ಡಿಕೆಶಿಗೆ ಕೆಪಿಸಿಸಿ ಯೋಗ, ಹೈಕಮಾಂಡ್ ಎದುರು ಸಿದ್ದು ಹೊಸರಾಗ!
Recommended Video
ಬೆಂಗಳೂರು, ಜನವರಿ.17: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕನಕಪುರ ಶಾಸಕ ಡಿ.ಕೆ.ಶಿವಕುಮಾರ್ ಹೆಸರು ಬಹುತೇಕ ಫೈನಲ್ ಆಗಿದೆ. ಕಾಂಗ್ರೆಸ್ ಹೈಕಮಾಂಡ್ ನಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ. ನವದೆಹಲಿ ಮಟ್ಟದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ ಪ್ಲಾನ್ ಎಲ್ಲವೂ ಉಲ್ಟಾ ಹೊಡೆದಿದೆ.
ಡಿಕೆಶಿ ಹೆಸರು ಫೈನಲ್ ಆಗುತ್ತಿದ್ದಂತೆ ಸಿದ್ದರಾಮಯ್ಯ ಬಣವು ಹೊಸ ವ್ಯೂಹ ರಚನೆಗೆ ಮುಂದಾಗಿದೆ. ರಾಜ್ಯದಲ್ಲಿ ಪ್ರತಿಪಕ್ಷ ನಾಯಕನ ಸ್ಥಾನ ಹಾಗೂ ಶಾಸಕಾಂಗ ಪಕ್ಷದ ನಾಯಕನ ಸ್ಥಾನ ನೀಡುವಂತೆ ಹೈಕಮಾಂಡ್ ಎದುರು ಪಟ್ಟು ಹಿಡಿದು ಕುಳಿತಿದೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕನಕಪುರ ಶಾಸಕ ಡಿ.ಕೆ.ಶಿವಕುಮಾರ್ ಹಾಗೂ ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ್ ನಡುವೆ ತೀವ್ರ ಪೈಪೋಟಿ ನಡೆದಿತ್ತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂ.ಬಿ.ಪಾಟೀಲ್ ಪರ ಹೈಕಮಾಂಡ್ ನಲ್ಲಿ ಬ್ಯಾಟಿಂಗ್ ನಡೆಸಿದ್ದರು. ಆದರೆ, ಹೈಕಮಾಂಡ್ ಸಿದ್ದರಾಮಯ್ಯನವರ ಎಲ್ಲ ಲೆಕ್ಕಾಚಾರವನ್ನು ತಲೆ ಕೆಳಗೆ ಮಾಡಿದೆ.

ಸಿದ್ದರಾಮಯ್ಯ ವಾದಕ್ಕೆ ಸೊಪ್ಪು ಹಾಕಲಿಲ್ಲವೇ ಹೈಕಮಾಂಡ್?
ಉತ್ತರ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ಅಸ್ತ್ರವನ್ನು ಇಟ್ಟುಕೊಂಡು ಮಾಜಿ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಎದುರು ಅಸ್ತ್ರ ಹೂಡಿದರು. ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ್ ಗೆ ಪಟ್ಟ ಕಟ್ಟುವುದರಿಂದ ಉತ್ತರ ಕರ್ನಾಟಕದಲ್ಲಿ ಪಕ್ಷಕ್ಕೆ ಬಲ ಹೆಚ್ಚುತ್ತದೆ ಎಂದು ವಾದಿಸಿದ್ದರು. ಆದರೆ, ಹೈಕಮಾಂಡ್ ನಾಯಕರು ಈ ವಾದವನ್ನು ತಿರಸ್ಕರಿಸಿದ್ದಾರೆ. ಇದರಿಂದ ಸಿದ್ದರಾಮಯ್ಯ ಬಣಕ್ಕೆ ತೀವ್ರ ಹಿನ್ನಡೆಯಾಗಿದೆ.

ಎರಡು ಸ್ಥಾನ ನೀಡುವಂತೆ ಸಿದ್ದರಾಮಯ್ಯ ಪಟ್ಟು
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಡಿ.ಕೆ.ಶಿವಕುಮಾರ್ ಆಯ್ಕೆ ಬಹುತೇಕ ಪಕ್ಕಾ ಆಗುತ್ತಿದ್ದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಹೊಸರಾಗ ಹಾಡುತ್ತಿದ್ದಾರೆ. ಕೆಪಿಸಿಸಿ ಸ್ಥಾನ ನೀಡದಿದ್ದಲ್ಲಿ ಉಳಿದಂತೆ ಎರಡು ಸ್ಥಾನಗಳನ್ನು ತಮ್ಮ ಬಣಕ್ಕೆ ನೀಡಬೇಕೆಂದು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಹಿಡಿತ ಸಾಧಿಸುವ ನಿಟ್ಟಿನಲ್ಲಿ ಶಾಸಕಾಂಗ ಪಕ್ಷದ ನಾಯಕನ ಸ್ಥಾನ ಹಾಗೂ ವಿರೋಧ ಪಕ್ಷದ ನಾಯಕನ ಸ್ಥಾನ ನೀಡುವಂತೆ ಹೈಕಮಾಂಡ್ ಎದುರು ಡಿಮ್ಯಾಂಡ್ ಮಾಡಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.

ಮಾಜಿ ಸಿಎಂ ಸಿದ್ದರಾಮಯ್ಯ ಬಣದಲ್ಲಿ ಹೆಚ್ಚಾಯಿತಾ ಢವಢವ?
ಹೈಕಮಾಂಡ್ ನಿಲುವಿನಿಂದ ಮಾಜಿ ಮುಖ್ಮಯಂತ್ರಿ ಸಿದ್ದರಾಮಯ್ಯ ಅಷ್ಟೇ ಅಲ್ಲ. ಅವರ ಬಣದ ಎಲ್ಲ ನಾಯಕರಲ್ಲೂ ಭೀತಿ ಎದುರಾಗಿದೆ. ರಾಜ್ಯ ಕಾಂಗ್ರೆಸ್ ನಲ್ಲಿ ಎಲ್ಲಿ ಹಿಡಿತ ಕೈ ತಪ್ಪಿ ಹೋಗುತ್ತದೆಯೋ ಎಂಬ ಅನುಮಾನ ಕಾಡುತ್ತಿದೆ. ಅದರಲ್ಲೂ ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಆಪ್ತ ಬಳಗದ ಬಹುತೇಕ ನಾಯಕರೆಲ್ಲ ಈಗ ಬಿಜೆಪಿ ಪಾಳಯಕ್ಕೆ ಸೇರಿ ಹೋಗಿದ್ದಾರೆ. ಉಳಿದಂತೆ ಕೆಲವು ನಾಯಕರನ್ನೇ ಇಟ್ಟುಕೊಂಡು ಸಿದ್ದರಾಮಯ್ಯ ಪಕ್ಷದಲ್ಲಿ ಹಿಡಿತ ಕಾಯ್ದುಕೊಳ್ಳಬೇಕಿದೆ.

ಸಿದ್ದರಾಮಯ್ಯಗೆ ಹಿನ್ನಡೆ, ಮೂಲ ಕಾಂಗ್ರೆಸ್ಸಿಗರಿಗೆ ಮುನ್ನಡೆ?
ರಾಜ್ಯದಲ್ಲಿ ಮೂಲ ಕಾಂಗ್ರೆಸ್ಸಿಗರು ಹಾಗೂ ಸಿದ್ದರಾಮಯ್ಯ ನಡುವೆ ಮೊದಲಿನಿಂದಲೂ ಮನಸ್ತಾಪಗಳು ಕೇಳಿ ಬಂದಿದ್ದವು. ಏಕಪಕ್ಷೀಯ ನಿರ್ಧಾರಗಳ ಬಗ್ಗೆ ಸಾಕಷ್ಟು ಬಾರಿ ಮೂಲ ಕಾಂಗ್ರೆಸ್ಸಿಗರು ಹೈಕಮಾಂಡ್ ಗೆ ದೂರು ನೀಡಿದ್ದರು. ಸಿದ್ದರಾಮಯ್ಯರಿಂದ ಪಕ್ಷಕ್ಕೆ ಹೊಡೆತ ಬೀಳುತ್ತಿದೆ ಎಂದು ಆರೋಪಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಮೂಲ ಕಾಂಗ್ರೆಸ್ಸಿಗರ ಮನವೊಲಿಸುವ ತಂತ್ರವನ್ನು ಹೈಕಮಾಂಡ್ ನಾಯಕರು ಹೂಡಿದ್ದಾರೆ.











Click it and Unblock the Notifications