'ದಾಖಲೆಗಳೇ ಇಲ್ಲದ ಕೋಗಿಲು ನಿರಾಶ್ರಿತರಿಗೆ ಜ.2ಕ್ಕೆ ಮನೆ: ಸ್ಲೀಪರ್ ಸೆಲ್ ಆತಂಕ, ಎನ್ಐಎ ತನಿಖೆಗೆ ಆಗ್ರಹ'
ಬೆಂಗಳೂರು: ಕೋಗಿಲು ಬಡಾವಣೆ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ವಲಸೆಗಾರರಿಗೆ ಶಾಶ್ವತ ವಸತಿ ವ್ಯವಸ್ಥೆ ಮಾಡಿಕೊಡುವ ಬಗ್ಗೆ ದಾಖಲೆ ಪರಿಶೀಲನೆ ಮುಂದುವರಿದಿದೆ. ಜನವರಿ 2 ರಂದು ಮನೆಗಳ ವಿತರಣೆ ಬಗ್ಗೆ ವಸತಿ ಜಮೀರ್ ಅಹ್ಮದ್ ಖಾನ್ ಅವರು ಹೇಳಿದ್ದಾರೆ. ಇದರ ಬೆನ್ನಲ್ಲೆ ಸ್ಥಳಕ್ಕೆ ಭೇಟಿ ನೀಡಿದ ವಿಪಕ್ಷ ನಾಯಕ ಆರ್.ಅಶೋಕ್ ಅವರು, ಒಂದು ವರ್ಷದ ಹಿಂದಿನ ಗೂಗಲ್ ಮ್ಯಾಪ್ನಲ್ಲಿ ಮನೆಗಳ ದಾಖಲೆ ಇಲ್ಲ. ಆರು ತಿಂಗಳ ಹಿಂದೆ ಬಂದವರಿಗೂ ಅಕ್ರಮ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಎಂದು ಸರ್ಕಾರದ ವಿರುದ್ಧ ಹರಿಹಾಯ್ದರು.
ಮೊದಲಿಗೆ ಸಚಿವ ಜಮೀರ್ ಅಹಮದ್ ಖಾನ್ ಅವರು ನೀಡಿರುವ ಮಾಹಿತಿ ನೋಡುವುದಾದರೆ, ಯಲಹಂಕ ಕೋಗಿಲು ಬಡಾವಣೆಯಲ್ಲಿ ಅಕ್ರಮ ಮನೆಗಳ ತೆರವು ಹಿನ್ನೆಲೆಯಲ್ಲಿ ಅರ್ಹ ಸಂತ್ರಸ್ತರಿಗೆ ಬಿಬಿಎಂಪಿ ಹಾಗೂ ರಾಜೀವ್ ಗಾಂಧಿ ವಸತಿ ನಿಗಮ ವತಿಯಿಂದ ಪರ್ಯಾಯವಾಗಿ ಶಾಶ್ವತ ವಸತಿ ವ್ಯವಸ್ಥೆ ಮಾಡಿಕೊಡುವ ಬಗ್ಗೆ ದಾಖಲೆ ಪರಿಶೀಲನೆ ಮುಂದುವರಿದಿದೆ. ಈ ವಿಚಾರದಲ್ಲಿ ಅರ್ಹರಿಗೆ ಮಾತ್ರ ವಸತಿ ವ್ಯವಸ್ಥೆ ಮಾಡಿಕೊಡುವುದು ಸರ್ಕಾರದ ಉದ್ದೇಶವಾಗಿದೆ.

ಈ ಬಗ್ಗೆ ಸರ್ಕಾರ ತರಾತುರಿ ಮಾಡದೆ ಸಮಗ್ರವಾಗಿ ದಾಖಲೆ ಪರಿಶೀಲನೆ ಮಾಡಲು ಮುಖ್ಯಮಂತ್ರಿಯವರು ಸೂಚನೆ ನೀಡಿದ್ದಾರೆ. ಕಂದಾಯ ಇಲಾಖೆ ಹಾಗೂ ಬಿಬಿಎಂಪಿ ಅಧಿಕಾರಿಗಳು ಆ ಕಾರ್ಯದಲ್ಲಿ ನಿರತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಜನವರಿ ಒಂದರಂದು ಉದ್ದೇಶಿಸಲಾಗಿದ್ದ ಮನೆಗಳ ವಿತರಣೆ ಜನವರಿ 2 ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಈ ಮೂಲಕ ಅರ್ಹರಿಗೆ ಮಾನವೀಯ ದೃಷ್ಟಿಯಿಂದ ಮನೆ ನಿರ್ಧಾರದಿಮದ ಹಿಂದೆ ಸರಿಯಲ್ಲ ಎಂಬುದು ಸ್ಪಷ್ಟವಾಗಿದೆ.
ಸ್ಲೀಪರ್ ಸೆಲ್ ಆಗುವ ಅಪಾಯ: NIA ತನಿಖೆ ಆಗಲಿ
ಇಂದು ಆರ್.ಅಶೋಕ ಅವರು ಕೋಗಿಲು ಕ್ರಾಸ್ನಲ್ಲಿ ಒತ್ತುವರಿ ತೆರವು ಮಾಡಿದ ವಿವಾದಿತ ಸ್ಥಳಕ್ಕೆ ಮುಖಂಡರೊಂದಿಗೆ ಭೇಟಿ ನೀಡಿದರು. ಸ್ಥಳೀಯರೊಂದಿಗೆ ಮಾತನಾಡಿದರು. ಗುರುತಿನ ಚೀಟಿ ಹಾಗೂ ಇತರೆ ದಾಖಲೆಗಳನ್ನು ಪರಿಶೀಲಿಸಿದರು. ಬಳಿಕ ಮಾತನಾಡಿದ ಅವರು, ಕೋಗಿಲು ಕ್ರಾಸ್ನ ಫಕೀರ್ ಬಡಾವಣೆ ಕ್ರಮೇಣ ಸ್ಲೀಪರ್ ಸೆಲ್ಗಳ ಕೇಂದ್ರವಾಗುವ ಅಪಾಯವಿದೆ. ಆದ್ದರಿಂದ ಅಕ್ರಮ ನಿವಾಸಿಗಳ ಪೌರತ್ವವನ್ನು ಸರ್ಕಾರ ಪರಿಶೀಲಿಸಬೇಕು. ಇದನ್ನು ಎನ್ಐಎ ತನಿಖೆಗೆ ನೀಡಬೇಕೆಂದು ಆಗ್ರಹಿಸಿದರು.
ಮ್ಯಾಪ್ನಲ್ಲಿ ತೋರಿಸದ ಸ್ಥಳದಲ್ಲಿ 25 ವರ್ಷದಿಂದ ವಾಸ!
ಭೇಟಿ ವೇಳೆ ಸ್ಥಳೀಯ ಮಹಿಳೆಯೊಂದಿಗೆ ಮಾತುಕತೆ ನಡೆಸಿದರು. ಇಲ್ಲಿ ಎಷ್ಟು ವರ್ಷಗಳಿಂದ ವಾಸಿಸುತ್ತಿದ್ದೀರಿ, ಕರೆತಂದವರು ಯಾರು?, ನಿವೇಶನ ಮಂಜೂರು ಮಾಡಲಾಗಿದೆಯೇ ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಮಹಿಳೆ, ಕಳೆದ 25 ವರ್ಷಗಳಿಂದ ಇಲ್ಲಿ ವಾಸವಿದ್ದೇವೆ ಎಂದು ತಿಳಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಆರ್.ಅಶೋಕ ಅವರು, ಗೂಗಲ್ ನಕ್ಷೆಯಲ್ಲಿ 1 ವರ್ಷದ ಹಿಂದೆ ಮನೆಗಳು ಇರಲಿಲ್ಲ. ಯಾರ ಬಳಿಯೂ ಗುರುತಿನ ಚೀಟಿ ಇಲ್ಲ ಎಂದು ತಿಳಿಸಿದರು.
ಮನೆ ಕಟ್ಟಿಕೊಡುವುದೇ ಮಾನದಂಡವಾದರೆ ಇನ್ನು ಮುಂದೆ ಸರ್ಕಾರ ಯಾವ ಮುಖ ಇಟ್ಟುಕೊಂಡು ಒತ್ತುವರಿ ತೆರವು ಮಾಡಲಿದೆ?. ಬೆಂಗಳೂರಿನಲ್ಲಿ 40 ಕಡೆ 150-200 ಎಕರೆ ಒತ್ತುವರಿ ತೆರವು ಮಾಡಲಾಗಿದೆ. ಇವರೆಲ್ಲರಿಗೂ ಮನೆ ನಿರ್ಮಿಸಿಕೊಡಲು ಸಾಧ್ಯವೇ? ಒತ್ತುವರಿ ತೆರವಾದ ಕಡೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿಲ್ಲ. ಇಲ್ಲಿ ಅವರ ಕುಕ್ಕರ್ ಬ್ರದರ್ ಇರುವುದರಿಂದ ಕರು ಹಸುವಿನ ಬಳಿ ಓಡಿ ಬರುವಂತೆ ಬಂದಿದ್ದಾರೆ.

ಬಾಂಗ್ಲಾದಂತೆ ರಾಜ್ಯ ಆಗದಿರಲಿ: ಪೌರತ್ವ ಪರಿಶೀಲಿಸಿ
ಬಾಂಗ್ಲಾದಿಂದ ಪಶ್ಚಿಮ ಬಂಗಾಳ ಹೊತ್ತಿ ಉರಿಯುತ್ತಿದೆ. ಮುಂದೆ ಕರ್ನಾಟಕವೂ ಹೀಗೆಯೇ ಆಗಲಿದೆ. ಆದ್ದರಿಂದ ಮೊದಲು ಇಲ್ಲಿನ ಜನರ ಪೌರತ್ವ ಪರಿಶೀಲಿಸಬೇಕು. ಜೊತೆಗೆ ಎನ್ಐಎ ತನಿಖೆಗೆ ನೀಡಬೇಕು. ಅಧಿಕಾರಿಗಳ ಮೇಲೆ ಯಾವುದೇ ಒತ್ತಡ ಹಾಕದೆ ಈ ಕೆಲಸವಾಗಬೇಕು. ಅಧಿಕಾರಿಗಳು ಅಕ್ರಮ ಮಾಡಿದರೆ ಭವಿಷ್ಯದಲ್ಲಿ ಅವರೇ ಸಿಕ್ಕಿಹಾಕಿಕೊಳ್ಳುತ್ತಾರೆ. ನಕಲಿ ದಾಖಲೆ ಸೃಷ್ಟಿಸಿದರೆ ತನಿಖೆ ಎದುರಿಸಬೇಕಾಗುತ್ತದೆ ಎಂಬುದನ್ನು ಅಧಿಕಾರಿಗಳು ನೆನಪಲ್ಲಿಟ್ಟುಕೊಳ್ಳಬೇಕು ಎಂದು ಎಚ್ಚರಿಸಿದರು.
ಕಾಂಗ್ರೆಸ್ ಸರ್ಕಾರದಿಂದ ಮಿನಿ ಬಾಂಗ್ಲಾದೇಶ ನಿರ್ಮಾಣ
ಸಿಎಂ ಸಿದ್ದರಾಮಯ್ಯ ನೇತೃತ್ವದ ಟೋಪಿ ಸರ್ಕಾರ ಕನ್ನಡಿಗರಿಗೆ ಟೋಪಿ ಹಾಕಿ ಕರ್ನಾಟಕದ ವಿವಿಧೆಡೆ ಮಿನಿ ಬಾಂಗ್ಲಾದೇಶಗಳನ್ನು ಸೃಷ್ಟಿಸಿದೆ. ಕರ್ನಾಟಕ ಈಗ ಮಿನಿ ಬಾಂಗ್ಲಾಗಳ ಹಬ್ ಆಗುತ್ತಿದೆ. ನಾನು ಇಲ್ಲಿಗೆ ಭೇಟಿ ನೀಡುವ ಮುಂಚೆಯೇ ಬಿಜೆಪಿ ಮುಖಂಡರು ಇಲ್ಲಿ ಸರ್ವೆ ಮಾಡಿದ್ದಾರೆ. ಇಲ್ಲಿಗೆ ಆಂಧ್ರಪ್ರದೇಶದ ಪೆನುಗೊಂಡದಿಂದ ಬಂದವರು ಇಲ್ಲಿದ್ದಾರೆ. ಒಬ್ಬ ಮಹಿಳೆ 26 ವರ್ಷದಿಂದ ಇಲ್ಲಿಯೇ ಇದ್ದೇವೆ ಎನ್ನುತ್ತಾರೆ. ಅಂದರೆ ಆಕೆ ಎರಡು ವರ್ಷದ ಮಗುವಿದ್ದಾಗ ಹೇಗೆ ನಡೆದುಕೊಂಡು ಇಲ್ಲಿಗೆ ಬಂದಳು ಎಂಬ ಪ್ರಶ್ನೆ ಮೂಡುತ್ತದೆ. ಇದು ನಿಜಕ್ಕೂ ಸಾಧ್ಯವೇ? ಎಂದು ಪ್ರಶ್ನಿಸಿದರು.
ಇಲ್ಲಿ ವ್ಯವಸಾಯ ಮಾಡುವ ಜಾಗವಿಲ್ಲ. ಆದರೂ ಅಷ್ಟು ವರ್ಷದ ಹಿಂದೆ ಇಷ್ಟೊಂದು ಜನರು ಇಲ್ಲಿಗೇಕೆ ಬಂದರು? ಟಿಪ್ಪು ನಗರ ಮೊದಲಾದ ಪ್ರದೇಶಗಳಿಂದ ಕನ್ನಡ ಮಾತನಾಡುವವರನ್ನು ಇಲ್ಲಿಗೆ ಕರೆಸಲಾಗಿದೆ. ಸಚಿವ ಜಮೀರ್ ಅಹ್ಮದ್ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ಅಧಿಕಾರಿಗಳಿಗೆ ಬೆದರಿಕೆ ಹಾಕಿ, ಇಲ್ಲಿ ಇರುವವರೆಲ್ಲರೂ ಸ್ಥಳೀಯರು ಎಂದು ದಾಖಲು ಮಾಡಬೇಕು, ಯಾರನ್ನೂ ಪ್ರಶ್ನೆ ಮಾಡಬಾರದು ಎಂದು ಸೂಚಿಸಿದ್ದಾರೆ ಎಂದು ದೂರಿದರು.
280 ನಿವಾಸಿಗಳ ಬಗ್ಗೆ ತಪ್ಪು ಮಾಹಿತಿ
ಇಲ್ಲಿ 160 ನಿವಾಸಿಗಳಿದ್ದರು ಎಂದು ಸುದ್ದಿ ಆಗಿತ್ತು. ಅಧಿಕಾರಿಯನ್ನು ಕೇಳಿದರೆ 280 ಜನರಿದ್ದಾರೆ ಎನ್ನುತ್ತಿದ್ದಾರೆ. ಇನ್ನೂ ಜನಸಂಖ್ಯೆ 400 ಆಗಬಹುದು ಎನ್ನುತ್ತಿದ್ದಾರೆ. ಇಷ್ಟು ಜನರಿಗೆ ಆಶ್ರಯ ನೀಡುವ ಕೆಲಸ ಸರ್ಕಾರ ಮಾಡುತ್ತಿದೆ. ಒಂದೇ ವರ್ಷದ ಹಿಂದಿನ ಗೂಗಲ್ ಮ್ಯಾಪ್ನಲ್ಲಿ ಎಲ್ಲ ಕಡೆ ಹಸಿರು ಇತ್ತು. ಈಗ ಎಲ್ಲವೂ ಬದಲಾಗಿದೆ. ಒಂದೇ ವರ್ಷದಲ್ಲಿ ಇವರೆಲ್ಲರೂ ಇಲ್ಲಿಗೆ ಬಂದಿದ್ದಾರೆ. ಬಾಂಗ್ಲಾದಲ್ಲಿ 20,000 ರೂ. ನೀಡಿದರೆ ಗುರುತಿನ ಚೀಟಿ ನೀಡುತ್ತಾರೆ. ವಾಸೀಮ್ ಎಂಬ ರೌಡಿಶೀಟರ್ ಅವನ ಹೆಸರಲ್ಲೇ ಬಡಾವಣೆ ನಿರ್ಮಿಸಿದ್ದಾರೆ ಎಂದು ವಿವರಿಸಿದರು.
ಅಕ್ರಮವಾಗಿ ನೆಲೆಸಿದ್ದಕ್ಕೆ ಇವೆ ಪುರಾವೆಗಳು
ರಾಜ್ಯದಲ್ಲಿ 4 ಲಕ್ಷ ಜನರು ಮನೆಗೆ ವಿದ್ಯುತ್ ಸಂಪರ್ಕ ಇಲ್ಲದೆ ಬದುಕುತ್ತಿದ್ದಾರೆ. ಆದರೆ ಈ ಪ್ರದೇಶದಲ್ಲಿ ದುಬಾರಿ ಕೇಬಲ್ ಅಳವಡಿಸಿ ವಿದ್ಯುತ್ ಸಂಪರ್ಕ ನೀಡಲಾಗಿದೆ. ಬೆಸ್ಕಾಂ ಅಧಿಕಾರಿಗಳಿಗೆ ನಾಚಿಕೆಯಾಗಬೇಕು. ಮೀಟರ್ ಸಹ ಅಳವಡಿಸಿಲ್ಲ. ಬೆಂಕಿ ಅನಾಹುತವಾಗಿ ಯಾರಾದರೂ ಸತ್ತರೆ, ಮತ್ತೆ ಪರಿಹಾರ ನೀಡುತ್ತಾರೆ. ಬೆಂಗಳೂರಿನಲ್ಲಿ ಪೊಲೀಸರೇ ಡ್ರಗ್ ಮಾಫಿಯಾದಲ್ಲಿ ಶಾಮೀಲಾಗಿದ್ದು, 130 ಪೊಲೀಸರು ಅಮಾನತಾಗಿದ್ದಾರೆ. ಇದು ಉಡ್ತಾ ಬೆಂಗಳೂರು ಆಗಿದೆ. ಇಂತಹ ಸನ್ನಿವೇಶ ಇರುವಾಗ ಪ್ರತಿ ಕಾಲೋನಿಯಲ್ಲಿ ಬಾಂಗ್ಲಾ ಹುಟ್ಟಿಕೊಳ್ಳುತ್ತಿದೆ. ಇವರಿಗೆ ಕೆಲಸ ಕೊಟ್ಟವರಾರು, ಊಟ ಎಲ್ಲಿಂದ ಮಾಡುತ್ತಾರೆ ಎಂದು ಅಧಿಕಾರಿಗಳಿಗೆ ಗೊತ್ತಿಲ್ಲ. ಅನೇಕರ ಬಳಿಕ ಜನ್ಮ ಪ್ರಮಾಣಪತ್ರವೇ ಇಲ್ಲ. ಬೇರೆ ಸ್ಥಳದ ರೇಷನ್ ಕಾರ್ಡ್ ಇಟ್ಟುಕೊಂಡಿದ್ದಾರೆ. 600 ಕೋಟಿ ರೂ. ಮೌಲ್ಯದ ಜಮೀನನ್ನು ಇವರಿಗೆ ನೀಡಲಾಗಿದೆ ಎಂದು ಸರ್ಕಾರ ಹಾಗೂ ಅಧಿಕಾರಿಗಳ ನಡೆ ಖಂಡಿಸಿದರು.
ರಾಜ್ಯದಲ್ಲಿ ಪ್ರವಾಹದಿಂದ 13,999 ಮನೆಗಳಿಗೆ ಹಾನಿಯಾಗಿದ್ದು, ಅವರಿಗೆ ಮನೆ ನೀಡಿಲ್ಲ. ಅಂತಹವರು ನಮ್ಮದೇ ರೈತರ ಮಕ್ಕಳಾಗಿದ್ದು, ಇನ್ನೂ ನಿರಾಶ್ರಿತರಾಗಿದ್ದಾರೆ. 2,400 ಶಾಲೆಗಳ ಶೀಟ್ಗಳು ಹಾರಿ ಹೋಗಿದೆ. ಅದನ್ನು ಇನ್ನೂ ಕಟ್ಟಿಕೊಟ್ಟಿಲ್ಲ. ಆದರೆ ಹೊಸ ವರ್ಷಕ್ಕೆ ಬಾಂಗ್ಲಾದವರಿಗೆ ಮನೆಯ ಕೊಡುಗೆ ನೀಡಿದ್ದಾರೆ. ಇವೆಲ್ಲ ಸ್ಥಳಗಳು ಅಪರಾಧಿ ಚಟುವಟಿಕೆಗಳ ಕೇಂದ್ರವಾಗಲಿದೆ. ಸ್ಲೀಪರ್ ಸೆಲ್ಗಳು ಇಲ್ಲಿಗೆ ಬಂದು ನೆಲೆಸುತ್ತಾರೆ, ಭಯೋತ್ಪಾದಕರು ಬರುತ್ತಾರೆ ಎಂದು ಹೇಳಿದರು.












Click it and Unblock the Notifications