ಕಾಂಗ್ರೆಸ್ಗೆ ಇಬ್ಬರ ಸೇರ್ಪಡೆ; ಪಕ್ಷದ ಸದಸ್ಯರಿಗೆ ಮನವಿ ಮಾಡಿದ ಡಿಕೆಶಿ
ಬೆಂಗಳೂರು, ಡಿಸೆಂಬರ್ 11: ಹಳಬರು, ಹೊಸಬರು ಎಂಬ ವ್ಯತ್ಯಾಸವಿಲ್ಲದೆ ಎಲ್ಲರೂ ಒಟ್ಟಾಗಿ ಪಕ್ಷವನ್ನು ಬಲಪಡಿಸಲು ಶ್ರಮಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.
ಕ್ವೀನ್ಸ್ ರಸ್ತೆಯ ಪಕ್ಷದ ಕಚೇರಿಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಸೋಮಣ್ಣ ಬೇವಿನಮರದ್ ಹಾಗೂ 2018ರ ವಿಧಾನಸಭಾ ಚುನಾವಣೆಯಲ್ಲಿ ಕಿತ್ತೂರಿನಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಾಬಸಾಬ್ ಪಾಟೀಲ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಯಿತು.
ಈ ಸಂದರ್ಭ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, 'ವಿಧಾನ ಪರಿಷತ್ ಮಾಜಿ ಸದಸ್ಯ ಸೋಮಣ್ಣ ಬೇವಿನಮರದ್ ಅವರು ಈಗಾಗಲೇ ನನ್ನನ್ನು, ನಮ್ಮ ಶಾಸಕಾಂಗ ಪಕ್ಷದ ನಾಯಕರು ಹಾಗೂ ಕಾರ್ಯಾಧ್ಯಕ್ಷರನ್ನು ಭೇಟಿ ಮಾಡಿ ಪಕ್ಷ ಸೇರುವ ಇಂಗಿತ ವ್ಯಕ್ತಪಡಿಸಿದ್ದರು. ನಮ್ಮ ಸ್ಥಳೀಯ ನಾಯಕರು ಇವರ ಸೇರ್ಪಡೆಯಿಂದ ಪಕ್ಷಕ್ಕೆ ಒಳ್ಳೆಯದಾಗುತ್ತದೆ ಎಂದು ಸಲಹೆ ನೀಡಿದರು. ಅವರು ಯಾವುದೇ ಷರತ್ತು ಇಲ್ಲದೇ ಅಪಾರ ಸಂಖ್ಯೆಯ ಬೆಂಬಲಿಗರೊಂದಿಗೆ ಪಕ್ಷಕ್ಕೆ ಬರುತ್ತಿದ್ದಾರೆ" ಎಂದು ಘೋಷಿಸಿದರು.

"ಸೋನಿಯಾ ಗಾಂಧಿ ಅವರು ಮಾತ್ರ ಟಿಕೆಟ್ ನೀಡುವುದು"
ಕಿತ್ತೂರಿನ ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯರು, 2018ರ ವಿಧಾನಸಭೆ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದ ಬಾಬಸಾಬ್ ಪಾಟೀಲ್ ಅವರು, ಅವರ ಬೆಂಬಲಿಗ ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿ ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗುತ್ತಿದೆ. ಇವರ ಪಕ್ಷ ಸೇರ್ಪಡೆಗೆ ಜಿಲ್ಲಾ ಘಟಕ ಶಿಫಾರಸ್ಸು ಮಾಡಿತ್ತು. ಈ ಬಗ್ಗೆ ನಮ್ಮ ನಾಯಕರ ಜತೆ ಚರ್ಚೆ ನಡೆಸಿದ್ದೆ ಎಂದರು. ಪಕ್ಷದಲ್ಲಿ ನಾನಾಗಲಿ, ಸಿಎಲ್ ಪಿ ನಾಯಕರಾಗಲಿ, ವೇದಿಕೆ ಮೇಲೆ ಕೂತಿರುವ ನಾಯಕರಾಗಲಿ ಯಾರು ಕೂಡ ಟಿಕೆಟ್ ನೀಡುವುದಿಲ್ಲ. ಅದನ್ನು ನೀಡುವುದು ನಮ್ಮ ರಾಷ್ಟ್ರೀಯ ಅಧ್ಯಕ್ಷರಾದ ಸೋನಿಯಾ ಗಾಂಧಿ ಅವರು ಮಾತ್ರ. ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಹೇಳಿದರು.

ಪಕ್ಷದ ಸದಸ್ಯರಿಗೆ ಮನವಿ ಮಾಡಿದ ಡಿಕೆಶಿ
"ಕಾಂಗ್ರೆಸ್ ನಲ್ಲಿ ವ್ಯಕ್ತಿ ಪೂಜೆಗೆ ಅವಕಾಶವಿಲ್ಲ, ಪಕ್ಷ ಪೂಜೆ ಮಾಡಬೇಕು. ಹೊಸಬರು, ಹಳಬರು ಎನ್ನದೇ ಎಲ್ಲರನ್ನು ಒಟ್ಟಾಗಿ ಕರೆದುಕೊಂಡು ಹೋಗಬೇಕು. ನಮ್ಮ ಪರಾಜಿತ ಅಭ್ಯರ್ಥಿಗಳ ಜತೆ ಸೇರಿ ಶಿಸ್ತಿನಿಂದ ಕೆಲಸ ಮಾಡಬೇಕು ಎಂದು ಮನವಿ ಮಾಡುತ್ತೇನೆ. ಪಕ್ಷಕ್ಕೆ ಬಲ ತುಂಬುವವರು, ತಾಳ್ಮೆ ಇರುವವರಿಗೆ ಖಂಡಿತವಾಗಿ ಫಲ ಸಿಗಲಿದೆ. ಸ್ಥಳೀಯ ಸಂಸ್ಥೆ ಹಾಗೂ ಮುಂಬರುವ ಚುನಾವಣೆಯಲ್ಲಿ ಹೇಗೆ ಕೆಲಸ ಮಾಡುತ್ತೀರಿ ಎಂಬುದು ಮುಖ್ಯವಾಗುತ್ತದೆ' ಎಂದರು.

"ಜಾತಿ, ಧರ್ಮ ಆಧಾರದ ಮೇಲೆ ಶಾಸನ"
ನೀವೆಲ್ಲರೂ ರಾಜ್ಯ ರಾಜಕಾರಣ ಗಮನಿಸುತ್ತಿದ್ದೀರಿ. ರಾಜ್ಯದಲ್ಲಿ ಈಗಾಗಲೇ ಜಾರಿಯಲ್ಲಿರುವ ಗೋಹತ್ಯೆ ನಿಷೇಧ ಕಾಯ್ದೆಯನ್ನು ಹೊಸ ರಾಜಕೀಯ ರೂಪ ಕೊಡಲು ಮತ್ತೆ ಶಾಸನ ರೂಪದಲ್ಲಿ ತಂದಿದ್ದಾರೆ. ಸದನದಲ್ಲಿ ಈ ಬಗ್ಗೆ ಚರ್ಚೆ ಮಾಡದೇ ಜಾರಿಗೆ ತರಲಾಗಿದೆ. ಅವರು ಜಾತಿ, ಧರ್ಮದ ಆಧಾರದ ಮೇಲೆ ಈ ಶಾಸನ ತರುತ್ತಿದ್ದಾರೆ" ಎಂದು ಆರೋಪಿಸಿದರು.
Recommended Video

"ಈ ಕಾಯ್ದೆಯಿಂದ ರೈತರಿಗೆ ತೊಂದರೆ"
ಈ ಕಾಯ್ದೆಯಿಂದ ರೈತರಿಗೆ ತೊಂದರೆಯಾಗುತ್ತಿದೆ ಎಂದು ನಾವು ಹೇಳುತ್ತಿದ್ದೇವೆ. ದನ, ಕರುಗಳನ್ನು ಸಾಕಿ ಬದುಕುತ್ತಿರುವವರಿಗೆ ಈ ಶಾಸನದಿಂದ ಮಾರಕವಾಗಲಿದೆ ಎಂದು ಸದನದಲ್ಲಿ ಪ್ರತಿಭಟಿಸಲು ನಮಗೆ ಅವಕಾಶ ಸಿಗಲಿಲ್ಲ. ಇದಾದ ನಂತರ ನಮ್ಮ ಶಾಸಕರು, ರೈತರು ಪ್ರತಿಭಟನೆ ಮಾಡುತ್ತಿರುವ ಫ್ರೀಡಂ ಪಾರ್ಕ್ ಗೆ ಹೋಗಿ ಅವರ ಜತೆ ನಿಂತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಸಲೀಂ ಅಹ್ಮದ್, ಮಾಜಿ ಸ್ಪೀಕರ್ ಕೆ.ಬಿ ಕೋಳಿವಾಡ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.












Click it and Unblock the Notifications