ವೈಶಿಷ್ಟ್ಯಪೂರ್ಣ ನಾಯಕತ್ವದ ಅಂತ್ಯ: ಕುಮಾರಸ್ವಾಮಿ ಸಂತಾಪ
ಬೆಂಗಳೂರು, ಆಗಸ್ಟ್ 7: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರ ನಿಧನಕ್ಕೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
'ಬದುಕಿರುವಾಗಲೇ ದಂತಕಥೆಯಂತಿದ್ದರು' ಎಂದು ಕರುಣಾನಿಧಿ ಅವರ ಬದುಕನ್ನು ಕುಮಾರಸ್ವಾಮಿ ವಿಶ್ಲೇಷಿಸಿದ್ದಾರೆ.
ತಮ್ಮ ಜೀವಿತಾವಧಿ ಪೂರ್ಣ ತಮಿಳುನಾಡಿನ ಅಭಿವೃದ್ಧಿಗೆ ಶ್ರಮಿಸಿದ ಕರುಣಾನಿಧಿ ಅವರು ಪ್ರಾದೇಶಿಕ ಪಕ್ಷವನ್ನು ಸದೃಢಗೊಳಿಸುವಲ್ಲಿ ಪ್ರದರ್ಶಿಸಿದ ಮುತ್ಸದ್ದಿತನ ವೈಶಿಷ್ಟ್ಯಪೂರ್ಣ.
ಹಲವು ಬಾರಿ ಕರುಣಾನಿಧಿ ಅವರನ್ನು ಭೇಟಿ ಮಾಡಿದ್ದೆ. ಪ್ರಾದೇಶಿಕ ಪಕ್ಷಗಳ ಮಹತ್ವವನ್ನು ಪ್ರತಿ ಬಾರಿಯೂ ನನಗೆ ಮನವರಿಕೆ ಮಾಡಿಕೊಡುತ್ತಿದ್ದರು. ಹಿಂದುಳಿದ ವರ್ಗ ಹಾಗೂ ತುಳಿತಕ್ಕೊಳಗಾದವರ ಬಗ್ಗೆ ಅವರು ತೆಗೆದುಕೊಂಡ ಜನಪ್ರಿಯ ಯೋಜನೆಗಳನ್ನು ಇಂದು ದೇಶದ ವಿವಿಧ ರಾಜ್ಯಗಳು ಅನುಕರಿಸುತ್ತಿವೆ.

ಎಚ್.ಡಿ.ದೇವೇಗೌಡ ಅವರು ಪ್ರಧಾನಿಯಾಗಿದ್ದ ವೇಳೆ ಸಮ್ಮಿಶ್ರ ಸರ್ಕಾರದ ರಚನೆಗೆ ಕರುಣಾನಿಧಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಚಿತ್ರರಂಗದ ಮೂಲಕ ರಾಜಕೀಯಕ್ಕೆ ಬಂದು ತಮಿಳುನಾಡಿನ ಶೋಷಿತ ವರ್ಗಕ್ಕೆ ಗಟ್ಟಿದನಿ ನೀಡಿದ ಕರುಣಾನಿಧಿ, ರಾಜಕೀಯ ಸಿದ್ಧಾಂತ ನಮಗೆಲ್ಲರಿಗೂ ಮಾದರಿ.
ಅವರ ನಿಧನದಿಂದ ಭಾರತದ ರಾಜಕೀಯ ರಂಗದಲ್ಲಿ ವೈಶಿಷ್ಟ್ಯಪೂರ್ಣ ವ್ಯಕ್ತಿತ್ವವೊಂದು ಕಣ್ಮರೆಯಾಗಿದೆ. ಅವರ ನಿಧನದಿಂದ ತಮಿಳುನಾಡು ಒಬ್ಬ ದಾರ್ಶನಿಕ ನಾಯಕನನ್ನು ಕಳೆದುಕೊಂಡಿದೆ ಎಂದು ಕುಮಾರಸ್ವಾಮಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.












Click it and Unblock the Notifications