ಕೆಂಪೇಗೌಡ ಪ್ರತಿಮೆ ಲೋಕಾರ್ಪಣೆ: ಆದಿಚುಂದಚನಗಿರಿ ಶ್ರೀಗಳ ನೇತೃತ್ವದಲ್ಲಿ ಒಕ್ಕಲಿಗ ಪ್ರಮುಖರ ಸಭೆ
ಬೆಂಗಳೂರು, ನವೆಂಬರ್7: ನವೆಂಬರ್ 11ರಂದು ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಲೋಕಾರ್ಪಣೆಯ ಹಿನ್ನೆಲೆಯಲ್ಲಿ ಒಕ್ಕಲಿಗ ಸಮುದಾಯದ ಪ್ರಮುಖರ ಜೊತೆಗೆ ಭಾನುವಾರ ರಾತ್ರಿ ಸಭೆ ನಡೆಸಲಾಗಿದೆ.
ಖಾಸಗಿ ಹೋಟೆಲಿನಲ್ಲಿ, ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಈ ಸಭೆ ನಡೆಸಲಾಯಿತು. ರಾಜ್ಯ ಒಕ್ಕಲಿಗರ ಮಹಾಸಭೆ ಈ ಸಭೆ ಆಯೋಜಿಸಿತ್ತು. ಸಭೆಯಲ್ಲಿ ಶ್ರೀ ಸೋಮನಾಥಾನಂದ ಸ್ವಾಮೀಜಿ, ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರೂ ಆದ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ, ವೆಂಚರ್ ಕ್ಯಾಪಿಟಲಿಸ್ಟ್ ಮತ್ತು ಸ್ಟಾರ್ಟಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್, ಒಕ್ಕಲಿಗರ ಮಹಾಸಭಾದ ಅಧ್ಯಕ್ಷ ಆನಂದ್ ಭಾಗವಹಿಸಿದ್ದರು.
ಅಲ್ಲದೆ ಸಮುದಾಯದ ನಿವೃತ್ತ ಐಎಎಸ್- ಐಪಿಎಸ್ ಅಧಿಕಾರಿಗಳು, ಹಾಲಿ ಐಪಿಎಸ್ ಅಧಿಕಾರಿಗಳು, ಉದ್ಯಮಿಗಳು, ಸಂಘಸಂಸ್ಥೆಗಳ ಪ್ರಮುಖರು, ಲೇಖಕರು, ಹೋರಾಟಗಾರರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಸಭೆಯಲ್ಲಿ ಮಾತನಾಡಿದ ಅಶ್ವತ್ಥ ನಾರಾಯಣ ಅವರು, ಕೆಂಪೇಗೌಡರ ಪ್ರತಿಮೆಯನ್ನು ಪ್ರತಿಷ್ಠಾಪಿಸಿರುವ ಮಹತ್ತ್ವ, ಮತ್ತು ವೈಶಿಷ್ಟ್ಯಗಳನ್ನು ಸಭಿಕರೊಂದಿಗೆ ಹಂಚಿಕೊಂಡರು. ಜತೆಗೆ ನ.11ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯಲಿರುವ ಸಭೆಯನ್ನು ಯಶಸ್ವಿಯಾಗಿ ನಡೆಸಲು ಸಮುದಾಯದ ಸದಸ್ಯರು ಸ್ವಯಂ ಸ್ಫೂರ್ತಿಯಿಂದ ಭಾಗವಹಿಸಬೇಕು ಎಂದರು.
ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರೂ ಹಾಗೂ ಉನ್ನತ ಶಿಕ್ಷಣ ಸಚಿವ ಡಾ ಸಿ ಎನ್ ಅಶ್ವಥ ನಾರಾಯಣ ಈ ಹಿಂದೆಯೂ ನಿರ್ಮಲಾನಂದ ಶ್ರೀಗಳನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದು, ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸರಕಾರದ ಚಿಂತನೆ ಹಾಗೂ ಆಶಯಗಳನ್ನು ಹಂಚಿಕೊಂಡರು. ಶ್ರೀಗಳ ಜತೆ ಕಾರ್ಯಕ್ರಮದ ಯಶಸ್ಸಿಗೆ ಮಾರ್ಗದರ್ಶನ ಕೋಡಿದರು. ಜತೆಗೆ, ಕಾರ್ಯಕ್ರಮಕ್ಕೆ ಜನರನ್ನು ಸಮಾಗಮಗೊಳಿಸುವ ಕುರಿತು ಚರ್ಚಿಸಿದರು. ಸಚಿವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಶ್ರೀಗಳು, ಕಾರ್ಯಕ್ರಮದ ಯಶಸ್ಸಿಗೆ ಮಠ ಮತ್ತು ಸಮಾಜದ ವತಿಯಿಂದ ಸಕಲ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಇದಕ್ಕೂ ಮೊದಲು ಸಚಿವರು 20ಕ್ಕೂ ಹೆಚ್ಚು ಪ್ರಮುಖ ಒಕ್ಕಲಿಗ ಸಂಘಟನೆಗಳ ಪ್ರಮುಖರ ಜೊತೆಯೂ ಕಾರ್ಯಕ್ರಮ ಕುರಿತು ಸಭೆ ನಡೆಸಿದರು.
ನ.11ರಂದು ಕೆಂಪೇಗೌಡ ಏರ್ಪೋರ್ಟ್ ಮುಂದೆ ಸಮಾರಂಭ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ 108 ಅಡಿ ಎತ್ತರದ ಕೆಂಪೇಗೌಡ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ನವೆಂಬರ್ 11ರಂದು ಕೆಂಪೇಗೌಡರ ಪ್ರತಿಮೆ ಅನಾವರಣ ಹಿನ್ನೆಲೆ ರಾಜ್ಯಾದ್ಯಂತ ಮೃತ್ತಿಕೆ ಸಂಗ್ರಹ ಅಭಿಯಾನಕ್ಕೆ ಅಕ್ಟೋಬರ್ 21ರಂದು ವಿಧಾನಸೌಧದ ಮುಂಭಾಗ ರಥಗಳಿಗೆ ಸಿಎಂ ಬೊಮ್ಮಾಯಿ ಚಾಲನೆ ನೀಡಿದ್ದು,ರಾಜ್ಯಾದ್ಯಂತ ಮೃತ್ತಿಕೆ ಸಂಗ್ರಹ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದೆ.