Krishna Byre Gowda V/s Nirmala Sitharaman: ಬಹಿರಂಗ ಚರ್ಚೆಗೆ ಬರದ ನಿರ್ಮಲಾ ಸೀತಾರಾಮನ್, ದಾಖಲೆಯಿಟ್ಟ ಕೃಷ್ಣ ಬೈರೇಗೌಡ!
ಬೆಂಗಳೂರು ಏಪ್ರಿಲ್ 06: ತೆರಿಗೆ ಹಂಚಿಕೆ, ಬರ ಪರಿಹಾರ ಸೇರಿದಂತೆ ಅನೇಕ ವಿಷಯಗಳಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಮತ್ತು ಕೇಂದ್ರ ಬಿಜಪಿ ಸರ್ಕಾರದ ವಿರುದ್ಧ ವಾಗ್ಸಮರ ನಡೆಯುತ್ತಲೇ ಇತ್ತು. ಅದು ಈಗ ಬಹಿರಂಗ ಚರ್ಚೆವರೆಗೂ ಬಂದಿದೆ. ಎದುರುಬದುರು ಕುಳಿತು ಈ ಚರ್ಚೆ ಮಾಡಿಸೋಣ ಎಂದು ಜಾಗೃತ ಕರ್ನಾಟಕ ಹಾಗೂ ರಾಜ್ಯ ರೈತ ಸಂಘ ಚರ್ಚೆ ಆಯೋಜಿಸಿದ್ದವು. ಇದಕ್ಕೆ ನಿರ್ಮಲಾ ಸೀತಾರಾಮನ್ ಗೈರಾಗಿದ್ದರು.
ಸಂವಾದದಲ್ಲಿ ಭಾಗಿಯಾಗಿದ್ದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ನಿರ್ಮಲಾ ಸೀತಾರಾಮನ್ ಮೇಲೆ ನನಗೆ ವ್ಯಯಕ್ತಿಕ ಗೌರವ ಇದೆ ಎನ್ನುತ್ತಲೇ ಕೇಂದ್ರದ ನಡೆ ಖಂಡಿಸಿದ್ದಾರೆ. "ಜಿಎಸ್ಟಿ ತೆರಿಗೆ ಪದ್ಧತಿ ಜಾರಿಯಾದ ನಂತರ ರಾಜ್ಯಕ್ಕೆ ತೆರಿಗೆ ಹಂಚಿಕೆ ವಿಚಾರದಲ್ಲಿ ನಿರಂತರ ಅನ್ಯಾಯವಾಗುತ್ತಿದೆ. ಇದಲ್ಲದೆ, ಬರ ಪರಿಹಾರ ಹಾಗೂ ರಾಜ್ಯದ ನೀರಾವರಿ ಯೋಜನೆಗಳು ಸೇರಿದಂತೆ ಎಲ್ಲಾ ವಿಚಾರದಲ್ಲೂ ರಾಜ್ಯಕ್ಕೆ ಮೋಸವಾಗುತ್ತಿದೆ" ಎಂದಿದ್ದಾರೆ.

ಜಿಎಸ್ಟಿ ಜಾರಿಯಾಗುವ ಮೊದಲು ಮೌಲ್ಯವರ್ದಿತ ತೆರಿಗೆ ಜಾರಿಯಲ್ಲಿತ್ತು. ಜಿಎಸ್ಟಿ ಜಾರಿಯಾದ ನಂತರ 2019-20ರಲ್ಲಿ ರಾಜ್ಯದ ತೆರಿಗೆ ಆದಾಯದಲ್ಲಿ ರೂ.18,897 ಕೋಟಿ ಖೋತಾ ಆಗಿದೆ. 2023-24ರಲ್ಲಿ ರೂ.34,570 ಕೋಟಿ ನಷ್ಟವಾಗಿದೆ. 2020-21 ರಲ್ಲಿ ರಾಜ್ಯಕ್ಕೆ ರೂ.5495 ಕೋಟಿ ಹಾಗೂ 2021-26ರ ಅವಧಿಯಲ್ಲಿ ರೂ.6000 ಕೋಟಿ ಪರಿಹಾರ ನೀಡಬೇಕು ಎಂದು 15ನೇ ಹಣಕಾಸು ಆಯೋಗ ತನ್ನ ಅಂತಿಮ ವರದಿಯಲ್ಲಿ ತಿಳಿಸಿದೆ. ಆದರೆ, ಕೇಂದ್ರ ಸರ್ಕಾರ ಈವರೆಗೆ ಈ ಹಣ ಬಿಡುಗಡೆ ಮಾಡಿಲ್ಲ ಎಂದಿದ್ದಾರೆ.
ಈ ಹಿಂದೆ ಕೇಂದ್ರ ತೆರಿಗೆಯಲ್ಲಿ ರಾಜ್ಯಕ್ಕೆ ಶೇ.4.713 ರಷ್ಟು ತೆರಿಗೆ ಪಾಲು ಇತ್ತು. ಆದರೆ, 15ನೇ ಹಣಕಾಸು ಆಯೋಗ ಈ ಪ್ರಮಾಣವನ್ನು 3.617 ಕ್ಕೆ ಇಳಿಸಿದೆ. ಇದರಿಂದ ರಾಜ್ಯಕ್ಕೆ ಶೇ.23 ರಷ್ಟು ಹಣ ಕಡಿಮೆಯಾಗಿದೆ. ಇದರಿಂದ ರಾಜ್ಯಕ್ಕೆ ಈವರೆಗೆ ಒಟ್ಟಾಗಿ ರೂ.62,098 ಕೋಟಿ ನಷ್ಟ ಉಂಟಾಗಿದೆ.
ಕೇಂದ್ರ ಸರ್ಕಾರ ಸಂಗ್ರಹಿಸುವ ಸೆಸ್ ರ್ಚಾರ್ಜ್ ನಲ್ಲೂ ರಾಜ್ಯಕ್ಕೆ ಪಾಲು ನೀಡಬೇಕು. ಆದರೆ, 2020 ರಲ್ಲಿ ರಾಜ್ಯಗಳಿಗೆ ಪಾಲು ಕೊಡುವಂತಿಲ್ಲ ಎಂದು ಕೇಂದ್ರ ಸರ್ಕಾರ ಸಂವಿಧಾನದಲ್ಲಿ ತಿದ್ದುಮಾಡಿ ಮಾಡಿದೆ. ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ತೆರಿಗೆ ವಿಧಿಸಿದರೆ ರಾಜ್ಯಗಳಿಗೆ ಪಾಲು ನೀಡಬೇಕಾಗುತ್ತದೆ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಅದನ್ನು ಸೆಸ್ ಸರ್ಚಾರ್ಜ್ ಗೆ ಸೇರಿಸಿದೆ. 2017-18 ರಲ್ಲಿ ಪೆಟ್ರೋಲಿಯಂ ಉತ್ಪನ್ನಗಳಿಂದ ರೂ.2,18,553 ಕೋಟಿ ತೆರಿಗೆ ಹಣ ಕೇಂದ್ರದ ಪಾಲಾಗಿದ್ದರೆ, 2022-23 ರಲ್ಲಿ ರೂ. 5,52,789 ಕೋಟಿ ಹಣ ಸಂಗ್ರಹಿಸಲಾಗಿದೆ. ಆದರೆ, ಇದರಲ್ಲಿ ರಾಜ್ಯಗಳಿಗೆ ನಯಾಪೈಸೆಯೂ ಪಾಲಿಲ್ಲ.

ಕೇಂದ್ರ ಸರ್ಕಾರ ಆದಾಯ ತೆರಿಗೆಯ ಹಲವು ವಿಭಾಗಗಳನ್ನು ಸೆಸ್ ಸರ್ಚಾರ್ಜ್ ಗೆ ಸೇರ್ಪಡೆ ಮಾಡಿದ್ದು, 2014-2024ರ ಅವಧಿಯಲ್ಲಿ ಈ ವಿಭಾಗದಲ್ಲಿ 34 ಲಕ್ಷ ಕೋಟಿ ಹಣ ಸಂಗ್ರಹಿಸಿದೆ. ಆದರೆ, ರಾಜ್ಯ ಸರ್ಕಾರಗಳಿಗೆ ಇದರಲ್ಲಿ ಎಳ್ಳಷ್ಟೂ ಪಾಲಿಲ್ಲ. ಪರಿಣಾಮ ಈ ವಿಭಾಗದಲ್ಲಿ ರಾಜ್ಯಕ್ಕೆ ಒಟ್ಟಾರೆ ರೂ.1,85,468 ಕೋಟಿ ನಷ್ಟವಾಗಿದೆ ಎಂದು ಕೃಷ್ಣ ಬೈರೇಗೌಡ ಬೇಸರ ವ್ಯಕ್ತಪಡಿಸಿದ್ದಾರೆ.
ನೀರಾವರಿ ಯೋಜನೆಗಳಿಗೂ ಇಲ್ಲ ಕೇಂದ್ರದ ಬಲ
ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ರೂ 5,300 ಕೋಟಿ ಬಜೆಟ್ನಲ್ಲಿ ಹಣ ಘೋಷಿಸಲಾಗಿತ್ತು. ಆದರೆ ಈವರೆಗೆ ಒಂದು ರೂಪಾಯಿಯೂ ಬಂದಿಲ್ಲ. ನೀರಾವರಿ ಸಚಿವರೂ ಆಗಿರುವ ಡಿ.ಕೆ. ಶಿವಕುಮಾರ್ ಪತ್ರ ಬರೆದು ಮನವಿ ಮಾಡಿದ್ದಾರೆ. ಆದರೆ, ಈವರೆಗೆ ನಯಾಪೈಸೆಯೂ ಬಂದಿಲ್ಲ. ಮಹದಾಯಿಯಲ್ಲಿ ಕರ್ನಾಟಕ 7.25 ಟಿಎಂಸಿ ಕುಡಿಯುವ ನೀರನ್ನು ಬಳಸಿಕೊಳ್ಳಬಹುದು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿ ನಾಲ್ಕು ವರ್ಷಗಳಾಗಿವೆ. ಆದರೆ, ಕೇಂದ್ರ ಪರಿಸರ ಇಲಾಖೆಯಿಂದ ಇದಕ್ಕೆ ಒಂದೇ ಒಂದು ಅನುಮತಿ ಕೊಡಿಸಲು ಕೇಂದ್ರ ಸರ್ಕಾರ ಹಿಂದೇಟು ಹಾಕಿದೆ ಎಂದಿದ್ದಾರೆ.
ಮೇಕೆದಾಟು ವಿಚಾರದಲ್ಲೂ ರಾಜ್ಯಕ್ಕೆ ಅನ್ಯಾಯ
ತಮಿಳುನಾಡಿಗೆ ನೀಡಬೇಕಾದ 192 ಟಿಎಂಸಿ ನೀರು ಕೊಡಬೇಕು. ಆದರೆ , ಕೆಲವೊಮ್ಮೆ ಉತ್ತಮ ಮಳೆಯಾದಾಗ 100 ರಿಂದ 120 ಟಿಎಂಸಿ ನೀರು ಹೆಚ್ಚುವರಿಯಾಗಿ ಹೋಗುತ್ತದೆ. ಈ ನೀರನ್ನು ರಾಜ್ಯವೇ ಬಳಸಿಕೊಳ್ಳುವ ನಿಟ್ಟಿನಲ್ಲಿ 2016ರಲ್ಲಿ ಮೇಕೆದಾಟು ಪ್ರಾಜೆಕ್ಟ್ ಮಾಡಿ ಕೇಂದ್ರಕ್ಕೆ ವರದಿ ಕೊಟ್ಟಿದ್ದೇವೆ. ಆದರೆ, ಇಲ್ಲಿವರೆಗೆ ಒಪ್ಪಿಗೆ ಕೊಟ್ಟಿಲ್ಲ. ಕಾವೇರಿ ಟ್ರಿಬ್ಯುನಲ್ ಒಪ್ಪಿಗೆಯಿದೆ. ಆದರೆ, ಕೇಂದ್ರ ಸರ್ಕಾರ ಈ ಯೋಜನೆಗೆ ಒಪ್ಪಿಗೆ ಕೊಡುತ್ತಿಲ್ಲ ಎಂದಿದ್ದಾರೆ.












Click it and Unblock the Notifications