ವಿಡಿಯೋ: ಕೆಂಪೇಗೌಡ ಏರ್ಪೋರ್ಟ್ ಜಲಾವೃತ: ಟ್ರ್ಯಾಕ್ಟರ್ ಮೂಲಕ ತೆರಳಿದ ಪ್ರಯಾಣಿಕರು
ಬೆಂಗಳೂರು, ಅಕ್ಟೋಬರ್ 12: ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ಕೆಂಪೇಗೌಡ ಅಂತಾರಾಷ್ಟ್ರೀಯವ ವಿಮಾನ ನಿಲ್ದಾಣ ಸುತ್ತಮುತ್ತ ಸಂಪೂರ್ಣ ಜಲಾವೃತವಾಗಿದ್ದು, ಪ್ರಯಾಣಿಕರು ಟ್ರ್ಯಾಕ್ಟರ್ ಮೂಲಕ ತೆರಳಿದ ಘಟನೆ ನಡೆದಿದೆ.
Recommended Video
ರಾಜಧಾನಿಯಲ್ಲಿ ಧಾರಾಕಾರ ಮಳೆಯಾಗಿದೆ. ಬೆಂಗಳೂರು ಏರ್ಪೋರ್ಟ್ಗೆ ಜಲದಿಗ್ಬಂಧನ ಉಂಟಾಗಿ ರನ್ವೇ, ಟರ್ಮಿನಲ್, ಸಂಪರ್ಕ ರಸ್ತೆಗಳು ಜಲಾವೃತಗೊಂಡು ಸವಾರರು ಪರದಾಟ ನಡೆಸುವಂತಾಯಿತು.
ಅ.16ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಅಧಿಕ ಮಳೆ
ಬೆಂಗಳೂರಿನ ಹಲವೆಡೆ ಭಾರಿ ಮಳೆಯಾಗಿದ್ದು, ಬೆಂಗಳೂರು ಏರ್ಪೋರ್ಟ್ ಮುಖ್ಯರಸ್ತೆಗಳು ಜಲಾವೃತಗೊಂಡ ಪರಿಣಾಮ ಪ್ರಯಾಣಿಕರು ಏರ್ಪೋರ್ಟ್ ತಲುಪಲು ಸಾಧ್ಯವಾಗದೇ, ತಮ್ಮ ವಿಮಾನ ಮಿಸ್ಮಾಡಿಕೊಳ್ಳುವ ಭಯದಿಂದ ಟ್ರ್ಯಾಕ್ಟರ್ಗಳಲ್ಲಿ ನಿಲ್ದಾಣಕ್ಕೆ ತೆರಳಿದ್ದಾರೆ. ಕಿಲೋಮೀಟರ್ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿ ಜನರು ತೊಂದರೆ ಅನುಭವಿಸಿದ್ದಾರೆ.
ಸೋಮವಾರ ಸಂಜೆಯಿಂದ ಬಿಟ್ಟುಬಿಡದೇ ವರುಣನ ಆರ್ಭಟ ಹಿನ್ನೆಲೆ ನಗರದಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಉದ್ಭವಿಸಿತ್ತು. ಕೆ.ಆರ್.ಪುರ, ಮಹದೇವಪುರ, ಹೊಸಕೋಟೆ, ಜಾಲಹಳ್ಳಿ, ಯಶವಂತಪುರ, ಮೆಜೆಸ್ಟಿಕ್, ಹೊರಮಾವು, ಬಾಣಸವಾಡಿ ಸೇರಿದಂತೆ ಹಲವೆಡೆ ಜೋರು ಮಳೆಯಾಗಿದೆ. ಮಳೆಯಿಂದ ಚರಂಡಿಗಳು ತುಂಬಿ ಹರಿದಿದ್ದು, ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ತೊಂದರೆ ಅನುಭವಿಸಿದರು.
ಸಂಜೆ ಆಗುತ್ತಿರುವಾಗಲೇ ಮಳೆ ಶುರುವಾಗಿದ್ದರಿಂದ ಕೆಲಸ ಮುಗಿಸಿ ಮನೆಗಳತ್ತ ಹೊರಟಿದ್ದ ಜನರು, ವಾಹನ ಸವಾರರು ಪರದಾಡಿದರು. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ನಗರದಲ್ಲಿ ಮಳೆ ಜೋರಾಗಿದ್ದು, ಮುಂದಿನ ಎರಡು ದಿನಗಳ ಕಾಲ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಸ್ತೆಗಳು ಜಲಾವೃತಗೊಂಡಿದ್ದು, ಪ್ರಯಾಣಿಕರು ಟ್ರ್ಯಾಕ್ಟರ್ನಲ್ಲಿ ಏರ್ಪೋರ್ಟ್ ತಲುಪಿದ್ದಾರೆ. ಬೆಂಗಳೂರಿನ ಬಹುತೇಕ ರಸ್ತೆಗಳು, ಅಂಡರ್ಪಾಸ್ಗಳಲ್ಲಿ ನೀರು ತುಂಬಿಕೊಂಡಿದ್ದು, ತಗ್ಗು ಪ್ರದೇಶದ ಮನೆಗಳಿಗೆ ನೀಡು ನುಗ್ಗಿದೆ.
Passengers take a tractor ride to catch the flight!#BengaluruRains#Bangalore @NammaBengaluroo @unitedbengaluru @WeAreBangalore@CitizenKamran @bengaluru @bangalore @BangaloreBuzz @NammaKarnataka_ #Karnataka pic.twitter.com/C5RU09eriA pic.twitter.com/EYUZabfd9u
— Syed Aftab Hussain 🇮🇳 (@sajhm13) October 11, 2021
ರಸ್ತೆಯಲ್ಲಿ ಭಾರಿ ಪ್ರಮಾಣದ ನೀರು ಹರಿದ ಪರಿಣಾಮ ವಾಹನ ಸವಾರರು ಪರದಾಟ ನಡೆಸಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ವ್ಯಾಪ್ತಿಯಲ್ಲಿ ಭಾರಿ ಮಳೆಯಿಂದಾಗಿ ನೀರು ನಿಂತಿತ್ತು.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಕೆಲ ದಿನಗಳಿಂದ ಬೆಂಗಳೂರಿನಲ್ಲಿ ನಿರಂತರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ಪರದಾಡುವಂತಾಯಿತು. ಅಂತೆಯೇ, ಮಳೆಯಿಂದಾಗಿ ಟ್ರಾಫಿಕ್ ಸಮಸ್ಯೆಯೂ ಸೃಷ್ಟಿಯಾಗಿತ್ತು.
ಮುಂದಿನ 24 ಗಂಟೆಗಳಲ್ಲಿ, ಅಂಡಮಾನ್ ಮತ್ತು ನಿಕೊಬಾರ್, ಆಂಧ್ರಪ್ರದೇಶ, ತೆಲಂಗಾಣ, ಲಕ್ಷದ್ವೀಪ, ಕರ್ನಾಟಕ ಮತ್ತು ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದ್ದು, ತಮಿಳುನಾಡು, ಆಂಧ್ರ ಪ್ರದೇಶ, ಕೇರಳ, ಒಡಿಶಾ ಮತ್ತು ಗುಜರಾತ್ನ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಇಲಾಖೆ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲಿ ಕರಾವಳಿ ಕರ್ನಾಟಕ, ತೆಲಂಗಾಣ, ಗೋವಾ, ಮಧ್ಯಪ್ರದೇಶದ ಹಲವೆಡೆ ಹಾಗೂ ದಕ್ಷಿಣ ಗುಜರಾತ್ ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಅಂತೆಯೇ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಿದೆ ಹಾಗೂ ಕೇರಳದಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಿದೆ. ಕರಾವಳಿ ಕರ್ನಾಟಕ, ಉತ್ತರ ಒಳನಾಡು ಮತ್ತು ರಾಯಲಸೀಮದಲ್ಲಿ ಅಧಿಕ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಆಂಧ್ರಪ್ರದೇಶ, ಗಂಗಾ ಪಶ್ಚಿಮ ಬಂಗಾಳ, ಸಿಕ್ಕಿಂ, ತೆಲಂಗಾಣದ ಕೆಲವು ಭಾಗಗಳು ಮತ್ತು ಉತ್ತರ ಕರ್ನಾಟಕದ ಒಳಭಾಗದಲ್ಲಿ ಭಾರೀ ಮಳೆಯಾಗಿದೆ. ಗುಜರಾತ್, ಕೊಂಕಣ ಮತ್ತು ಗೋವಾ, ಆಗ್ನೇಯ ಎಂಪಿ, ಉಪ ಹಿಮಾಲಯದ ಪಶ್ಚಿಮ ಬಂಗಾಳ, ಒಡಿಶಾ ಮತ್ತು ಲಕ್ಷದ್ವೀಪದ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿಯಲ್ಲೂ ಕೂಡ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.