ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ಬೆಂಬಲಿಗರ ಅಮಾನತು ಮಾಡಿದ ಕೆಪಿಸಿಸಿ
ಚಿಕ್ಕಬಳ್ಳಾಪುರ, ಜನವರಿ 09: ಸರ್ಕಾರ ಹಾಗೂ ಕಾಂಗ್ರೆಸ್ ವಿರುದ್ಧ ಬಂಡಾಯದ ಬಾವುಟ ಹಾರಿಸುತ್ತಿರುವ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಡಾ.ಸುಧಾಕರ್ಗೆ ಕೆಪಿಸಿಸಿ ಬುದ್ದಿಕಲಿಸುವ ನಿರ್ಣಯ ತೆಗೆದುಕೊಂಡಿದೆ.
ಶಾಸಕ ಸುಧಾಕರ್ ಅವರ ಬೆಂಗಲಿರನ್ನು ಕಾಂಗ್ರೆಸ್ ಜಿಲ್ಲಾ ಘಟಕದ ಸ್ಥಾನದಿಂದ ಕೆಪಿಸಿಸಿಯು ಅಮಾನತು ಮಾಡಿ ನಿನ್ನೆ ಆದೇಶ ಹೊರಡಿಸಿದೆ. ಆ ಮೂಲಕ ಸುಧಾಕರ್ ಅವರಿಗೆ ಶಿಸ್ತಿನ ಸಂದೇಶ ರವಾನಿಸಿದೆ.
ರಾಜ್ಯದ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ , ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲ್ ಇನ್ನೂ ಕೆಲವು ಪದಾಧಿಕಾರಿಗಳು ಗುರುನಾನಕ್ ಭವನದಲ್ಲಿ ಸಭೆ ಮಾಡುತ್ತಿದ್ದಾಗ ಅಲ್ಲಿಗೆ ಬಂದ ಸುಧಾಕರ್ ಬೆಂಬಲಿಗರು ಪ್ರತಿಭಟನೆ ಮಾಡಿ ಪಕ್ಷಕ್ಕೆ ಮುಜುಗರವಾಗುವಂತೆ ನಡೆದುಕೊಂಡಿದ್ದಾರೆ.

ಹಾಗಾಗಿ ಕೆಪಿಸಿಸಿ ಕಾರ್ಯದರ್ಶಿ ಕೆ.ಕೃಷ್ಣಮೂರ್ತಿ, ಚಿಕ್ಕಬಳ್ಳಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಫೀಕ್, ಮಂಚೇನಹಳ್ಳಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನಾರಾಯಣಸ್ವಾಮಿ ಅವರುಗಳನ್ನು ಪಕ್ಷದ ಶಿಸ್ತು ಉಲ್ಲಂಘಿಸಿದ್ದಕ್ಕೆ ಹಾಗೂ ಪಕ್ಷಕ್ಕೆ ಮುಜುಗರ ತಂದಿದ್ದಕ್ಕೆ ಅಮಾನತು ಮಾಡಲಾಗಿದೆ ಎಂದು ಕೆಪಿಸಿಸಿಯು ಪ್ರಕಟಣೆಯಲ್ಲಿ ಹೇಳಿದೆ.
ಈ ಆದೇಶವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಜಿ ಷಫಿ ಉಲ್ಲಾ ಮಾಡಿದ್ದಾರೆ. ಸುಧಾಕರ್ ಅವರ 200 ಕ್ಕೂ ಹೆಚ್ಚು ಬೆಂಬಲಿಗರು ಸಭೆ ನಡೆಯುವ ಸ್ಥಳಕ್ಕೆ ಬಂದು ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆದೇಶದಲ್ಲಿ ಹೇಳಿದ್ದಾರೆ.

ಸುಧಾಕರ್ ಅವರು ಸಚಿವ ಸ್ಥಾನ ಆಕಾಂಕ್ಷಿಯಾಗಿದ್ದರು ಆದರೆ ಅವರಿಗೆ ಸಚಿವ ಸ್ಥಾನ ದೊರಕಲಿಲ್ಲ. ನಂತರ ಅವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೊಡುವುದಾಗಿ ಕಾಂಗ್ರೆಸ್ ಹೇಳಿ ಪಟ್ಟಿಯನ್ನು ಸಿಎಂ ಸಹಿಗೆ ಕಳುಹಿಸಿತ್ತು. ಆದರೆ ಕುಮಾರಸ್ವಾಮಿ ಅವರು ಸುಧಾಕರ್ ಹೆಸರು ಕೈಬಿಟ್ಟಿದ್ದಾರೆ ಇದರಿಂದ ಸುಧಾಕರ್ ಹಾಗೂ ಬೆಂಬಲಿಗರು ತೀವ್ರವಾಗಿ ಆಕ್ರೋಶಗೊಂಡಿದ್ದು ಕಾಂಗ್ರೆಸ್ ವಿರುದ್ಧ ತಿರುಗಿ ಬಿದ್ದಿದ್ದಾರೆ.












Click it and Unblock the Notifications