ಕೆಪಿಎಲ್ ಫಿಕ್ಸಿಂಗ್ ಹಗರಣ; ಬುಕ್ಕಿ ಸಯ್ಯಂ ಬಂಧಿಸಿದ ಸಿಸಿಬಿ
ಬೆಂಗಳೂರು, ನವೆಂಬರ್ 10 : ಕರ್ನಾಟಕ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯಲ್ಲಿನ ಮ್ಯಾಚ್ ಫಿಕ್ಸಿಂಗ್ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಬುಕ್ಕಿಯನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಈಗಾಗಲೇ ಹಲವರ ಬಂಧನವಾಗಿದ್ದು, ವಿಚಾರಣೆ ತೀವ್ರಗೊಂಡಿದೆ.
ಬೆಟ್ಟಿಂಗ್ ಮತ್ತು ಮ್ಯಾಚ್ ಫಿಕ್ಸಿಂಗ್ ಹಗರಣ ಬೆಳಕಿಗೆ ಬಂದ ಬಳಿಕ ಬುಕ್ಕಿ ಸಯ್ಯಂ ತಲೆಮರೆಸಿಕೊಂಡಿದ್ದ. ವಿದೇಶದಲ್ಲಿ ಅಡಗಿ ಕುಳಿತಿದ್ದ ಸಯ್ಯಂ ಬಂಧನಕ್ಕೆ ಸಿಸಿಬಿ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿಗೊಳಿಸಿದ್ದರು.

1 ಓವರ್ಗೆ 10 ರನ್ ನೀಡಿದರೆ 5 ಲಕ್ಷ ರೂ. ನೀಡುವ ಫಿಕ್ಸಿಂಗ್ ಅನ್ನು ಸಯ್ಯಂ ನಡೆಸಿದ್ದಾನೆ ಎಂಬ ಆರೋಪವಿದೆ. ಈ ಫಿಕ್ಸಿಂಗ್ ಹಗರಣದಲ್ಲಿ ಯುವತಿಯರ ಹೆಸರು ಕೇಳಿ ಬಂದಿದ್ದು, ರೂಪದರ್ಶಿಗಳ ಮೂಲಕ ಆಟಗಾರರನ್ನು ಸಂಪರ್ಕಿಸಲಾಗುತ್ತಿತ್ತು ಎಂಬ ಮಾಹಿತಿ ಸಿಕ್ಕಿದೆ.
ಕೆಪಿಎಲ್ ಬೆಟ್ಟಿಂಗ್ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಬೆಳಗಾವಿ ಪ್ಯಾಂಥರ್ಸ್ ತಂಡದ ಮಾಲೀಕ ಅಶ್ಪಾಕ್ ಅಲಿ ತಾರ್, ಬಳ್ಳಾರಿ ಟಸ್ಕರ್ಸ್ ತಂಡದ ಡ್ರಮ್ಮರ್ ಭವೇಶ್, ಬೆಂಗಳೂರು ಬ್ಲಾಸ್ಟರ್ ತಂಡದ ಬೌಲಿಂಗ್ ಕೋಚ್ ವಿನು ಪ್ರಸಾದ್, ಬ್ಯಾಟ್ಸ್ಮನ್ ವಿಶ್ವನಾಥನ್ ಬಂಧಿಸಿದ್ದಾರೆ.
ವಿದೇಶದಲ್ಲಿ ತಲೆಮರಿಸಿಕೊಂಡಿದ್ದ ಬುಕ್ಕಿಗಳಾದ ಸಯ್ಯಂ, ಜತ್ತಿನ್ ಬಂಧನಕ್ಕೆ ಸಿಸಿಬಿ ಪೊಲೀಸರು ಲುಕ್ ಔಟ್ ನೋಟಿಸ್ ಹೊರಡಿಸಿದ್ದರು. ಈಗ ಸಯ್ಯಂ ಬಂಧನವಾಗಿದೆ.
ಬಳ್ಳಾರಿ ಟಸ್ಕರ್ಸ್ ಮತ್ತು ಹುಬ್ಬಳ್ಳಿ ಟೈಗರ್ಸ್ ನಡುವೆ ಕೆಪಿಎಲ್ ಫೈನಲ್ ಪಂದ್ಯ 2019ರ ಆಗಸ್ಟ್ 31ರಂದು ಮೈಸೂರಿನಲ್ಲಿ ನಡೆದಿತ್ತು. ಈ ಪಂದ್ಯದಲ್ಲಿ ಬೆಟ್ಟಿಂಗ್ ಮತ್ತು ಫಿಕ್ಸಿಂಗ್ ನಡೆದಿದೆ ಎಂಬ ಆರೋಪವಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಟಸ್ಕರ್ಸ್ ತಂಡದ ನಾಯಕ ಸಿ. ಎಂ. ಗೌತಮ್ ಮತ್ತು ಅಬ್ರಾರ್ ಖಾಜಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ.












Click it and Unblock the Notifications