ಮಂಡ್ಯ ರಾಜಕೀಯ ಅಡ್ಡಗೋಡೆ ಮೇಲೆ ದೀಪವಿಟ್ಟ ದಿನೇಶ್ ಗುಂಡೂರಾವ್
ಬೆಂಗಳೂರು, ಮೇ 03: ಪಕ್ಷೇತರ ಅಭ್ಯರ್ಥಿ ಸುಮಲತಾ ಜೊತೆ ಮಂಡ್ಯ ಕಾಂಗ್ರೆಸ್ ನಾಯಕರು ಸಭೆ ನಡೆಸಿರುವುದು ರಾಜ್ಯ ರಾಜಕಾರಣದಲ್ಲಿ ಭಾರಿ ಕೋಲಾಹಲ ಎಬ್ಬಿಸಿದೆ, ಆದರೆ ಶಿಸ್ತು ಮೀರಿರುವ ತಮ್ಮ ನಾಯಕರ ವಿರುದ್ಧ ಕ್ರಮಕೈಗೊಳ್ಳಲು ಕೆಪಿಸಿಸಿ ಮೀನಾಮೇಷ ಎಣಿಸುತ್ತಿದೆ.
ಸುಮಲತಾ ಅವರನ್ನು ಭೇಟಿಯಾದ ಬಗ್ಗೆ ಇಂದು ಚೆಲುವರಾಯಸ್ವಾಮಿ ಅವರನ್ನು ಕರೆಸಿ ಮಾತುಕತೆ ನಡೆಸಿ ಮಾಹಿತಿ ಪಡೆದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು, ಮಂಡ್ಯ ಕಾಂಗ್ರೆಸ್ ಮುಖಂಡರ ವಿರುದ್ಧ ಯಾವುದೇ ಕ್ರಮ ಪ್ರಸ್ತುತ ಸಂದರ್ಭದಲ್ಲಿ ತೆಗೆದುಕೊಳ್ಳುತ್ತಿಲ್ಲ ಎಂದರು.
ಸುಮಲತಾ ಅವರೊಂದಿಗೆ ಮಂಡ್ಯ ಕಾಂಗ್ರೆಸ್ ಮುಖಂಡರು ರಹಸ್ಯ ಸಭೆ ನಡೆಸಿರುವ ಬಗ್ಗೆ ಮಾಧ್ಯಮ ವರದಿಗಳಿಂದ ತಿಳಿದುಕೊಂಡಿದ್ದೇನೆ, ನಾನು ಈವರೆಗೆ ವಿಡಿಯೋ ನೋಡಿಲ್ಲ ಎಂದು ಹೇಳಿದರು.

ಪ್ರಸ್ತುತ ಸಮಯದಲ್ಲಿ ಮಂಡ್ಯ ಕಾಂಗ್ರೆಸ್ ಮುಖಂಡರ ಮೇಲೆ ಯಾವುದೇ ಕ್ರಮ ಜರುಗಿಸುವುದಿಲ್ಲ ಎಂದು ಸ್ಪಷ್ಟಪಡಿಸಿರುವ ದಿನೇಶ್ ಗುಂಡೂರಾವ್ ಅವರು, ಮುಂದಿನ ದಿನಗಳಲ್ಲಿ ಕ್ರಮ ತೆಗೆದುಕೊಳ್ಳಲೂ ಬಹುದು ಎಂಬ ಸುಳಿವನ್ನೂ ನೀಡಿದ್ದಾರೆ.
ಕುಮಾರಸ್ವಾಮಿ ಅವರು ಮಂಡ್ಯ ಕಾಂಗ್ರೆಸ್ ಮುಖಂಡರ ಬಗ್ಗೆ ಹೈಕಮಾಂಡ್ಗೆ ದೂರು ನೀಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ದಿನೇಶ್ ಗುಂಡೂರಾವ್ ಅವರು, ಕುಮಾರಸ್ವಾಮಿ ಅವರು ಆ ಬಗ್ಗೆ ನಮ್ಮ ಬಳಿ ಚರ್ಚಿಸಿಲ್ಲ ಮತ್ತು ಹೈಕಮಾಂಡ್ಗೆ ದೂರು ನೀಡಿರುವ ಬಗ್ಗೆ ಮಾಹಿತಿ ಇಲ್ಲ ಎಂದಿದ್ದಾರೆ.
ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಪರ ಸೌಮ್ಯ ಭಾವ ತಳೆದಿರುವ ಕಾಂಗ್ರೆಸ್ ಮುಖಂಡರ ಬಗ್ಗೆ ಕೆಪಿಸಿಸಿ ಸಹ ಮೃದ ಧೋರಣೆ ಪ್ರಕಟಿಸಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ, ಕೆಪಿಸಿಸಿಯ ಈ ಧೋರಣೆ ಕುಮಾರಸ್ವಾಮಿ ಅವರಿಗೆ ಭಾರಿ ಅಸಹನೆ ಉಂಟು ಮಾಡಿದೆ ಎನ್ನಲಾಗಿದೆ.












Click it and Unblock the Notifications