ಸಡನ್ U-Turn: ಡಿಕೆಶಿಗೆ ಸಿಕ್ಕಿತಾ ಕೆಪಿಸಿಸಿ ಪಟ್ಟ 'ಕೈ' ತಪ್ಪುವ ಸುಳಿವು?
ಬೆಂಗಳೂರು, ಜನವರಿ.16: ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ (ಕೆಪಿಸಿಸಿ) ಅಧ್ಯಕ್ಷ ಸ್ಥಾನ ಕೈ ತಪ್ಪುವ ಸುಳಿವು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಸಿಕ್ಕಿತಾ ಎಂಬ ಅನುಮಾನಗಳು ಹೆಚ್ಚಾಗುತ್ತಿವೆ. ಕಳೆದ ಎರಡು ದಿನಗಳಿಂದ ಕನಕಪುರದ ಶಾಸಕರು ನೀಡುತ್ತಿರುವ ಹೇಳಿಕೆ ಈ ಅನುಮಾನಕ್ಕೆ ಮತ್ತಷ್ಟು ಪುಷ್ಟಿ ಒದಗಿಸುತ್ತಿವೆ.
ನವದೆಹಲಿಯಲ್ಲಿ ಕಳೆದ ಮೂರು ದಿನಗಳಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕಮಾಂಡ್ ನಾಯಕರ ಜೊತೆ ಚರ್ಚೆ ನಡೆಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯಾವ ನಾಯಕರು ಸೂಕ್ತ ಎಂಬ ಬಗ್ಗೆ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಎಐಸಿಸಿ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ, ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಜೊತೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಸುದೀರ್ಘ ಚರ್ಚೆಯನ್ನು ನಡೆಸಿದ್ದರು.
ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಅಕಾಂಕ್ಷಿ ಅಲ್ಲ: ಡಿಕೆಶಿ ಸ್ಪಷ್ಟನೆ
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸಾರಥ್ಯ ವಹಿಸಿಕೊಳ್ಳಲು ಆರಂಭದಿಂದಲೂ ಕನಕಪುರ ಶಾಸಕ ಡಿ.ಕೆ.ಶಿವಕುಮಾರ್ ಹಾಗೂ ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ್ ಹೆಸರು ಕೇಳಿ ಬಂದಿತ್ತು. ಈ ಪೈಕಿ ಡಿಕೆಶಿಗೆ ಕೆಪಿಸಿಸಿ ಪಟ್ಟ ಒಲಿಸುವುದು ಪಕ್ಕಾ ಎಂದೇ ಹೇಳಲಾಗುತ್ತಿತ್ತು. ಆದರೆ, ಎರಡೇ ದಿನಗಳಲ್ಲಿ ಎಲ್ಲವೂ ಉಲ್ಟಾ-ಪಲ್ಟಾ ಆಗುವ ಲಕ್ಷಣಗಳು ಎದ್ದು ಕಾಣುತ್ತಿವೆ.
ಸಡನ್ ಯೂ-ಟರ್ನ್ ಹೊಡೆದಿದ್ದೇಕೆ ಕನಕಪುರ ಬಂಡೆ?
ನವದೆಹಲಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರಳುವವರೆಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಡಿ.ಕೆ.ಶಿವಕುಮಾರ್ ನೇಮಕಗೊಳ್ಳುವುದು ಪಕ್ಕಾ ಎಂದು ಹೇಳಲಾಗುತ್ತಿತ್ತು. ಆದರೆ, ಬುಧವಾರ ದಾವಣಗೆರೆಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ತಾವು ಕೆಪಿಸಿಸಿ ಅಧ್ಯಕ್ಷ ಸ್ಥಾನ ಆಕಾಂಕ್ಷಿ ಅಲ್ಲವೇ ಅಲ್ಲ ಎಂದು ಬಿಟ್ಟರು. ನಾನು ಯಾವುದೇ ಸ್ಥಾನದ ಆಕಾಂಕ್ಷಿಯಲ್ಲ, ನನ್ನ ಹೆಸರು ಎಲ್ಲಿಯೂ ಪ್ರಸ್ತಾಪವಾಗಿಲ್ಲ. ಜನರ ಮಧ್ಯೆ ಇದ್ದುಕೊಂಡೇ ಕೆಲಸ ಮಾಡುತ್ತೇನೆ ಎಂದು ಹೇಳಿಕೆ ನೀಡಿದರು.
ದೆಹಲಿ ರಾಜಕಾರಣ ನಮಗೇಕೆ ಸ್ವಾಿಮಿ ಎಂದ ಡಿಕೆಶಿ
ಒಂದು ಕಡೆ ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಿ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸುತ್ತಿದ್ದಾರೆ. ಇನ್ನೊಂದು ಕಡೆಯಲ್ಲಿ ಡಿ.ಕೆ.ಶಿವಕುಮಾರ್ ಅನುಮಾನ ಹುಟ್ಟಿಸುವಂತಾ ಹೇಳಿಕೆ ನೀಡಿದ್ದಾರೆ. ದೆಹಲಿಯಲ್ಲಿ ರಾಜಕಾರಣ ಮಾಡುವವರು ಬೇಕಾದ್ರೆ ಮಾಡಿಕೊಳ್ಳಲಿ ಎಂಬ ಮಾತಿನ ಮರ್ಮವೇನು ಎಂಬ ಪ್ರಶ್ನೆ ಹುಟ್ಟಿಕೊಳ್ಳುತ್ತಿದೆ.
ಡಿಕೆಶಿಗೆ ಸಿದ್ದು ಕೊಡ್ತಾರಾ ಡಿಚ್ಚಿ? ಎಂ.ಬಿ.ಪಾಟೀಲ್ ಗೆ ಪಟ್ಟದ ಖುಷಿ?
ನಾನು ಹೊಲದಲ್ಲಿ ಉಳಿಮೆ ಮಾಡಿಕೊಂಡು ಇರುತ್ತೇನೆ
ಸಂಕ್ರಾಂತಿ ಹಬ್ಬದ ಹಿನ್ನೆಲೆ ಬೆಂಗಳೂರಿನ ಸದಾಶಿವನಗರದಲ್ಲಿದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿವಾಸಕ್ಕೆ ಡಿಕೆಶಿ ಭೇಟಿ ನೀಡಿದ್ದರು. ಬಳಿಕ ಮಾತನಾಡಿದ ಶಾಸಕ ಡಿ.ಕೆ.ಶಿವಕುಮಾರ್, ಬೇಕಿದ್ದಲ್ಲಿ ಕನಕಪುರದ ಹೊಲದಲ್ಲಿ ಕೆಲಸ ಮಾಡಿಕೊಂಡು ಇರುತ್ತೇನೆ ಎಂಬ ಹೇಳಿಕೆ ನೀಡಿದ್ದಾರೆ. ಇತ್ತೀಚಿಗೆ ಡಿಕೆಶಿ ನೀಡಿರುವ ಈ ಹೇಳಿಕೆಗಳೇ ಸಾಕಷ್ಟು ಅನುಮಾನಗಳನ್ನು ಹುಟ್ಟಿಸುತ್ತಿವೆ. ಹೈಕಮಾಂಡ್ ಮಟ್ಟದಲ್ಲಿ ಹಿನ್ನಡೆ ಅನುಭವಿಸಿದ ಸುಳಿವು ಹಿಡಿದುಕೊಂಡರಾ ಡಿ.ಕೆ.ಶಿವಕುಮಾರ್ ಎಂಬ ಪ್ರಶ್ನೆಯನ್ನು ಹುಟ್ಟು ಹಾಕುತ್ತಿದೆ.
ಸಿದ್ದು ಮಾಡಿದ ಮಾಸ್ಟರ್ ಪ್ಲಾನ್ ತಿಳಿದುಕೊಂಡರಾ ಡಿಕೆಶಿ?
ಇನ್ನು, ಶಾಸಕ ಡಿ.ಕೆ.ಶಿವಕುಮಾರ್ ಹೀಗೆ ಯೂ-ಟರ್ನ್ ಹೊಡೆಯುವುದಕ್ಕೂ ಸಾಕಷ್ಟು ಕಾರಣಗಳಿವೆ. ಹೈಕಮಾಂಡ್ ನಲ್ಲಿ ಹಿರಿಯ ನಾಯಕರ ಜೊತೆ ಚರ್ಚಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಕೆಶಿ ಬದಲು ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ್ ಪರ ಬ್ಯಾಟಿಂಗ್ ನಡೆಸಿದ್ದಾರೆ ಎನ್ನಲಾಗಿದೆ. ಸೋನಿಯಾ ಗಾಂಧಿ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ಮೂಲಕ ಎಂ.ಬಿ.ಪಾಟೀಲ್ ಅವರಿಗೆ ಪಟ್ಟ ಕಟ್ಟಲು ಪ್ಲಾನ್ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ದೆಹಲಿಯಲ್ಲಿ ನಡೆದಿರುವ ಈ ರಾಜಕೀಯ ಬೆಳವಣಿಗೆಯಿಂದ ವಿಚಲಿತಗೊಂಡು ಶಾಸಕ ಡಿ.ಕೆ.ಶಿವಕುಮಾರ್ ಇಂಥ ಹೇಳಿಕೆಗಳನ್ನು ನೀಡುತ್ತಿದ್ದಾರಾ ಎಂಬ ಅನುಮಾನ ಮೂಡುತ್ತಿದೆ.