ಅತಿ ಮುಖ್ಯವಾಗಿದ್ದು ಎಂದರೆ ಆರನೇ ವೇತನ ಆಯೋಗ ಜಾರಿಯಾಗಬೇಕೆನ್ನುವುದಾಗಿತ್ತು.
ಅಂಗನವಾಡಿ ಕಾರ್ಯಕರ್ತರ ಮೆರವಣಿಗೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದಾರೆ. ಬೆಳಗ್ಗೆ 11 ಗಂಟೆಯಿಂದ ಕ್ರಾಂತಿವೀರ ಸಂಗೊಳ್ಳಿ ರೈಲ್ವೆ ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಸರ್ಕಾರಕ್ಕೆ ಒತ್ತಡ ಹಾಕಲಿದ್ದಾರೆ.
ಉಚಿತ ವೈದ್ಯಕೀಯ ಸೌಲಭ್ಯ ನೀಡಬೇಕು, ಸೇವಾ ಹಿರಿತನದ ಆಧಾರದಲ್ಲಿ ಗೌರವಧನ ಹೆಚ್ಚಳ ಮಾಡಬೇಕು, ಎಲ್ಕೆಜಿ, ಯುಕೆಜಿಯನ್ನು ಅಂಗನವಾಡಿಯಲ್ಲೇ ಆರಂಭಿಸಬೇಕು ಎನ್ನುವ ಕೆಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.
ಇನ್ನು ಬಸ್ಗಳ ಸಂಚಾರಕ್ಕೆ ಯಾವುದೇ ರೀತಿಯ ಅಡ್ಡಿ ಇಲ್ಲ, ಇಂದಿನ ಪ್ರತಿಭಟನೆಯಲ್ಲಿ ಎಲ್ಲಾ ನಿಗಮದ ನೌಕರರು ಭಾಗಿಯಾಗಲಿದ್ದಾರೆ. ಆದರೆ ವಾರದ ರಜೆ ಇರುವ ನೌಕರರು ಮಾತ್ರ ಹೋರಾಟದಲ್ಲಿ ಭಾಗಿಯಾಗಲು ಸಾರಿಗೆ ನಿಗಮಗಳ ನೌಕರರ ಯೂನಿಯನ್ಗಳು ಸೂಚಿಸಿವೆ.
ಹೀಗಾಗಿ ಇಂದು ಯಾವುದೇ ಬಸ್ಗಳ ಸಂಚಾರದಲ್ಲಿ ಅಡ್ಡಿ ಇರುವುದಿಲ್ಲ, ಮಾರ್ಚ್ 15ಕ್ಕೆ ಸರ್ಕಾರ ತೆಗೆದುಕೊಂಡ ಗಡುವು ಮುಕ್ತಾಯವಾಗುತ್ತದೆ, ಒಂದೊಮ್ಮೆ ಬೇಡಿಕೆಗಳನ್ನು ಈಡೇರಿಸದಿದ್ದರೆ ಹೋರಾಟ ತೀವ್ರ ಸ್ವರೂಪವನ್ನು ಪಡೆದುಕೊಳ್ಳಲಿದೆ ಎಂದು ನೌಕರರು ಎಚ್ಚರಿಕೆ ನೀಡಿದ್ದಾರೆ.