ಡಿಕೆಶಿಯ ಸಂಬಂಧಿ, ಕೆಪಿಸಿಸಿ ಕಾರ್ಯಕಾರಿಣಿ ಸಮಿತಿ ಸದಸ್ಯ ಸಿ.ಪಿ.ಶರತ್ ಚಂದ್ರ ಎಎಪಿ ಸೇರ್ಪಡೆ
ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಸಂಬಂಧ ಹಾಗೂ ಕಾಂಗ್ರೆಸ್ ಮುಖಂಡರೊಬ್ಬರು ಆಮ್ ಆದ್ಮಿ ಪಕ್ಷ ಸೇರ್ಪಡೆಯಾದರು. ಜೆಡಿಎಸ್, ಬಿಜೆಪಿ, ಕಾಂಗ್ರೆಸ್ ನಾಯಕರು ಯಾವ ಕಾರಣಕ್ಕೆ, ಪಕ್ಷಕ್ಕೆ ಸೇರಿದವರ ಹಿನ್ನೆಲೆ ಏನು ಎಂದು ವಿವರಿಸಿದ ಮುಖಂಡ ಮುಖ್ಯಮಂತ್ರಿ ಚಂದ್ರು.
ಬೆಂಗಳೂರು, ಜನವರಿ 30: ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಸಹೋದರಿಯ ಪತಿಯೂ ಆದ ಕೆಪಿಸಿಸಿ ಕಾರ್ಯಕಾರಿಣಿ ಸಮಿತಿ ಸದಸ್ಯ ಸಿ.ಪಿ.ಶರತ್ ಚಂದ್ರ ಅವರು ಆಮ್ ಆದ್ಮಿ ಪಾರ್ಟಿ (AAP)ಗೆ ಸೇರ್ಪಡೆಯಾದರು.
ಬೆಂಗಳೂರಿನ ಆಮ್ ಆದ್ಮಿ ಪಕ್ಷ ಸೋಮವಾರ ನಗರದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಪಕ್ಷದ ಪ್ರಚಾರ ಹಾಗೂ ಜನಸಂಪರ್ಕ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹಾಗೂ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಭಾಸ್ಕರ್ ರಾವ್ರವರ ಸಮ್ಮುಖದಲ್ಲಿ ಸಿ.ಪಿ.ಶರತ್ ಚಂದ್ರ ಅವರು ಪಕ್ಷಕ್ಕೆ ಸೇರ್ಪಡೆಯಾದರು.
ಹೊಸ ಘಟಕ, ಪದಾಧಿಕಾರಿ ಘೋಷಣೆ, ಶೀಘ್ರವೇ ಚುನಾವಣೆ ಅಭ್ಯರ್ಥಿ ಆಯ್ಕೆ ಆರಂಭ: AAP
ಕಾಂಗ್ರೆಸ್ ನಾಯಕ ಪಕ್ಷ ಸೇರ್ಪಡೆಯಾದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಚಂದ್ರು ಅವರು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಜನಪ್ರತಿನಿಧಿಯಾಗಿದ್ದ ಕಾಂಗ್ರೆಸ್ನ ಸಿ.ಪಿ.ಶರತ್ ಚಂದ್ರರವರು ಆಮ್ ಆದ್ಮಿ ಪಾರ್ಟಿಗೆ ಸೇರ್ಪಡೆಯಾಗಿದ್ದು, ಆ ಭಾಗದಲ್ಲಿ ಪಕ್ಷದ ಸಂಘಟನೆಗೆ ಆನೆಬಲ ಸಿಕ್ಕಂತಾಗಿದೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮುಂತಾದ ಸಾಂಪ್ರದಾಯಿಕ ಪಕ್ಷಗಳ ನಿಷ್ಕ್ರಿಯತೆ, ಭ್ರಷ್ಟಾಚಾರ ಹಾಗೂ ಜನವಿರೋಧಿ ನಿಲುವುಗಳಿಂದ ಆ ಪಕ್ಷಗಳ ಪ್ರಾಮಾಣಿಕ ನಾಯಕರು ಆಮ್ ಆದ್ಮಿ ಪಾರ್ಟಿ ಸೇರುತ್ತಿದ್ದಾರೆ ಎಂದು ಅವರು ಟಾಂಗ್ ನೀಡಿದರು.
ಎಎಪಿ ಮುಖಂಡ ಭಾಸ್ಕರ್ ರಾವ್ ಅವರು, ಕಾನೂನು ಪದವೀಧರರಾದ ಸಿ.ಪಿ.ಶರತ್ ಚಂದ್ರರವರು ಉದ್ಯಮಿ ಹಾಗೂ ರೈತರು ಕೂಡ ಹೌದು. ವಿಜಯ ಬ್ಯಾಂಕ್ ಉದ್ಯೋಗಿಯಾಗಿದ್ದ ಸಂದರ್ಭದಲ್ಲಿ ಅಲ್ಲಿನ ಉದ್ಯೋಗಿಗಳ ಸಂಘದ ಉಪಾಧ್ಯಕ್ಷರಾಗಿ, ಬ್ಯಾಂಕ್ ನೌಕರರ ಸಮಸ್ಯೆಗಳನ್ನು ಬಗೆಹರಿಸಲು ಶ್ರಮಿಸಿದ್ದರು.
2013, 2014 ಮತ್ತ 2019ರ ಚುನಾವಣೆಗಳ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡಿದ ಅನುಭವ ಹೊಂದಿದ್ದಾರೆ. ಸಿಎಎ, ಎನ್ಆರ್ಸಿ, ಎನ್ಪಿಆರ್, ನೋಟು ಅಮಾನ್ಯೀಕರಣ ವಿರುದ್ಧದ ಹೋರಾಟಗಳಲ್ಲಿ ಕೂಡ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಕೋವಿಡ್ ಸಮಯದಲ್ಲಿ ರೇಷನ್ ಕಿಟ್ ವಿತರಣೆ, ಔಷಧ ವಿತರಣೆ, ರಕ್ತದಾನ ಶಿಬಿರಗಳ ಆಯೋಜನೆ ಆಯೋಜಿಸಿ ಸಾಮಾಜಿಕ ಕಳಕಳಿ ಮೆರೆದಿದ್ದಾರೆ. 2021-22ರ ಪ್ರವಾಹದ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಚನ್ನಪಟ್ಟಣದ ಜನರಿಗೆ ಆರ್ಥಿಕ ನೆರವು ಸಹ ಮಾಡಿದ್ದರು ಎಂದು ತಿಳಿಸಿದರು.
ಎಎಪಿ ಆಡಳಿತ ದೇಶಕ್ಕೆ ಮಾದರಿ
ಪಕ್ಷ ಸೇರಿ ಮಾತನಾಡಿದ ಸಿ.ಪಿ.ಶರತ್ ಚಂದ್ರ, ಆಮ್ ಆದ್ಮಿ ಪಾರ್ಟಿಯು ದೆಹಲಿ ಹಾಗೂ ಪಂಜಾಬ್ನಲ್ಲಿ ನೀಡುತ್ತಿರುವ ಆಡಳಿತವು ಅತ್ಯಂತ ಜನಪರ ಹಾಗೂ ದಕ್ಷವಾಗಿದೆ. ದೆಹಲಿಯಲ್ಲಿ ಶಿಕ್ಷಣ, ಆರೋಗ್ಯ ಹಾಗೂ ಮೂಲ ಸೌಕರ್ಯಗಳಲ್ಲಿ ತಂದಿರುವ ಕ್ರಾಂತಿಕಾರಿ ಬದಲಾವಣೆಗಳು ಇಡೀ ದೇಶಕ್ಕೆ ಮಾದರಿಯಾಗಿವೆ. ಕರ್ನಾಟಕದಲ್ಲೂ ಪ್ರಾಮಾಣಿಕ, ದಕ್ಷ ಹಾಗೂ ಜನಪರ ಆಡಳಿತ ಬರಬೇಕೆಂಬ ಸದುದ್ದೇಶದಿಂದ ಆಮ್ ಆದ್ಮಿ ಪಾರ್ಟಿಗೆ ಸೇರ್ಪಡೆಯಾಗುತ್ತಿದ್ದೇನೆ ಎಂದರು.