KMF Election: ಕೆಎಂಎಫ್ ಅಧ್ಯಕ್ಷರಾಗಿ ಭೀಮಾ ನಾಯ್ಕ್ ಅವಿರೋಧ ಆಯ್ಕೆ
ಕರ್ನಾಟಕ ಹಾಲು ಮಾರಾಟ ಮಹಾಮಂಡಳ (ಕೆಎಂಎಫ್) ಅಧ್ಯಕ್ಷ ಸ್ಥಾನಕ್ಕೆ ಭೀಮಾ ನಾಯ್ಕ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೆಎಂಎಫ್ ಅಧ್ಯಕ್ಷರ ಚುನಾವಣೆಗೆ ಭೀಮಾ ನಾಯ್ಕ್ ಹೊರತುಪಡಿಸಿ ಮತ್ಯಾರು ನಾಮಪತ್ರ ಸಲ್ಲಿಕೆ ಮಾಡದಿರುವ ಕಾರಣ ಅವರು ಅವಿರೋಧವಾಗಿ ಆಯ್ಕೆಯಾದರು.
ಹಗರಿಬೊಮ್ಮನಹಳ್ಳಿ ಮಾಜಿ ಶಾಸಕ ಭೀಮಾ ನಾಯ್ಕ್ ಸಿದ್ದರಾಮಯ್ಯ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದರು. ರಾಜಕೀಯದಲ್ಲಿ ಸಕ್ರೀಯವಾಗಿರಬೇಕು ಎನ್ನುವ ಕಾರಣಕ್ಕೆ ಕೆಎಂಎಫ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದರು, ಕೊನೆಗೂ ಅವರು ಅವಿರೋಧವಾಗಿ ಆಯ್ಕೆಯಾಗುವಲ್ಲಿ ಯಶಸ್ವಿಯಾಗಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಬಾಲಚಂದ್ರ ಜಾರಕಿಹೊಳಿ ಅವರ ಕೆಎಂಎಫ್ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಚುನಾವಣೆ ಮೂಲಕ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲು ನಿರ್ಧರಿಸಲಾಗಿತ್ತು. ಒಕ್ಕೂಟದ 14 ಪ್ರತಿನಿಧಿಗಳು, ಸಹಕಾರ ಇಲಾಖೆ ರಿಜಿಸ್ಟಾರ್, ಪಶುಸಂಗೋಪನಾ ಇಲಾಖೆ ನಿರ್ದೇಶಕ, ಕೆಎಂಎಫ್ ವ್ಯವಸ್ಥಾಪ ನಿರ್ದೇಶಕರು, ಒಬ್ಬರು ನಾಮನಿರ್ದೇಶಿತ ಸದಸ್ಯರು ಸೇರಿ ಒಟ್ಟು 18 ಮಂದಿ ಮತದಾನದ ಮೂಲಕ ಕೆಎಂಎಫ್ ಅಧ್ಯಕ್ಷರನ್ನು ಆಯ್ಕೆ ಮಾಡುತ್ತಾರೆ. ಆದರೆ, ಭೀಮಾ ನಾಯ್ಕ್ ಒಬ್ಬರೇ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಕಾರಣ, ಮತದಾನ ನಡೆಯದೇ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಚುನಾವಣೆಯಿಂದ ಹಿಂದೆ ಸರಿದ ಬಾಲಚಂದ್ರ ಜಾರಕಿಹೊಳಿ
ಕೆಎಂಎಫ್ ಅಧ್ಯಕ್ಷರಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರ ಅವಧಿ ಇನ್ನೂ ಒಂದು ವರ್ಷವಿದ್ದರೂ, ಹೊಸಬರಿಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ಚುನಾವಣೆಯಿಂದ ಹಿಂದೆ ಸರಿದಿದ್ದರು. ಸಿದ್ದರಾಮಯ್ಯ ಕೂಡ ಬಾಲಚಂದ್ರ ಜಾರಕಿಹೊಳಿ ಅವರಿಗೆ ಚುನಾವಣೆಗೆ ನಿಲ್ಲದಂತೆ ಸೂಚನೆ ನೀಡಿದ್ದರು ಎನ್ನಲಾಗಿದೆ.
ಹೊಸ ಅಧ್ಯಕ್ಷರಿಗೆ ಎಲ್ಲಾ ರೀತಿಯ ಸಹಕಾರ ನೀಡುತ್ತೇನೆ, ರಾಜ್ಯದ ಹೈನುಗಾರರು, ಗ್ರಾಹಕರ ರಕ್ಷಣೆಗೆ ಬದ್ಧವಾಗಿದ್ದೇನೆ. ಕೆಎಂಎಫ್ ವಾರ್ಷಿಕ 20 ಸಾವಿರ ಕೋಟಿ ರುಪಾಯಿ ವಹಿವಾಟು ನಡೆಸುವ ಸಂಸ್ಥೆಯಾಗಿದೆ. ನಾನು ಅಧ್ಯಕ್ಷನಾಗಿದ್ದ ಸಂದರ್ಭದಲ್ಲಿ ಪಾರದರ್ಶಕ ಆಡಳಿತ ನಡೆಸಲು ಶ್ರಮಿಸಿದ್ದೇನೆ, ಕೆಎಂಎಫ್ ಬಲಪಡಿಸಿದ್ದೇನೆ, ಹೊಸ ಅಧ್ಯಕ್ಷರಿಗೂ ಬೇಕಾದ ಎಲ್ಲಾ ಸಹಕಾರ ನೀಡುತ್ತೇನೆ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದ್ದರು.












Click it and Unblock the Notifications