ಕಾರ್ಮಿಕ ಇಲಾಖೆ ಸಹಾಯಕ ಆಯುಕ್ತರ ಮನೆಯಲ್ಲಿ 10 ಲಕ್ಷ ಹಣ ಪತ್ತೆ
ಬೆಂಗಳೂರು, ಡಿಸೆಂಬರ್ 02: ಕಾರ್ಮಿಕರ ನೇಮಕ ಪರವಾನಗಿ ನೀಡಲು ಲಂಚ ಪಡೆದು ಸಿಕ್ಕಿಬಿದ್ದ ಕಾರ್ಮಿಕ ಇಲಾಖೆಯ ಸಹಾಯಕ ಕಾರ್ಮಿಕ ಆಯುಕ್ತ ಸಂತೋಷ್ ಇಪ್ಪರಗಿ ಅವರ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಹತ್ತು ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ. ವಿಜಯನಗರ ಆರ್ಪಿಸಿ ಬಡಾವಣೆಯಲ್ಲಿರುವ ಮನೆ ಮೇಲೆ ಇಂದು ಎಸಿಬಿ ಅಧಿಕಾರಿಗಳ ತಂಡ ದಾಳಿ ಮಾಡಿದೆ.
ಲಂಚ ಸ್ವೀಕರಿಸಿ ಎಸಿಬಿ ಬಲೆಗೆ ಬಿದ್ದ ನಿವೃತ ಕಾರ್ಮಿಕ ಅಧಿಕಾರಿ !
ಪೂನಾ ಮೂಲದ ಕಂಪನಿಯೊಂದು ಕಾರ್ಮಿಕ ನೇಮಕ ಪರವಾನಗಿ ನೀಡುವಂತೆ ಕೋರಿ ಮೂರು ವರ್ಷದ ಹಿಂದೆ ಅರ್ಜಿ ಸಲ್ಲಿಸಿದ್ದರು. ಪರವಾನಗಿ ನೀಡಲು ನಿವೃತ್ತ ಕಾರ್ಮಿಕ ಇನ್ಸ್ಪೆಕ್ಟರ್ ಶಿವಕುಮಾರ್ ಮತ್ತು ಸಹಾಯಕ ಕಾರ್ಮಿಕ ಆಯುಕ್ತ ಸಂತೋಷ್ ಇಪ್ಪರಗಿ 1.80 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಬುಧವಾರ ಎಸಿಬಿ ಬೆಲೆಗೆ ಬಿದ್ದಿದ್ದರು.
ಇಬ್ಬರ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿ ಕೇಸು ದಾಖಲಿಸಿದ್ದರು. ಸಂತೋಷ್ ಹಿಪ್ಪರಗಿ ಮೇಲೆ ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ವಿಜಯನಗರ ಆರ್ಪಿಸಿ ಬಡಾವಣೆಯಲ್ಲಿರುವ ಮನೆ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಲಕ್ಷಾಂತರ ರೂಪಾಯಿ ಹಣ ಮತ್ತು ಕೆಲವು ಮಹತ್ವದ ದಾಖಲೆಗಳು ಸಿಕ್ಕಿವೆ.
ಇಷ್ಟು ಮೊತ್ತದ ಅಕ್ರಮ ಹಣ ಪತ್ತೆಯಾದ ಹಿನ್ನೆಲೆಯಲ್ಲಿ ಚಿನ್ನಾಭರಣ ಹಾಗೂ ಆಸ್ತಿ ವಿವರ ಗಳನ್ನು ಸಂಗ್ರಹಿಸುತ್ತಿದ್ದಾರೆ. ಆದಾಯಕ್ಕಿಂತೂ ಮೀರಿ ಅಕ್ರಮ ಆಸ್ತಿ ಗಳಿಸಿರುವುದು ಕಂಡು ಬಂದಲ್ಲಿ ಅಕ್ರಮ ಆಸ್ತಿ ಗಳಿಕೆ ಪ್ರತ್ಯೇಕ ಪ್ರಕರಣ ದಾಖಲಿಸಲಿದ್ದಾರೆ. ಎಸಿಬಿ ಬೆಂಗಳೂರು ಘಟಕದ ಎಸ್ಪಿ ಕುಲದೀಪ್ ಕುಮಾರ್ ಜೈನ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ದಾಖಲೆಗಳ ಪರಿಶೀಲನೆ ಕಾರ್ಯ ಇನ್ನೂ ಮುಂದುವರೆದಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.