ಆರೋಗ್ಯ ಇಲಾಖೆ ಸಮಸ್ಯೆ ಬಗ್ಗೆ ಸಿಎಂಗೆ ಎಚ್ಡಿಕೆ ಪತ್ರ
ಬೆಂಗಳೂರು, ಜ.20 : ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಎಚ್.ಡಿ.ಕುಮಾರಸ್ವಾಮಿ ಪತ್ರ ಚಳವಳಿ ಮುಂದುವರೆದಿದೆ. ಆರೋಗ್ಯ ಇಲಾಖೆಯಲ್ಲಿರುವ ತೊಂದರೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಆರೋಗ್ಯ ಸಚಿವ ಯು.ಟಿ.ಖಾದರ್ ಅವರಿಗೆ ಕುಮಾರಸ್ವಾಮಿ ಪತ್ರ ಬರೆದಿದ್ದಾರೆ.
ಭಾನುವಾರ ಸಿಎಂ ಸಿದ್ದರಾಮಯ್ಯ ಮತ್ತು ಯುಟಿ ಖಾದರ್ ಅವರಿಗೆ ಕುಮಾರಸ್ವಾಮಿ ಬರೆದಿರುವ ಪತ್ರದಲ್ಲಿ, ಇಲಾಖೆ ಅವ್ಯವಸ್ಥೆ, ಕಳಪೆ ಔಷಧ ಮಾರಾಟ, ಡೆಂಗ್ಯೂ ಪರಿಹಾರ ವಿತರಣೆ ಮುಂತಾದವ ಹಲವಾರು ವಿಚಾರಗಳ ಕುರಿತು ಸರ್ಕಾರದ ಗಮನ ಸೆಳೆದಿದ್ದಾರೆ. ಆರೋಗ್ಯ ಇಲಾಖೆಗೆ ಕಾಯಕಲ್ಪ ನೀಡುವಂತೆ ಸರ್ಕಾವನ್ನು ಒತ್ತಾಯಿಸಿದ್ದಾರೆ.

ಆರೋಗ್ಯ ಇಲಾಖೆಯಲ್ಲಿ 17,967 ಹುದ್ದೆಗಳು ಖಾಲಿ ಇವೆ. ಸರ್ಕಾರ ಅಸ್ತಿತ್ವಕ್ಕೆ ಬಂದನ ನಂತರವೂ ಅದನ್ನು ಭರ್ತಿ ಮಾಡಲು ಕ್ರಮ ತಗೆದುಕೊಂಡಿಲ್ಲ ಎಂದು ಕುಮಾರಸ್ವಾಮಿ ಪತ್ರದಲ್ಲಿ ಆರೋಪಿಸಿದ್ದಾರೆ. ತುಮಕೂರು ಜಿಲ್ಲೆಯಲ್ಲಿ 740 ಹುದ್ದೆ ಖಾಲಿ ಇವೆ. ಉಳಿದ ಜಿಲ್ಲೆಯಲ್ಲಿ ಈ ರೀತಿ ಹುದ್ದೆಗಳು ಖಾಲಿ ಇದ್ದು, ಇದರಿಂದ ಜನರಿಗೆ ತೊಂದರೆ ಆಗುತ್ತಿದೆ ಎಂದು ಕುಮಾರಸ್ವಾಮಿ ಪತ್ರದಲ್ಲಿ ತಿಳಿಸಿದ್ದಾರೆ.
ಔಷಧ ಕೊರತೆ ನೀಗಿಸಿ : ರಾಜ್ಯದ ಹಲವು ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ ಇದೆ. ಇದರಿಂದ ಬಡ ರೋಗಿಗಳು ಖಾಸಗಿ ಮೆಡಿಕಲ್ ಶಾಪ್ಗಳಿಂದ ಔಷಧಿಗಳನ್ನು ಖರೀದಿಸುತ್ತಿದ್ದಾರೆ. ಕಳಪೆ ಔಷಧಗಳು ಮಾರುಟ್ಟೆಯಲ್ಲಿ ಸೇರಿಕೊಂಡಿದ್ದು, ಇದನ್ನು ತಡೆಗಟ್ಟಲು ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
ಡೆಂಗ್ಯೂ ಪರಿಹಾರ ಕೊಡಿ : ಸರ್ಕಾರ ರಾಜ್ಯದಲ್ಲಿ ಡೆಂಗ್ಯೂ ಜ್ವರ ನಿಯಂತ್ರಣ ಮಾಡಲುವಲ್ಲಿ ವಿಫಲವಾಗಿದ್ದು, ಇದಕ್ಕೆ ಆರೋಗ್ಯ ಇಲಾಖೆ ನಿರ್ಲಕ್ಷ್ಯವೂ ಕಾರಣವಾಗಿದೆ ಎಂದು ಕುಮಾರಸ್ವಾಮಿ ಪತ್ರದಲ್ಲಿ ದೂರಿದ್ದಾರೆ. ಕಳೆದ ವರ್ಷ ಡೆಂಗ್ಯೂ ಜ್ವರದಿಂದ ಮೃತಪಟ್ಟವರಿಗೆ ಸರ್ಕಾರ ಘೋಷಿಸಿರುವ ಪರಿಹಾರ ಸಮರ್ಪಕವಾಗಿ ವಿತರಣೆಯಾಗಿಲ್ಲ ಎಂದು ಕುಮಾರಸ್ವಾಮಿ ಪತ್ರದಲ್ಲಿ ತಿಳಿಸಿದ್ದಾರೆ.
ಯಶಸ್ವಿನಿ ಆರೋಗ್ಯ ವಿಮೆ ಯೋಜನೆ ಅನುಷ್ಠಾನದಲ್ಲಿ ಅನಗತ್ಯವಾಗಿ ತೊಂದರೆ ನೀಡಲಾಗುತ್ತಿದೆ. ಸರ್ಕಾರ ಸಮರ್ಪಕವಾಗಿ ಹಣ ಪಾವತಿಸದ ಕಾರಣ ಅನೇಕ ಕಡೆ ಖಾಸಗಿ ಆಸ್ಪತ್ರೆಗಳು ಈ ಯೋಜನೆಯಡಿ ರೋಗಿಗಳನ್ನು ದಾಖಲಿಸಿಕೊಳ್ಳುತ್ತಿಲ್ಲ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು, ಧಾರವಾಡ ಜಿಲ್ಲೆಯಲ್ಲಿ 133 ನಕಲಿ ವೈದ್ಯರಿದ್ದಾರೆ. ಇವರ ವಿರುದ್ಧ ಸರ್ಕಾರ ತ್ವರಿತವಾಗಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಆಸ್ಪತ್ರೆ ಸ್ಥಾಪಿಸಿ : ಸರ್ಕಾರ ಪ್ರತಿ ಜಿಲ್ಲೆಯಲ್ಲಿ ಅಲೋಪತಿ, ಹೋಮಿಯೋಪತಿ, ಪ್ರಕೃತಿ ಚಿಕಿತ್ಸೆ, ಆಯುರ್ವೇದ ಮತ್ತು ಯುನಾನಿ ವೈದ್ಯ ಪದ್ಧತಿಗಳನ್ನೊಳಗೊಂಡ ಸರ್ವ ಸೇವಾ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು ಎಂದು ಭರವಸೆ ನೀಡಿತ್ತು. ಆದರೆ, ಇದುವರೆಗೆ ಆ ನಿಟ್ಟಿನಲ್ಲಿ ಕ್ರಮ ಕೈಗೊಂಡಿಲ್ಲ. ತುಮಕೂರು ಜಿಲ್ಲೆ ಸಿದ್ಧರ ಬೆಟ್ಟದಲ್ಲಿ ಆಯುಷ್ಪಾರ್ಕ್ ಸ್ಥಾಪಿಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿಲ್ಲ. ಆರೋಗ್ಯ ಇಲಾಖೆ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಪತ್ರದ ಮೂಲಕ ಆಗ್ರಹಿಸಿದ್ದಾರೆ.












Click it and Unblock the Notifications