ಗಾಂಧಿ ಪರಿವಾರಕ್ಕಾಗಿ ಎಲ್ಲಾ ತ್ಯಾಗಕ್ಕೂ ಸಿದ್ಧ; ಡಿ. ಕೆ. ಶಿವಕುಮಾರ್
ಬೆಂಗಳೂರು ಜೂನ್ 15: "ಮುಖ್ಯಮಂತ್ರಿಗಳು ಸೇರಿದಂತೆ ಬಿಜೆಪಿ ರಾಜ್ಯ ಹಾಗೂ ಕೇಂದ್ರ ಸಚಿವರು ವಿಧಾನಸೌಧದ ಒಳಗೆ ಹಾಗೂ ಹೊರಗೆ ಯಾತ್ರೆ, ಮೆರವಣಿಗೆಗಳು ಮಾಡಿ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ್ದರೂ ಯಾವುದೇ ಪ್ರಕರಣ ದಾಖಲಾಗಿಲ್ಲ. ಆದರೆ ನಮ್ಮ ಮೇಲೆ ಮಾತ್ರ ಪ್ರಕರಣ ದಾಖಲಿಸಿದ್ದಾರೆ. ಆ ಮೂಲಕ ಅಧಿಕಾರ ದುರುಪಯೋಗ ಆಗುತ್ತಿದೆ. ಸರ್ಕಾರ ಏನೇ ಮಾಡಿದರೂ ನಾವು ನಮ್ಮ ಜನಪರ ಹೋರಾಟ ಮುಂದುವರಿಸುತ್ತೇವೆ" ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಮೇಕೆದಾಟು ಪಾದಯಾತ್ರೆ, ಕೋವಿಡ್ ನಿಯಮಗಳ ಉಲ್ಲಂಘನೆ, ಕೃಷಿ ಕಾಯ್ದೆ ವಿರುದ್ಧ ನಡೆಸಿದ್ದ ಪ್ರತಿಭಟನೆ ಸಂಬಂಧ ದಾಖಲಾಗಿರುವ ಪ್ರಕರಣಗಳ ವಿಚಾರಣೆಗೆ ಸಿಟಿ ಸಿವಿಲ್ ಕೋರ್ಟ್ಗೆ ಬುಧವಾರ ಹಾಜರಾಗಿದ್ದ ಡಿ. ಕೆ. ಶಿವಕುಮಾರ್ ಮಾಧ್ಯಮಗಳ ಜೊತೆ ಮಾತನಾಡಿದರು.
"ರಾಷ್ಟ್ರ ಮಟ್ಟದಲ್ಲಿ ನಮ್ಮ ನಾಯಕರು ಯಾವುದೇ ತಪ್ಪು ಮಾಡದಿದ್ದರೂ ಸುಳ್ಳು ಕೇಸ್ ದಾಖಲಿಸಲಾಗಿದೆ. ನೆಹರೂ, ತಿಲಕ್ ಹಾಗೂ ಪಟೇಲರು ಸ್ವಾತಂತ್ರ್ಯ ಹೋರಾಟ ಸಂದರ್ಭದಲ್ಲಿ ಜನರಲ್ಲಿ ಅರಿವು ಮೂಡಿಸಲು ಆರಂಭಿಸಿದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಇಲ್ಲಿಯವರೆಗೂ ಉಳಿಸಿಕೊಂಡು ಬರಲಾಗಿದೆ. ಕಾಂಗ್ರೆಸ್ ನಾಯಕರೆಲ್ಲರೂ ಇದರ ನಿರ್ವಹಣೆಗೆ ಹಣ ನೀಡಿದ್ದಾರೆ. ಈ ಸಂಸ್ಥೆ ಟ್ರಸ್ಟ್ ಮೂಲಕ ನಡೆಯುತ್ತಿದೆಯೇ ಹೊರತು ಇದನ್ನು ಯಾವುದೇ ನಾಯಕರು ತಮ್ಮ ಆಸ್ತಿ ಎಂದು ಹೇಳಿಕೊಂಡಿಲ್ಲ" ಎಂದರು.
ತುರ್ತು ಪರಿಸ್ಥಿತಿ ಬದಲು ಹೊಸ ದರ್ಬಾರ್
"ನಾನು ಕೆಪಿಸಿಸಿ ಅಧ್ಯಕ್ಷನಾಗಿದ್ದ ಮಾತ್ರಕ್ಕೆ ಅದು ನನ್ನ ಆಸ್ತಿ ಎಂದು ಘೋಷಣೆ ಮಾಡಿಕೊಳ್ಳಲು ಸಾಧ್ಯವೇ?. ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದವರು ಆ ಸಂಸ್ಥೆಯ ಮುಖ್ಯಸ್ಥರಾಗಿರುತ್ತಾರೆ. ನಮ್ಮ ನಾಯಕರ ಚುನಾವಣಾ ಅಫಿಡವಿಟ್ಗಳನ್ನು ಪರಿಶೀಲಿಸಿ. ಯಂಗ್ ಇಂಡಿಯಾ ಕಂಪನಿಯಾಗಲಿ, ಎಜಿಎಲ್ ಕಂಪನಿಗಳ ಮಾಲೀಕತ್ವವನ್ನು ಯಾರಾದರೂ ಹೇಳಿಕೊಂಡಿದ್ದಾರಾ? ಇಲ್ಲ. ಕಾಂಗ್ರೆಸ್ ಕಚೇರಿಗೆ ಹೋಗುವ ನಾಯಕರನ್ನು ಬಂಧಿಸಲಾಗುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಟ ಮಾಡುವ ಹಕ್ಕನ್ನು ಸಂವಿಧಾನ ನೀಡಿದೆ. ಈ ಹಕ್ಕಿನ ಆಧಾರದ ಮೇಲೆ ಪ್ರತಿಭಟನೆ ಮಾಡಲು ಅವಕಾಶ ನೀಡುತ್ತಿಲ್ಲ. ಇದನ್ನು ತುರ್ತು ಪರಿಸ್ಥಿತಿ ಎನ್ನುವ ಬದಲು ಇದಕ್ಕೆ ಹೊಸ ದರ್ಬಾರ್ ಎಂಬ ಹೆಸರನ್ನು ಇಡಬೇಕಿದೆ" ಎಂದು ಡಿ. ಕೆ. ಶಿವಕುಮಾರ್ ಆರೋಪಿಸಿದರು.
ವರ್ಷಕ್ಕೆ ಎರಡು ಕೋಟಿ ಉದ್ಯೋಗವೆಲ್ಲಿ?
"ಬಿಜೆಪಿ ಸರ್ಕಾರದಿಂದ ಪೊಲೀಸ್ ನೇಮಕಾತಿಯಿಂದ ಎಲ್ಲ ನೇಮಕಾತಿಯಲ್ಲಿ ಅಕ್ರಮ ನಡೆದಿಲ್ಲವೇ?. ಈಗ ಹೊಸದಾಗಿ 10 ಲಕ್ಷ ಉದ್ಯೋಗಕ್ಕೆ ನೇಮಕ ಘೋಷಣೆ ಮಾಡಿದ್ದಾರೆ. ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇವೆ ಎಂದು ಹೇಳಿದಂತೆ 8 ವರ್ಷದಲ್ಲಿ 16 ಕೋಟಿ ಉದ್ಯೋಗ ನೀಡದೇ ಈಗ ಕೇವಲ 10 ಲಕ್ಷ ಉದ್ಯೋಗದ ಬಗ್ಗೆ ಮಾತನಾಡುತ್ತಿರುವುದೇಕೆ?. ಇದೆಲ್ಲವೂ ಜನರನ್ನು ತಪ್ಪು ದಾರಿಗೆ ಎಳೆಯವ ಪ್ರಯತ್ನ" ಎಂದು ಡಿ. ಕೆ. ಶಿವಕುಮಾರ್ ದೂರಿದರು.
ತ್ಯಾಗದ ಹೋರಾಟಕ್ಕೆ ಸಿದ್ದವಿದ್ದೇವೆ
"ಬಿಜೆಪಿಯ ಯಾರು ಬೇಕಾದರೂ ಏನಾದರೂ ಮಾತನಾಡಲಿ. ನಮ್ಮ ನಿಲುವು, ಬಿಜೆಪಿಯ ದ್ವೇಷದ ರಾಜಕಾರಣ, ನಮ್ಮ ನಾಯಕರನ್ನು ಮುಗಿಸಲು ಪ್ರಯತ್ನಿಸುತ್ತಿರುವುದು ಜನರಿಗೆ ಅರ್ಥವಾಗುತ್ತಿದೆ. ಕಾಂಗ್ರೆಸಿಗರು ದೇಶದ ಸ್ವಾತಂತ್ರ್ಯಕ್ಕೆ ಪ್ರಾಣವನ್ನೇ ನೀಡಿದ್ದು, ಎಲ್ಲ ರೀತಿಯ ತ್ಯಾಗ, ಹೋರಾಟಕ್ಕೂ ಸಿದ್ಧವಿದ್ದೇವೆ" ಎಂದು ಡಿ. ಕೆ. ಶಿವಕುಮಾರ್ ಹೇಳಿದರು.
Recommended Video