ಚುನಾವಣೆಯಿಂದ ದೂರ ಉಳಿದ ಕೈ ನಾಯಕರಿಗೆ ವೇಣುಗೋಪಾಲ್ ಎಚ್ಚರಿಕೆ
ಬೆಂಗಳೂರು, ಡಿಸೆಂಬರ್ 03: ಉಪಚುನಾವಣೆಯಲ್ಲಿ ಸಕ್ರಿಯವಾಗಿ ಭಾಗಿಯಾಗದೇ ಇರುವ ಕಾಂಗ್ರೆಸ್ ನಾಯಕರ ಪಟ್ಟಿಯನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಪಡೆದುಕೊಂಡಿದ್ದಾರೆ.
ನಿನ್ನೆ ರಾತ್ರಿ ತಾಜ್ ವೆಸ್ಟ್ ಎಂಡ್ ಹೊಟೆಲ್ನಲ್ಲಿ ಸಭೆ ನಡೆಸಿದ ವೇಣುಗೋಪಾಲ್ ಅವರು, ಚುನಾವಣಾ ವೀಕ್ಷಕರಿಂದ ಪೂರ್ಣ ಮಾಹಿತಿ ಪಡೆದರು. ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿರುವವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಸಹ ಅವರು ಈ ಸಂದರ್ಭದಲ್ಲಿ ಹೇಳಿದ್ದಾರೆ.
ಸಣ್ಣ ಕಾರ್ಯಕರ್ತನಿಂದ ಹಿಡಿದು ದೊಡ್ಡ ನಾಯಕರ ವರೆಗೆ ಯಾರೇ ತಪ್ಪು ಮಾಡಿದ್ದರು ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ.
ಉಪಚುನಾವಣೆ ನಡೆಯುತ್ತಿರುವ ಕೆಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುಖಂಡರು ಪ್ರಚಾರಕ್ಕೆ ಬಾರದೆ ಪಕ್ಷಕ್ಕೆ ಹಿನ್ನಡೆ ಆಗುತ್ತಿದೆ, ಇದರ ಬಗ್ಗೆ ಈ ಹಿಂದೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಎಚ್ಚರಿಕೆ ನೀಡಿದ್ದರು. ಈಗ ಸ್ವತಃ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರೇ ವಿವರ ಪಡೆದಿದ್ದಾರೆ.
ಶಿವಾಜಿನಗರ ಕ್ಷೇತ್ರದಲ್ಲಿ ಈಗಾಗಲೇ ಕಾಂಗ್ರೆಸ್ನ ಮೂವರು ಬಿಬಿಎಂಪಿ ಸದಸ್ಯರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಇವರು ಅಭ್ಯರ್ಥಿ ರಿಜ್ವಾನ್ ಅರ್ಷದ್ ಪರ ಪ್ರಚಾರ ಮಾಡಲಿಲ್ಲವೆಂದು ಈ ಕ್ರಮ ಕೈಗೊಳ್ಳಲಾಗಿದೆ.