ಕಾಂಗ್ರೆಸ್ ಕಾರ್ಯಕಾರಣಿಯಲ್ಲಿ ಜಮೀರ್ ಅಹ್ಮದ್ ಖಾನ್
ಬೆಂಗಳೂರು, ಅ.19 : ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಮೊದಲ ಬಾರಿಗೆ ಶನಿವಾರ ಕಾಂಗ್ರೆಸ್ ಕಾರ್ಯಕಾರಣಿ ಸಭೆ ನಡೆಯುತ್ತಿದೆ. ಖಾಸಗಿ ಹೋಟೆಲ್ ನಲ್ಲಿ ಆರಂಭವಾಗಿರುವ ಸಭೆಗೆ ಜೆಡಿಎಸ್ ಶಾಸಕ ಜಮೀರ್ ಅಹ್ಮದ್ ಖಾನ್ ಆಗಮಿಸುವ ಮೂಲಕ ಎಲ್ಲರ ಅಚ್ಚರಿಗೆ ಕಾರಣವಾಗಿದ್ದಾರೆ.
ಶನಿವಾರ ಬೆಳಗ್ಗೆ 11 ಗಂಟೆಗೆ ನಗರದ ಖಾಸಗಿ ಹೋಟೆಲ್ ನಲ್ಲಿ ಕೆಪಿಸಿಸಿ ಕಾರ್ಯಕಾರಣಿ ಸಭೆ ಪ್ರಾರಂಭವಾಯಿತು. ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಸಚಿವರು, ಶಾಸಕರು ಸೇರಿದಂತೆ ಕಾಂಗ್ರೆಸ್ ನಾಯಕರು ಭಾಗವಹಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಡೆಯುತ್ತಿರುವ ಮೊದಲ ಸಭೆ ಇದಾಗಿದೆ.

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ನಿರ್ದೇಶನದಂತೆ ಈ ಸಭೆ ನಡೆಯುತ್ತಿದೆ. ಲೋಕಸಭೆ ಚುನಾವಣೆಯ ಸಂಭಾವ್ಯ ಅಭ್ಯರ್ಥಿಗಳ ಹೆಸರು ಸೂಚಿಸಲು ಕಳುಹಿಸಲಾಗಿದ್ದ ವೀಕ್ಷಕರ ತಂಡದ ರಹಸ್ಯ ವರದಿ ಕೆಪಿಸಿಸಿ ಅಧ್ಯಕ್ಷರಿಗೆ ತಲುಪಿದೆ. ಈ ವರದಿ ಮತ್ತು ಲೋಕಸಭೆ ಚುನಾವಣೆಯ ಅಭ್ಯರ್ಥಿಗಳ ಆಯ್ಕೆ ಕುರಿತು ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಕೆಲವು ಶಾಸಕರು ಹೈಕಮಾಂಡ್ ನಾಕಯಕರಿಗೆ ಪತ್ರ ಬರೆದಿದ್ದಾರೆ ಎಂಬ ವಿವಾದ ಎದ್ದಿತ್ತು. ಸಿದ್ದರಾಮಯ್ಯ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಶಾಸಕರು ಇಂದಿನ ಸಭೆಯಲ್ಲಿ ಈ ಕುರಿತು ವಿಷಯ ಪ್ರಸ್ತಾಪಿಸುವ ಸಾಧ್ಯತೆ ಇದೆ.
ನಿಗಮ, ಮಂಡಳಿಗಳಿಗೆ ಅಧ್ಯಕ್ಷರ ನೇಮಕ, ಸಚಿವರ ಕಾರ್ಯವೈಖರಿ ಕುರಿತು ಮೌಲ್ಯ ಮಾಪನ ಮುಂತಾದ ವಿಚಾರಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ಎಐಸಿಸಿ ಸದಸ್ಯರಾದ ಶಾಂತಕುಮಾರ್, ಸೆಲ್ವ ಕುಮಾರ್ ಅವರ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ.
ಜಮೀರ್ ಹಾಜರಿ : ಕೆಪಿಸಿಸಿ ಕಾರ್ಯಕಾರಣಿ ಸಭೆ ನಡೆಯುತ್ತಿರುವ ಹೋಟೆಲ್ ನಲ್ಲಿ ಜೆಡಿಎಸ್ ನಾಯಕ, ಚಾಮರಾಜಪೇಟೆ ಕ್ಷೇತ್ರದ ಶಾಸಕ ಜಮೀರ್ ಅಹ್ಮದ್ ಖಾನ್ ಕಾಣಿಸಿಕೊಳ್ಳುವ ಮೂಲಕ ಕುತೂಹಲ ಮೂಡಿಸಿದ್ದಾರೆ. ಸಭೆ ಆರಂಭವಾದ ಕೆಲವೇ ಕ್ಷಣದಲ್ಲಿ ಹೋಟೆಲ್ ಆವರಣದಲ್ಲಿ ಜಮೀರ್ ಕಾಣಿಸಿಕೊಂಡರು. ಇದು ಹಲವಾರು ರಾಜಕೀಯ ಲೆಕ್ಕಾಚಾರಗಳಿಗೆ ಕಾರಣವಾಗಿದೆ.
ಕೆಲವು ದಿನಗಳ ಹಿಂದೆ ಜಮೀರ್ ಅಹ್ಮದ್ ಖಾನ್ ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿ ಹರಡಿತ್ತು. ನಂತರ ಕುಮಾರಸ್ವಾಮಿ ಅವರೊಂದಿಗೆ ಕಾಣಿಸಿಕೊಂಡ ಅವರು ಜೆಡಿಎಸ್ ಪಕ್ಷದಲ್ಲೇ ಇರುವ ಸೂಚನೆ ನೀಡಿದ್ದರು. ಆದರೆ, ಶನಿವಾರ ಕಾಂಗ್ರೆಸ್ ಕಾರ್ಯಕಾರಣಿ ಸಭೆ ನಡೆಯುತ್ತಿರುವ ಹೋಟೆಲ್ ನಲ್ಲಿ ಕಾಣಿಸಿಕೊಂಡಿದ್ದಾರೆ.












Click it and Unblock the Notifications