'ನಾಳೆಯಿಂದ ನನ್ನ ಆಟ ಶುರು' ಎಂದ ರಮೇಶ್ ಜಾರಕಿಹೊಳಿಯನ್ನು ಬಂಧಿಸಿ: ಕಾಂಗ್ರೆಸ್ ಟ್ವೀಟ್
ಬೆಂಗಳೂರು, ಮಾರ್ಚ್ 26: ಸಿಡಿ ಯುವತಿ ಇಂದು ಲಿಖಿತ ದೂರು ನೀಡಿದ ಬೆನ್ನಲ್ಲೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಮೊದಲ ಬಾರಿ ಪ್ರತಿಕ್ರಿಯಿಸಿದ್ದರು.
ಇದಕ್ಕೆ ಕಾಂಗ್ರೆಸ್ ಪಕ್ಷ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ರಮೇಶ್ ಜಾರಕಿಹೊಳಿ ಅವರನ್ನು ಕೂಡಲೇ ಬಂಧಿಸಿ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಒತ್ತಾಯಿಸಿದ್ದಾರೆ.
"ಅಂತಹ ಸರ್ಕಾರವನ್ನೇ ಬೀಳಿಸಿದ್ದೇನೆ ಇದ್ಯಾವ ಲೆಕ್ಕ, ನಾಳೆಯಿಂದ ನನ್ನ ಆಟ ಶುರು ಮಾಡುತ್ತೇನೆ' ಎಂದು ರಮೇಶ್ ಜಾರಕಿಹೊಳಿ ಅವರು ಹೇಳಿಕೆ ನೀಡಿದ್ದಾರೆ. ಸಿಡಿ ಪ್ರಕರಣದ ಮೇಲೆ ಜಾರಕಿಹೊಳಿ ಯಾವ ಮಟ್ಟಿನ ಪ್ರಭಾವ ಬೀರಬಲ್ಲರು, ದಿಕ್ಕು ತಪ್ಪಿಸಲು ಏನನ್ನು ಬೇಕಾದರೂ ಮಾಡಬಲ್ಲರು ಎನ್ನುವುದಕ್ಕೆ ಈ ಹೇಳಿಕೆಗಳೇ ಸಾಕ್ಷಿ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರೇ ಇದಕ್ಕೆ ಅವಕಾಶ ನೀಡದಂತೆ ಕೂಡಲೇ ರಮೇಶ್ ಜಾರಕಿಹೊಳಿ ಅವರನ್ನು ಬಂಧಿಸಿ ಎಂದು ಆಗ್ರಹಿಸಿದ್ದಾರೆ.
ಸಿಡಿ ಯುವತಿ ಇಂದು ಲಿಖಿತ ದೂರು ನೀಡಿದ ಬೆನ್ನಲ್ಲೇ ಬೆಂಗಳೂರಿನ ಸದಾಶಿವನಗರದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಮೊದಲ ಬಾರಿ ಪ್ರತಿಕ್ರಿಯಿಸಿದ್ದು, ಸರ್ಕಾರವನ್ನೇ ಬೀಳಿಸಿದವನಿಗೆ ಸಿಡಿ ಕೇಸ್ ಯಾವ ಲೆಕ್ಕ. ನಾಳೆಯಿಂದ ನಮ್ಮ ಆಟ ಶುರುವಾಗಲಿದೆ'' ಎಂದು ಸ್ಪೋಟಕ ಹೇಳಿಕೆ ನೀಡಿದ್ದರು.
ನಾನು ಕೊಟ್ಟ ದೂರು ಮೊದಲು ತನಿಖೆಯಾಗಬೇಕು, ಸದ್ಯದಲ್ಲೇ ಮಹಾನಾಯಕ ಯಾರೆಂದು ಗೊತ್ತಾಗಲಿದೆ ಎಂದು ಹೇಳಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಈ ಸಿಡಿ ಪ್ರಕರಣದಲ್ಲಿ ನಾನು ನಿರಪರಾಧಿ, ಕಾನೂನು ಹೋರಾಟ ಮಾಡುತ್ತೇನೆ ಎಂದು ಹೇಳಿದರು.
ಯುವತಿ ರೂಂನಲ್ಲಿ 10 ಲಕ್ಷ ಹಣ ಸಿಕ್ಕಿದೆ, ಆರೋಪಿಗಳ ಮನೆಯಲ್ಲಿ ಚಿನ್ನ, ದಾಖಲೆಗಳನ್ನು ವಶಪಡಿಸಿಕೊಂಡಿರುವ ಬಗ್ಗೆ ಮೊದಲು ತನಿಖೆಯಾಗಲಿ ಎಂದು ಒತ್ತಾಯಿಸಿದರು.
ಸಿಡಿ ಯುವತಿ ನೀಡಿದ ದೂರಿನ ಮೇರೆಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ರಮೇಶ್ ಜಾರಕಿಹೊಳಿ ಅವರನ್ನು ಬಂಧಿಸುವ ಸಾಧ್ಯತೆ ಇದೆ.
ಸಿಡಿ ಯುವತಿ ನೀಡಿದ ದೂರಿನ ಮೇರೆಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.












Click it and Unblock the Notifications