ಬೆಂಗಳೂರಿನಲ್ಲಿ ಕೆಎಸ್ಆರ್ ಟಿಸಿ ಬಸ್ಸಿಗೆ ಬೆಂಕಿ

ಗುರುವಾರ ಸಂಜೆ ಹಾಸನದಿಂದ ಬೆಂಗಳೂರಿನಿಂದ ಬರುತ್ತಿದ್ದ ಕೆಎಸ್ಆರ್ ಟಿಸಿಯ ಕರ್ನಾಟಕ ವೈಭವ್ ಬಸ್ಸಿನಲ್ಲಿ ಗೊರಗುಂಟೆ ಪಾಳ್ಯದ ಸರ್ಕಲ್ ಸಮೀಪ ಬೆಂಕಿ ಕಾಣಿಸಿಕೊಂಡಿದೆ. ಇಂಜಿನ್ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದನ್ನು ಗಮನಿಸಿದ ಚಾಲಕ, ಪ್ರಯಾಣಕರಿಗೆ ಬಸ್ಸಿನಿಂದ ಇಳಿಯುವಂತೆ ಸೂಚಿಸಿದ್ದಾನೆ. ತಕ್ಷಣ ಪ್ರಯಾಣಿಕರು ಬಸ್ಸಿನಿಂದ ಕೆಳಗೆ ಇಳಿದಿದ್ದು ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಎರಡು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯವನ್ನು ಕೈಗೊಂಡಿವೆ. ಚಾಲಕನ ಸಮಯ ಪ್ರಜ್ಞೆಯಿಂದ ಆಗಬಹುದಾಗಿದ್ದ ದುರಂತ ತಪ್ಪಿದೆ. ಬಸ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಬಸ್ಸಿನಲ್ಲಿ ಪ್ರಯಾಣಿಕರು ಸ್ಫೋಟಗಳನ್ನು ಸಾಗಿಸುತ್ತಿದ್ದರೆ ಎಂದು ಪರಿಶೀಲನೆ ನಡೆಸುತ್ತಿದ್ದಾರೆ.
ಬಸ್ಸಿಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ತುಮಕೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಬೆಂಕಿಯನ್ನು ನಂದಿಸಲಾಗಿದೆ. ಕೆಎ 13 ಎಫ್ 1949 ನಂಬರಿನ ಬಸ್ ಹಾಸನದಿಂದ ಬೆಂಗಳೂರಿಗೆ ಆಗಮಿಸುತ್ತಿತ್ತು ಎಂದು ತಿಳಿದುಬಂದಿದೆ. ಬಸ್ಸಿನಲ್ಲಿ ಎಷ್ಟು ಪ್ರಯಾಣಿಕರಿದ್ದರು ಎಂಬ ಬಗ್ಗೆ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಸಾರಿಗೆ ಸಚಿವರ ಪ್ರತಿಕ್ರಿಯೆ : ಗೊರಗುಂಟೆ ಪಾಳ್ಯದಲ್ಲಿ ಕರ್ನಾಟಕ ವೈಭವ್ ಬಸ್ಸಿಗೆ ಬೆಂಕಿ ಹೊತ್ತಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಈ ಬಸ್ ಅನ್ನು 2012 ಖರೀದಿ ಮಾಡಲಾಗಿತ್ತು. ಒಬ್ಬ ಚಾಲಕ ಮಾತ್ರ ಇದನ್ನು ಓಡಿಸುತ್ತಿದ್ದರು ಎಂದು ಹೇಳಿದ್ದಾರೆ.
ಕೆಲವು ದಿನಗಳ ಹಿಂದೆ ಬಸ್ ಅನ್ನು ಸಂಪೂರ್ಣವಾಗಿ ದುರಸ್ತಿ ಮಾಡಲಾಗಿತ್ತು. ನಂತರ ಬಸ್ ಕೇವಲ 250 ಕಿ.ಮೀ. ಮಾತ್ರ ಸಂಚರಿಸಿದೆ. ಇಲಾಖೆಯ ಇಂಜಿನಿಯರ್ ಗಳು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.
ಆಂಧ್ರಪ್ರದೇಶದ ಬಸ್ ದುರಂತದ ಬಳಿಕ ಸಂಸ್ಥೆಯ ಎಲ್ಲಾ ಬಸ್ ಗಳಲ್ಲಿ ತುರ್ತು ನಿರ್ಗಮನದ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸುವಂತೆ ಸೂಚನೆ ನೀಡಿದ್ದೇನೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ಪಡೆದು ಪ್ರತಿಕ್ರಿಯೆ ನೀಡುವುದಾಗಿ ಸಚಿವರು ಹೇಳಿದ್ದಾರೆ.
ಆಂಧ್ರಪ್ರದೇಶದಲ್ಲಿ ಜಬ್ಬಾರ್ ಟ್ರಾವೆಲ್ಸ್ ಬಸ್ ಬೆಂಕಿಗೆ ಆಹುತಿಯಾಗಿ 45 ಜನರು ಸಾವನ್ನಪ್ಪಿದ್ದರು. ಎರಡು ದಿನಗಳ ಹಿಂದೆ ಮಂಡ್ಯ ಜಿಲ್ಲೆಯ ಕಲ್ಲಳ್ಳಿ ಬಸಿ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್ ಟಿಸಿಯ ಐರಾವತ ಬಸ್ಸಿನ ಇಂಜಿನ್ ನಲ್ಲಿಯೂ ಬೆಂಕಿ ಕಾಣಿಸಿಕೊಂಡಿತ್ತು.












Click it and Unblock the Notifications