ದಿಢೀರ್ ದೆಹಲಿಗೆ ತೆರಳಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್
ಬೆಂಗಳೂರು, ಆ. 17: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ದಿಢೀರ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂದು ಬೆಳಗ್ಗೆ ದೆಹಲಿಗೆ ಪ್ರಯಾಣ ಬೆಳೆಸಿದರು. ಬೆಂಗಳೂರು ಗಲಭೆ ಬೆನ್ನಲ್ಲೇ ಡಿಕೆಶಿ ಅವರು ದಿಢೀರ್ ದೆಹಲಿಗೆ ಪ್ರಯಾಣ ಬೆಳೆಸಿರುವುದು ಕುತೂಹಲ ಮೂಡಿಸಿದೆ.
Recommended Video
ಶಿವಕುಮಾರ್ ಅವರು ನಾಲ್ಕು ದಿನಗಳ ಕಾಲ ದೆಹಲಿಯಲ್ಲಿಯೇ ಉಳಿಯಲಿದ್ದು, ಆ. 20 ರಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ. ಭೇಟಿ ಸಂದರ್ಭದಲ್ಲಿ ರಾಜ್ಯದ ರಾಜಕೀಯ ವಿದ್ಯಮಾನಗಳ ಕುರಿತು ಹೈಕಮಾಂಡ್ಗೆ ಗಮನಕ್ಕೆ ತರಲಿದ್ದಾರೆ. ಜೊತೆಗೆ ಇತ್ತೀಚೆಗೆ ಬೆಂಗಳೂರಿನ ಕೆ.ಜಿ. ಹಳ್ಳಿಯಲ್ಲಿ ನಡೆದ ಘಟನೆಯ ಬಗ್ಗೆಯೂ ಶಿವಕುಮಾರ್ ಅವರು ಹೈಕಮಾಂಡ್ ಜೊತೆಗೆ ಚರ್ಚೆ ನಡೆಸಲಿದ್ದಾರೆ. ಸದ್ಯದಲ್ಲಿಯೇ ಬಿಬಿಎಂಪಿ ಚುನಾವಣೆ ಬರಲಿರುವುದು ಇದಕ್ಕೆ ಕಾರಣ.
ಸುದೀರ್ಘ ಭೇಟಿ
ಇಂದಿನಿಂದ ಮುಂದಿನ ನಾಲ್ಕು ದಿನಗಳ ಕಾಲ ಡಿಕೆಶಿ ಅವರು ದೆಹಲಿಯಲ್ಲಿಯೇ ಉಳಿಯಲಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಹ್ಮದ್ ಪಟೇಲ್ ಸೇರಿದಂತೆ ಉಳಿದ ಕಾಂಗ್ರೆಸ್ ಕೇಂದ್ರ ನಾಯಕರನ್ನು ಭೇಟಿ ಮಾಡಿ ಚರ್ಚೆ ಮಾಡಲಿದ್ದಾರೆ. ಅವರು ಅಧ್ಯಕ್ಷರಾದ ಬಳಿಕ ಇದು ದೆಹಲಿಗೆ ಮೊದಲ ಸುದೀರ್ಘ ಭೇಟಿಯಾಗಿದೆ. ಜೊತೆಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರನ್ನು ದೆಹಲಿಯಲ್ಲಿಯೇ ಆಗಷ್ಟ್ 19 ರಂದು ವೇಣುಗೋಪಾಲ್ ಭೇಟಿ ಮಾಡಲಿದ್ದಾರೆ. ಆ ಬಳಿಕ ನಂತರ ದಿ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಬೆಂಗಳೂರು ಗಲಭೆ
ಭೇಟಿ ಸಂದರ್ಭದಲ್ಲಿ ಬೆಂಗಳೂರಿನ ಕೆ.ಜಿ. ಹಳ್ಳಿ ಗಲಭೆ ಪ್ರಕರಣದ ಬಗ್ಗೆ ಡಿಕೆಶಿ ಅವರು ಹೈಕಮಾಂಡ್ ಮಾಹಿತಿ ಕೊಡಲಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಗಲಭೆಗೆ ಸಂಬಂಧಿಸಿದಂತೆ ಮಾಜಿ ಸಚಿವ ಡಾ. ಜಿ ಪರಮೇಶ್ವರ್ ನೇತೃತ್ವದ ಸತ್ಯಶೋಧನಾ ಸಮಿತಿಯು ಕೆಪಿಸಿಸಿಗೆ ವರದಿ ಸಲ್ಲಿಸಿದೆ. ಕಾಂಗ್ರೆಸ್ ನಾಯಕರು ಕಂಡುಕೊಂಡಿರುವ ಮಾಹಿತಿ ಸೇರಿದಂತೆ ಗಲಭೆಯಿಂದ ಆಗಬಹುದಾದ ರಾಜಕೀಯ ಪರಿಣಾಮಗಳ ಬಗ್ಗೆಯೂ ವಿವರಣೆ ನೀಡಲಿದ್ದಾರೆ.
ಬಿಬಿಎಂಪಿ ಚುನಾವಣೆ
ಶೀಘ್ರದಲ್ಲಿಯೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಎದುರಾಗಲಿದೆ. ಹೀಗಾಗಿ ಬೆಂಗಳೂರು ಗಲಭೆ ಪ್ರಕರಣ ಕುರಿತಂತೆ ಎಚ್ಚರಿಕೆಯ ನಡೆಯನ್ನು ಕಾಂಗ್ರೆಸ್ ಪಕ್ಷ ಇಡಲಿದೆ. ಹೀಗಾಗಿ ಕೆ.ಜಿ. ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡರೊಬ್ಬರ ಹೆಸರು ಕೇಳಿ ಬಂದಿರುವುದನ್ನು ಪಕ್ಷ ಗಂಭೀರವಾಗಿ ಪರಿಗಣಿಸಿದೆ. ಜೊತೆಗೆ ಬಿಬಿಎಂಪಿ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುವ ಬಗ್ಗೆಯೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೈಕಮಾಂಡ್ ಜೊತೆಗೆ ಚರ್ಚಿಸುವ ಸಾಧ್ಯತೆಯಿದೆ.
ಸಂಸದ ಡಿ.ಕೆ. ಸುರೇಶ್
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೊಂದಿಗೆ ಸಹೋದರ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ. ಸುರೇಶ್ ಅವರೂ ತೆರಳಿದ್ದಾರೆ. ಡಿಕೆಶಿ ಅವರು ಅಧಿಕಾರ ಸ್ವೀಕಾರ ಮಾಡಿದ ಬಳಿಕ ಕೊರೊನಾ ವೈರಸ್, ಲಾಕ್ಡೌನ್ ಹಿನ್ನೆಲೆಯಲ್ಲಿ ಹೈಕಮಾಂಡ್ ಭೇಟಿ ಸಾಧ್ಯವಾಗಿರಲಿಲ್ಲ. ವಿಡಿಯೋ ಕಾನ್ಫರೆನ್ಸ್ ಮೂಲಕ ಹೈಕಮಾಂಡ್ ಜೊತೆಗೆ ಡಿಕೆಶಿ ಚರ್ಚೆ ಮಾಡಿದ್ದರು.
ಇದೀಗ ಹೈಕಮಾಂಡ್ ಜೊತೆಗೆ ಮೊದಲ ಮುಖತಃ ಭೇಟಿಯನ್ನು ಡಿಕೆಶಿ ಮಾಡಲಿದ್ದು, ಮುಂದಿನ ರಾಜಕೀಯ ನಡೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.