ಸ್ಥಳೀಯ ಸಂಸ್ಥೆಗಳ ಮೀಸಲು ಪಟ್ಟಿ: ಹೈಕೋರ್ಟ್ಗೆ ಮತ್ತೆ ಆಯೋಗ ಮೊರೆ
ಬೆಂಗಳೂರು, ಮೇ 28: ಕ್ಷೇತ್ರ ಮರುವಿಂಗಡಣೆ ಪಟ್ಟಿ ಹಾಗೂ ಸ್ಥಳೀಯ ಸಂಸ್ಥೆಗಳ ವಾರ್ಡ್ ಮೀಸಲು ಪಟ್ಟಿ ಸಲ್ಲಿಸುವಲ್ಲಿ ರಾಜ್ಯ ಸರ್ಕಾರ ವಿಳಂಬ ಧೋರಣೆ ತೋರುತ್ತಿದೆ. ಈ ಕುರಿತು ಕೂಡಲೇ ನಿರ್ದೇಶನ ನೀಡುವಂತೆ ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್ಗೆ ಮತ್ತೆ ಮನವಿ ಮಾಡಿದೆ.
ಈ ಕುರಿತಂತೆ ಆಯೋಗದ ಪರ ವಕೀಲರು ಸೋಮವಾರ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠಕ್ಕೆ ಮನವಿ ಮಾಡಿದರು. ಇದೇ ವರ್ಷದ ಸೆಪ್ಟೆಂಬರ್ ಹಾಗೂ 2019 ರ ಫೆಬ್ರವರಿ ಅಂತ್ಯದೊಳಗೆ ನಗರಸಭೆಣ ಪಟ್ಟಣ ಪಂಚಾಯ್ತಿ, ಕಾರ್ಪೊರೇಷನ್ ಒಳಗೊಂಡಂತೆ 116 ಸ್ಥಳೀಯ ಸಂಸ್ಥೆಗಳ ಅವಧಿ ಮುಕ್ತಾವಾಗಲಿದೆ. ಮುಂದಿನ ಚುನಾವಣೆಗೆ ಮೀಸಲು ಮತ್ತು ಕ್ಷೇತ್ರ ಮರುವಿಂಗಡಣೆ ಪರಿಷ್ಕೃತ ಪಟ್ಟಿಯನ್ನು ಆಯೋಗವು ಒಂದು ವರ್ಷಕ್ಕೂ ಮೊದಲೆ ಸಿದ್ಧಪಡಿಸಿಟ್ಟುಕೊಳ್ಳಬೇಕು.
ಈ ಕುರಿತು ನಾವು ರಾಜ್ಯ ನಗರಾಭಿವೃದ್ಧಿ ಇಲಾಖೆಗೆ ಹಲವು ಬಾರಿ ಪತ್ರ ಬರೆದು ಕೋರಿಕೆ ಸಲ್ಲಿಸಿದ್ದೇವೆ. ಈ ಸಂಬಂಧ ರಾಜ್ಯ ಸರ್ಕಾರ 2018ರ ಫೆ. 12ರಂದು ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸಿ ಪಟ್ಟಿ ಪ್ರಕಟಿಸುವುದಾಗಿ ಭರವಸೆ ನೀಡಿತ್ತು. ಆದರೆ ಈ ದಿಸೆಯಲ್ಲಿ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಯೋಗದ ಪರ ವಕೀಲರು ನ್ಯಾಯಪೀಠಕ್ಕೆ ವಿವರಿಸಿದರು.

ನಿರ್ಧರಿತ ಸಮಯದಲ್ಲಿ ಚುನಾವಣೆ ನಡೆಸಬೇಕಿರುವುದು ಆಯೋಗದ ಕರ್ತವ್ಯವಾಗಿದೆ. ಒಂದು ವೇಳೆ ಚುನಾವಣೆ ವಿಳಂಬವಾದರೆ, ಅದು ಸಾಂವಿಧಾನಿಕ ಉಲ್ಲಂಘನೆಯಾಗಲಿದೆ. ಹೀಗಾಗಿ ಕೂಡಲೇ ಮೀಸಲು ಮತ್ತು ಕ್ಷೇತ್ರ ಮರುವಿಂಗಡಣೆ ಪಟ್ಟಿಯನ್ನು ನಮಗೆ ಒದಗಿಸುವಂತೆ ನ್ಯಾಯಪೀಠಕ್ಕೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಈ ಕುರಿತಂತೆ ಮಧ್ಯಂತರ ಅರ್ಜಿ ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿತು.












Click it and Unblock the Notifications