ನಾಳೆ (ಜುಲೈ 23) ಬೆಂಗಳೂರಿನಲ್ಲಿ 'ಕುಂದಾಪ್ರ ಕನ್ನಡ ಹಬ್ಬ' ಯಾರೆಲ್ಲಾ ಭಾಗಿ? ಏನೆಲ್ಲಾ ಸಂಭ್ರಮ..!
ಬೆಂಗಳೂರು, ಜುಲೈ 22: ಐದನೇ ಬಾರಿ ಬೆಂಗಳೂರಿನಲ್ಲಿ ಆಯೋಜಿಸಲಾಗುತ್ತಿರುವ 'ಕುಂದಾಪ್ರ ಕನ್ನಡ ಹಬ್ಬ'ವನ್ನು ಈ ಬಾರಿ ಜುಲೈ 23ನೇ ತಾರೀಕು ಭಾನುವಾರ ಬೆಂಗಳೂರಿನ ಅತ್ತಿಗುಪ್ಪೆಯಲ್ಲಿರುವ ಬಂಟರ ಭವನದಲ್ಲಿ ಕುಂದಾಪ್ರ ಕನ್ನಡ ಪ್ರತಿಷ್ಠಾನ ಬೆಂಗಳೂರು ಹಮ್ಮಿಕೊಂಡಿದ್ದಾರೆ.
ತಮ್ಮ ಮಾತೃಭಾಷೆಯಾದ ಕುಂದಗನ್ನಡದ ಮೇಲಿನ ಪ್ರೀತಿಯಿಂದ ಸಾಮಾಜಿಕ ಮಾಧ್ಯಮದಲ್ಲಿ ಹುಟ್ಟಿದ ಅಭಿಮಾನದ ಕಿಡಿಯೊಂದು ಇಂದು ವಿಶ್ವದಗಲ ಹಬ್ಬಿರುವ ಪರಿಯು ಭಾಷೆಯೊಂದರ ಅಪರಿಮಿತ ಸಾಧ್ಯತೆಯನ್ನು ಎತ್ತಿಹಿಡಿಯುತ್ತದೆ. ಸಮಾನ ಮನಸ್ಕ ಗೆಳೆಯರ ಸಾರಥ್ಯದಲ್ಲಿ ಆಯೋಜನೆಯಾಗುತ್ತಾ ಬಂದ ಈ ದಿನಾಚರಣೆಯು ಈ ಬಾರಿ ಕುಂದಾಪ್ರ ಕನ್ನಡ ಪ್ರತಿಷ್ಠಾನ ಬೆಂಗಳೂರು ಇದರ ಅಡಿಯಲ್ಲಿ ಆಯೋಜನೆಯಾಗಿದೆ.

ಇದು ಕುಂದಾಪುರ ನೆಲಮೂಲದ ಭಾಷಾ ಸಂಪತ್ತು, ಆಚಾರ-ವಿಚಾರ, ಕಲೆ, ಕ್ರೀಡೆ, ವೈವಿಧ್ಯಮಯ ಆಹಾರ ಮುಂತಾದ ಕುಂದಾಪುರ ಜನಜೀವನ, ಸಾಂಸ್ಕೃತಿಕ ಹಿರಿಮೆಯನ್ನು ವಿಶ್ವಕ್ಕೆ ಸಾರುವ ಜೊತೆಗೆ ಇಲ್ಲಿ ನೆಲೆಸಿರುವ ಕುಂದಗನ್ನಡಿಗರ ಅಪರೂಪದ ಸಮ್ಮಿಲನಕ್ಕೆ ವೇದಿಕೆ ಕಲ್ಪಿಸುವ ಉತ್ಸವವಾಗಿರುತ್ತದೆ.
ಬೆಂಗಳೂರಿನಲ್ಲಿ ಲಕ್ಷಾಂತರ ಕುಂದಗನ್ನಡಿಗರಿದ್ದು ತಮ್ಮ ತಾಯಿಬೇರಿನ ಜೊತೆಗಿನ ಅನುಬಂಧವನ್ನು ಕಡಿದುಕೊಳ್ಳದೆ ಜತನದಿಂದ ಕಾಪಿಟ್ಟುಕೊಂಡಿದ್ದಾರೆ. ಇವರೆಲ್ಲರನ್ನೂ ಒಂದೇ ಸೂರಿನಡಿ ನೋಡುವ, ಅಪರೂಪದ ಕಲಾವಿದರಿಗೆ ವೇದಿಕೆ ಕೊಡುವ, ಮರೆಯಾಗುತ್ತಿರುವ ಗ್ರಾಮೀಣ ಕ್ರೀಡೆಗಳನ್ನು ಮೆಲುಕು ಹಾಕುವ ಹಾಗು ಸಂಸ್ಕೃತಿ ವಿನಿಮಯದಂತಹ ಸದುದ್ದೇಶವನ್ನು ಕುಂದಾಪ್ರಕನ್ನಡ ಹಬ್ಬವು ಹೊಂದಿದೆ ಎಂದು ಕುಂದಾಪ್ರ ಕನ್ನಡ ಪ್ರತಿಷ್ಠಾನ ಬೆಂಗಳೂರು ತಿಳಿಸಿದೆ.

ಜುಲೈ 23ರಂದು ಬೆಳಿಗ್ಗೆ 9 ಗಂಟೆಗೆ ಕಾರ್ಯಕ್ರಮವನ್ನು ಕರಾವಳಿಯ ಜನಪದ ಕ್ರೀಡೆಯಾದ ಕಂಬಳ ಕ್ಷೇತ್ರದ ಸಾಧಕರಾದ ಶಾಂತರಾಮ ಶೆಟ್ಟಿ ಬಾರ್ಕೂರು ಇವರು ಉದ್ಘಾಟಿಸಲಿದ್ದು, ಶಾಸಕರಾದ ಕಿರಣ್ ಕೊಡ್ಗಿ ಮತ್ತು ಗುರುರಾಜ್ ಗಂಟಿಹೊಳೆಯವರ ಸಮ್ಮುಖದಲ್ಲಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ದೊರಕಲಿದೆ.
ಕಾರ್ಯಕ್ರಮದಲ್ಲಿ ಗಣ್ಯರ ಸಮಾಗಮ
ಸಂಜೆ 4.30 ಕ್ಕೆ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಲಿದ್ದು, ಶಾಸಕರಾದ ಎಂ.ಕೃಷ್ಣಪ್ಪ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಕೆ. ಜಯಪ್ರಕಾಶ ಹೆಗ್ಡೆ ಸೇರಿದಂತೆ ಇತರ ಗಣ್ಯರು ಭಾಗಿಯಾಗಲಿದ್ದಾರೆ. ಇದೇ ಸಂದರ್ಭದಲ್ಲಿ ಕುಂದಾಪುರದ ಹಿರಿಮೆಯನ್ನು ಇನ್ನಷ್ಟು ವಿಸ್ತರಿಸಿದ ಸಾಧಕರಾದ ಪ್ರೊ ಎ.ವಿ ನಾವಡ ಮತ್ತು ಸಂಗೀತ ನಿರ್ದೇಶಕರಾದ ರವಿ ಬಸ್ರೂರು ಇವರಿಗೆ ಊರ ಗೌರವ ಇರಲಿದ್ದು, ಕಾರ್ಯಕ್ರಮದಲ್ಲಿ ಕಾಂತಾರ ಖ್ಯಾತಿಯ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಪ್ರಮೋದ್ ಶೆಟ್ಟಿ ಹಾಗು ಇನ್ನಿತರರು ಭಾಗಿಯಾಗಲಿದ್ದಾರೆ.
ಕುಂದಾಪ್ರ ಕನ್ನಡ ಹಬ್ಬವು ಹಲವು ಸಾಂಸ್ಕೃತಿಕ ಸಡಗರಗಳಿಗೆ ವೇದಿಕೆಯಾಗಲಿದ್ದು ಮುಖ್ಯವಾಗಿ ರಾಘವೇಂದ್ರ ಜನ್ಸಾಲೆಯವರ ನೇತೃತ್ವದಲ್ಲಿ ಸಿದ್ಧಪ್ರಸಿದ್ಧ ಕಲಾವಿದರಿಂದ ಬೇಡರ ಕಣ್ಣಪ್ಪ ಎನ್ನುವ ಯಕ್ಷಗಾನ ಪ್ರಸಂಗ, ಕಲಾಕದಂಬ ಆರ್ಟ್ಸ್ ಅವರಿಂದ ವೀರ ಬರ್ಬರಿಕ ಯಕ್ಷಗಾನ ಪ್ರಸಂಗ, ಅರೆಹೊಳೆ ಪ್ರತಿಷ್ಠಾನದ ನಂದಗೋಕುಲ ಕಲಾವಿದರಿಂದ ಬಿಡುವನೇ ಬ್ರಹ್ಮಲಿಂಗ!? ಎನ್ನುವ ನೃತ್ಯ ರೂಪಕ, ಕಿರುತೆರೆಯ ಖ್ಯಾತಿಯ ಶ್ರಾವ್ಯ ಮರವಂತೆ, ಸಮೃದ್ಧಿ ಕುಂದಾಪುರ, ಪ್ರೀತಂ ಅವರುಗಳು ಚಿತ್ರಪಟ ರಾಮಾಯಣ ಎಂಬ ಕಿರುನಾಟಕ ಹಮ್ಮಿಕೊಳ್ಳಲಾಗಿದೆ.
ಸಾಸ್ತಾನದ ಖ್ಯಾತ ನಾಟಕ ತಂಡ ಅಲ್ವಿನ್ ಅಂದ್ರಾದೆ ಮತ್ತು ಸಹ ಕಲಾವಿದರ ತಿಳಿ ಹಾಸ್ಯ ಪ್ರಹಸನ, ಟೀಂ ಕುಂದಾಪುರಿಯನ್ಸ್ ಅವರು ಮಿಂಚುಳ- ಇದ್ ಕತ್ಲಿ-ಬೆಳಗಿನ ಕಥಿ ಎಂಬ ವಿಶೇಷ ನಾಟಕಗಳು ಪ್ರದರ್ಶನಗೊಳ್ಳಲಿದೆ. ಇನ್ನು ಹಿರಿಯರಾದ ರೇಖಾ.ಬಿ.ಬನ್ನಾಡಿ, ಉಪೇಂದ್ರ ಶೆಟ್ಟಿ, ಕವಿ ಹೆಚ್.ಡುಂಡಿರಾಜ್ ಅವರ ಭಾಷೆಯ ಬಹು ಆಯಾಮದ ಬಗ್ಗೆ ಮಾತು- ನುಡಿಚಾವಡಿ, ಜನಪ್ರಿಯ ಗಾಯಕರನ್ನೊಳಗೊಂಡ ಸ್ವರ ಕುಂದಾಪುರ ತಂಡದ ಕಾಡುವ ಹಾಡುಗಳ ಕಲರವ, ಕುಂದಾಪ್ರ ಕನ್ನಡದ ಖ್ಯಾತ ವಾಗ್ಮಿ ಮನು ಹಂದಾಡಿಯವರ ಲಘು ದಾಟಿಯ ಬಿಗು ಭಾಷಣ ಹಾಗು ಇನ್ನಿತರ ಮನರಂಜನೀಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಬಯಲಾಟಗಳು ಯಾವುವು?
ಈ ಬಾರಿ ಕರಾವಳಿಯ ಅಪರೂಪದ ಗ್ರಾಮೀಣ ಕ್ರೀಡೆಗಳನ್ನು ಆಯೋಜಿಸಲಾಗಿದ್ದು ವಯಸ್ಕರರಿಗಾಗಿ ಹಗ್ಗ ಜಗ್ಗಾಟ, ದಂಪತಿಗಳಿಗಾಗಿ ಪ್ರತ್ಯೇಕ ಕ್ರೀಡೆಗಳು, ಮಕ್ಕಳಿಗೆ ಹೂವಾಡಗಿತ್ತಿ, ಸೈಕಲ್ ಟೈರ್ ಓಟ, ಹಣೆಬೊಂಡ ಓಟ, ಗಿರ್ಗಿಟ್ಲಿ ಓಟ, ಚಿತ್ರಕಲೆ, ಮಹಿಳೆಯರಿಗೆ ಹಲಸಿನ ಕೊಟ್ಟೆ ಕಟ್ಟುವುದು, ಮಡ್ಲ್ ನೆಯ್ಯುವುದು ಇನ್ನಿತರ ಸ್ಪರ್ಧೆಗಳು ಇರಲಿದೆ.
ಕುಂದಾಪುರದ ನುರಿತ ಬಾಣಸಿಗರು ಸ್ಥಳದಲ್ಲೇ ತಯಾರಿಸುವ ಹಾಲುಬಾಯಿ, ಕೊಟ್ಟೆ ಕಡುಬು, ಗೋಲಿಬಜೆ, ಬನ್ಸ್, ಸುಕ್ಕಿನ್ ಉಂಡೆ, ಎಳ್ ಬಾಯ್ರ್, ಹೆಸ್ರು ಬಾಯ್ರ್ ನಂತಹ ವಿವಿಧ ಪಾನಕಗಳು, ಹಬ್ಬದ ವಿಶೇಷ ತರಕಾರಿ ಊಟ, ಇಡ್ಲಿ ಕುಂದಾಪ್ರ ಕೋಳಿ ಸುಕ್ಕ, ಬರಿಯಾನಿ, ಚಟ್ಲಿ ಸಾರು ಇನ್ನಿತರ ಅಪರೂಪದ ಖಾದ್ಯಗಳು ಇರಲಿದೆ.
ವರ್ಷದಿಂದ ವರ್ಷಕ್ಕೆ ಜನಪ್ರಿಯತೆ ಪಡೆಯುತ್ತಿರುವ ಕುಂದಾಪ್ರ ಕನ್ನಡ ದಿನಾಚರಣೆಗೆ ಕಳೆದ ಬಾರಿ ಇಪ್ಪತ್ತು ಸಾವಿರಕ್ಕೂ ಅಧಿಕ ಮಂದಿ ಆಗಮಿಸಿದ್ದರು, ಹಿಂದಿನ ಬಾರಿಯ ಯಶಸ್ಸಿನೊಂದಿಗೆ ಕುಂದಾಪ್ರ ಕನ್ನಡ ಪ್ರತಿಷ್ಠಾನ ಬೆಂಗಳೂರು ಈ ಭಾರಿ ಅದ್ಧೂರಿಯಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಉಚಿತ ಪ್ರವೇಶವಿದ್ದು, ಬೆಂಗಳೂರಿನಲ್ಲಿರುವ ಕುಂದಗನ್ನಡಿಗರು ಹಾಗೂ ಬೆಂಗಳೂರಿನಲ್ಲೇ ಕುಂದಾಪುರ ಸವಿಯನ್ನು ಸವಿಯಬೇಕೆನ್ನುವವರು ಕಾರ್ಯಕ್ರಮದಲ್ಲಿ ಭಾಗವಹಿಸಬಹುದು.
-
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಪ್ರೇಮ್ ಬರೆದ ಹಾಡು ಅಕ್ಷರ ರೂಪದ ಬೆತ್ತಲೆ ಸಿನೆಮಾ ತೋರಿಸಿದಂತಿದೆ: ಅರುಣ್ ಜೋಳದಕೂಡ್ಲಿಗಿ ಬರಹ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ












Click it and Unblock the Notifications