ಫಲಿತಾಂಶಕ್ಕೆ ಮುನ್ನ ದಿಗ್ಗಿ ಜತೆ ಸಿದ್ದು ಮಹತ್ವದ ಸಭೆ
ಬೆಂಗಳೂರು, ಮೇ8: ಲೋಕಸಭಾ ಚುನಾವಣೆ ಫಲಿತಾಂಶ ಕಳಪೆಯಾಗಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರ್ಚಿಗೆ ಸಂಚಕಾರವಿದೆ ಎಂಬ ಆತಂಕದ ನಡುವೆ ಮುಂದಿನ ಮಂಗಳವಾರ ಕಾಂಗ್ರೆಸ್ ಪಕ್ಷದ ಮಹತ್ವದ ಸಮನ್ವಯ ಸಮಿತಿ ಸಭೆ ನಡೆಯಲಿದೆ ಎಂದು ತಿಳಿದುಬಂದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಏಕಪಕ್ಷೀಯ ನಿರ್ಧಾರಗಳು, ಸಂಪುಟದ ಸಚಿವರ ಉದಾಸೀನ ಧೊರಣೆಗಳಿಂದ ಪಕ್ಷದ ಹೈಕಮಾಂಡ್ ತೀವ್ರ ಅಸಮಾಧಾನಗೊಂಡಿದೆ. ಸಮಸ್ಯೆಗಳು ಉಲ್ಬಣವಾಗುವ ಮುನ್ನವೇ ಅದಕ್ಕೆ ಮುಲಾಮು ಹಚ್ಚಲು ಸಮನ್ವಯ ಸಮಿತಿ ಸಭೆ ನಡೆಸಲಿದೆ ಎಂದು ತಿಳಿದು ಬಂದಿದೆ.
ಕರ್ನಾಟಕದಲ್ಲಿ ಪಕ್ಷದ ಉಸ್ತುವಾರಿ ವಹಿಸಿರುವ ದಿಗ್ವಿಜಯ್ ಸಿಂಗ್ ಅವರು 13 ರಂದು ನಗರಕ್ಕೆ ಆಗಮಿಸಲಿದ್ದು, ಸಮನ್ವಯ ಸಮಿತಿ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಹಾಲಿ ಸಚಿವರ ಕಾರ್ಯವೈಖರಿ ಪರಾಮರ್ಶೆ, ಸಂಭಾವ್ಯ ಸಂಪುಟ ಪುನಾರಚನೆ, ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಮುಂತಾದ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ.

ಜತೆಗೆ ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ಸರ್ಕಾರದ ಪಾತ್ರದ ಬಗ್ಗೆಯೂ ಚರ್ಚೆ ನಡೆಯಲಿದೆ. ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರಗೊಂಡಿದ್ದು, ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ ಸಮಸ್ಯೆ ಉಲ್ಬಣಗೊಂಡಿದೆ. ವಿದ್ಯುತ್ ಸಮಸ್ಯೆ ಕಾಡುತ್ತಿದೆ. ಇವುಗಳನ್ನು ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂಬ ಗಂಭೀರ ಆರೋಪ ಎದುರಾಗಿದೆ.
ದಿಗ್ವಿಜಯ್ ಸಿಂಗ್ ಅವರು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳಿಂದ ತಿಳಿದು ಬಂದಿದೆ. ಲೋಕಸಭೆ ಚುನಾವಣೆಯ ನಂತರ ಸಚಿವ ಸಂಪುಟದ ಸುಮಾರು 15 ಸಚಿವರ ಖಾತೆ ಬದಲಾವಣೆಯಾಗಲಿದೆ ಎಂಬ ವದಂತಿ ಕಾಂಗ್ರೆಸ್ ವಲಯದಲ್ಲಿ ದಟ್ಟವಾಗಿ ಕೇಳಿಬಂದಿದೆ. ಅದರ ಅಂಗವಾಗಿಯೇ ದಿಗ್ವಿಜಯ ಸಿಂಗ್ ಅವರು ಸಮನ್ವಯ ಸಮಿತಿ ಸಭೆ ಕರೆದಿದಿದ್ದಾರೆ ಎನ್ನಲಾಗಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದಾಗಿನಿಂದ ಒಂದಲ್ಲಾ ಒಂದು ಆರೋಪಗಳು ಕೇಳಿ ಬಂದಿವೆ. ಸಾರಿಗೆ ದರ ಏರಿಕೆ, ವಿದ್ಯುತ್ ಲೋಡ್ ಶೆಡ್ಡಿಂಗ್, ಟೋಲ್ ಶುಲ್ಕ ಹೆಚ್ಚಳ, ಕುಡಿಯುವ ನೀರಿನ ದರ ಏರಿಕೆ ಸೇರಿದಂತೆ ಜನ ಸಾಮಾನ್ಯರಿಗೆ ಹೊರೆಯಾಗುವಂತಹ ನಿರ್ಧಾರಗಳನ್ನು ಕೈಗೊಂಡು ಸರ್ಕಾರ ಮುಜುಗರಕ್ಕೀಡಾಗಿದೆ. ಜತೆಗೆ, ವಿರೋಧ ಪಕ್ಷವಾದ ಬಿಜೆಪಿಯು ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ಸಹ ನೀಡಿದೆ.
ಇದಲ್ಲದೆ 9 ವರ್ಷಗಳ ನಂತರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಒಂದು ವರ್ಷ ಆಡಳಿತ ನಡೆಸಿದರೂ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿಲ್ಲ ಎಂಬ ಕೂಗು ಕೇಳಿ ಬಂದ ಹಿನ್ನೆಲೆಯಲ್ಲಿ 13ರಂದು ನಡೆಯಲಿರುವ ಸಮನ್ವಯ ಸಮಿತಿ ಸಭೆ ಮಹತ್ವ ಪಡೆದುಕೊಳ್ಳಲಿದೆ. (ಕರ್ನಾಟಕ ಸಚಿವರ ಖಾತೆಗಳಲ್ಲಿ ಬದಲಾವಣೆ?)
ರಾಜ್ಯಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಆಯ್ಕೆ, ಮುಂಬರುವ ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧವೂ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ ನಡೆಯುವ ಸೂಚನೆಗಳಿವೆ. (ಸಿಎಂ ಸಿದ್ದರಾಮಯ್ಯ ಕುರ್ಚಿ ಮತ್ತೆ ಅಲಗಾಡುತ್ತಿದೆ)












Click it and Unblock the Notifications