ಬೆಂಗಳೂರು ನಗರದಲ್ಲಿ ಲಾಕ್ ಡೌನ್ ವಿಸ್ತರಣೆ ಇಲ್ಲ
ಬೆಂಗಳೂರು, ಜುಲೈ 20 : " ಬೆಂಗಳೂರು ನಗರದಲ್ಲಿ ಈಗಿರುವ ಲಾಕ್ ಡೌನ್ ವಿಸ್ತರಣೆ ಮಾಡುವ ಯಾವುದೇ ಪ್ರಶ್ನೆಯೇ ಇಲ್ಲ" ಎಂದು ಬಿಬಿಎಂಪಿ ನೂತನ ಆಯುಕ್ತ ಎನ್. ಮಂಜುನಾಥ ಪ್ರಸಾದ್ ಹೇಳಿದ್ದಾರೆ.
Recommended Video
ಕರ್ನಾಟಕ ಸರ್ಕಾರ ಜುಲೈ 14ರಿಂದ 22ರ ಬೆಳಗ್ಗೆ 5ಗಂಟೆ ತನಕ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್ ಘೋಷಣೆ ಮಾಡಿದೆ. ಈ ಒಂದು ವಾರದ ಲಾಕ್ ಡೌನ್ ವಿಸ್ತರಣೆಯಾಗಲಿದೆ ಎಂಬ ಚರ್ಚೆ ನಡೆಯುತ್ತಿದೆ.
ಭಾನುವಾರ ಬಿಬಿಎಂಪಿ ಆಯುಕ್ತರು ಈ ಕುರಿತು ಸ್ಪಷ್ಟನೆಯನ್ನು ನೀಡಿದ್ದಾರೆ. "ಮುಖ್ಯಮಂತ್ರಿಗಳು ಈಗಾಗಲೇ ಇದನ್ನು ಸ್ಪಷ್ಟಪಡಿಸಿದ್ದಾರೆ. ಜುಲೈ 22ರ ಬಳಿಕ ಬೆಂಗಳೂರು ನಗರದಲ್ಲಿ ಯಾವುದೇ ಲಾಕ್ ಡೌನ್ ಇರುವುದಿಲ್ಲ" ಎಂದರು.
ಬೆಂಗಳೂರು ನಗರದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಭಾನುವಾರವೂ ನಗರದಲ್ಲಿ 2156 ಪ್ರಕರಣ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 31,777ಕ್ಕೆ ಏರಿಕೆಯಾಗಿದೆ. ಆದ್ದರಿಂದ, ಲಾಕ್ ಡೌನ್ ವಿಸ್ತರಣೆಯಾಗಲಿದೆಯೇ? ಎಂಬ ಪ್ರಶ್ನೆ ಎದ್ದಿತ್ತು.

ಲಾಕ್ ಡೌನ್ ಪರಿಹಾರವಲ್ಲ
ಶುಕ್ರವಾರ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಹ ಲಾಕ್ ಡೌನ್ ಬಗ್ಗೆ ಮಾತನಾಡಿದ್ದಾರೆ. "ಕೊರೊನಾ ವೈರಸ್ ಸೋಂಕಿನ ಹರಡುವಿಕೆ ತಡೆಯಲು ಲಾಕ್ ಡೌನ್ ಒಂದೇ ಪರಿಹಾರವಲ್ಲ. ಬೆಂಗಳೂರಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡುವುದಿಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ.

ಮೇಯರ್ ಲಾಕ್ ಡೌನ್ ಪರವಾಗಿದ್ದರು
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಗೌತಮ್ ಕುಮಾರ್ ಜೈನ್ ಮತ್ತು ಬಿಬಿಎಂಪಿಯ ಹಿಂದಿನ ಆಯುಕ್ತರಾಗಿದ್ದ ಬಿ. ಎಚ್. ಅನಿಲ್ ಕುಮಾರ್ ಲಾಕ್ ಡೌನ್ ಪರವಾಗಿದ್ದರು. ಇನ್ನೂ ಒಂದು ವಾರ ಲಾಕ್ ಡೌನ್ ವಿಸ್ತರಣೆ ಮಾಡಬೇಕು ಎಂದು ಹೇಳಿದ್ದರು.

ಲಾಕ್ ಡೌನ್ ಮಾತು ಆಡಬೇಡಿ
ಕಂದಾಯ ಸಚಿವ ಆರ್. ಅಶೋಕ ಬೆಂಗಳೂರು ನಗರದಲ್ಲಿ ಕೊರೊನಾ ನಿಯಂತ್ರಣಕ್ಕೆ ತರುವ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ್ದ ಅವರು, "ಈಗಿರುವ ಲಾಕ್ ಡೌನ್ ವಿಸ್ತರಣೆ ಆಗವುದಿಲ್ಲ. ಲಾಕ್ ಡೌನ್ ಬಗ್ಗೆ ಮಾತು ಬೇಡ" ಎಂದು ಹೇಳಿದ್ದರು.
|
ಯಡಿಯೂರಪ್ಪ ಟ್ವೀಟ್ ಮಾಡಿದ್ದರು
ಜುಲೈ 13ರಂದು ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡಿದ್ದರು. "ಒಂದು ವಾರದ ಲಾಕ್ ಡೌನ್ ವಿಸ್ತರಣೆ ಮಾಡುವುದಿಲ್ಲ. ವದಂತಿಗಳಿಗೆ ಕಿವಿಗೊಡದೆ ಸರ್ಕಾರದೊಂದಿಗೆ ಸಹಕಾರ ನೀಡಿ" ಎಂದು ಮನವಿ ಮಾಡಿದ್ದರು.












Click it and Unblock the Notifications