ಏನಾದರೂ ಆಗಬಹುದು ಎಂದು ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಸುಳಿವು ನೀಡಿದ್ರಾ ಎಚ್ಡಿ ಕುಮಾರಸ್ವಾಮಿ ?
ಬೆಂಗಳೂರು, ಜುಲೈ. 04: 2024 ರ ಲೋಕಸಭಾ ಚುನಾವಣೆಗೆ ತಮ್ಮ ಪಕ್ಷ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಮಾತನಾಡಿರುವ ಜಾತ್ಯತೀತ ಜನತಾ ದಳ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರು 'ಏನಾದರೂ ಆಗಬಹುದು' ಎಂಬ ಹೇಳಿಕೆ ನೀಡಿ ಮತ್ತೊಂದು ಶಾಕ್ ನೀಡಿದ್ದಾರೆ. ಈ ಮೂಲಕ ಮೈತ್ರಿ ಯೋಜನೆ ಇನ್ನು ಜಾರಿಯಲ್ಲಿದೆ ಎಂಬ ಸುಳಿವು ನೀಡಿದ್ದಾರೆ.
"ನಾನು ವಿಶೇಷವಾಗಿ ಯಾರನ್ನೂ ಹೆಸರಿಸಲು ಬಯಸುವುದಿಲ್ಲ. ಏನು ಬೇಕಾದರೂ ಆಗಬಹುದು. ಇದು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ, ಬಹುಶಃ ಈ ವರ್ಷಾಂತ್ಯ ಅಥವಾ ಸಂಸತ್ ಚುನಾವಣೆಯ ನಂತರ ನಡೆಯುತ್ತದೆ. ಅದಕ್ಕಾಗಿ ನಾವು ಕಾಯಬೇಕಾಗಿದೆ" ಎಂದು ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಮಂಗಳವಾರ ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಎಚ್ ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. "ಎಚ್ಡಿ ಕುಮಾರಸ್ವಾಮಿ ಹೇಳುತ್ತಿರುವುದೆಲ್ಲವೂ ಸಂಪೂರ್ಣ ಸತ್ಯ ಮತ್ತು ಅವರ ಹೇಳಿಕೆಯನ್ನು ನಾನು ಬೆಂಬಲಿಸಲು ಬಯಸುತ್ತೇನೆ. ಕುಮಾರಸ್ವಾಮಿ ಮತ್ತು ನಾವು ಭವಿಷ್ಯದಲ್ಲಿ ಒಟ್ಟಿಗೆ ಹೋರಾಡುತ್ತೇವೆ" ಎಂದು ಬಿಜೆಪಿ ಹಿರಿಯ ನಾಯಕರ ಹೇಳಿಕೆಯನ್ನು ಉಲ್ಲೇಖಿಸಿ ಎಎನ್ಐ ವರದಿ ಮಾಡಿದೆ.
ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷದೊಂದಿಗೆ ಜೆಡಿಎಸ್ ಕೈ ಜೋಡಿಸುವ ಸಾಧ್ಯತೆ ಇದೆ ಎಂಬ ವದಂತಿಗಳು ಕೇಳಿಬರುತ್ತಿದೆ. ಪಿಟಿಐ ವರದಿ ಪ್ರಕಾರ, ಎಚ್ ಡಿ ಕುಮಾರಸ್ವಾಮಿ ಅವರು ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿಯ ಕೆಲವು ಹಿರಿಯ ನಾಯಕರನ್ನು ಭೇಟಿ ಮಾಡಿದ್ದಾರೆ ಎನ್ನಲಾಗಿದೆ.
ಬಿಜೆಪಿ - ಜೆಡಿ(ಎಸ್) ಮೈತ್ರಿ ಸಾಧ್ಯತೆಯ ಬಗ್ಗೆ ಕೇಳಿದಾಗ, ಜೂನ್ 12 ರಂದು ಕುಮಾರಸ್ವಾಮಿ ಈ ಬಗ್ಗೆ ಪರಿಸ್ಥಿತಿ ಬಂದಾಗ ತೀರ್ಮಾನ ತೆಗೆದುಕೊಳ್ಳಲಾಗುವುದು ಮತ್ತು ಸಂಸತ್ತಿನ ಚುನಾವಣೆಯಲ್ಲಿ ಸ್ಪರ್ಧಿಸುವ ಯಾವುದೇ ಪ್ರಸ್ತಾಪವು ತಮ್ಮ ಮುಂದೆ ಇಲ್ಲ ಎಂದು ಹೇಳಿದ್ದರು. ಇದಾದ ಒಂದು ದಿನದ ನಂತರ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜೆಡಿಎಸ್ನೊಂದಿಗೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ತಿಳಿಸಿದ್ದರು. "ರಾಜ್ಯ ಮಟ್ಟದಲ್ಲಿ ಬಿಜೆಪಿ - ಜೆಡಿ(ಎಸ್) ಮೈತ್ರಿ ಬಗ್ಗೆ ಯಾವುದೇ ಚರ್ಚೆಗಳು ನಡೆದಿಲ್ಲ, ಮುಂದಿನ ದಿನಗಳಲ್ಲಿ ನೋಡೋಣ, ರಾಜಕೀಯದಲ್ಲಿ ಭವಿಷ್ಯವನ್ನು ಊಹಿಸುವುದು ಕಷ್ಟ" ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದರು.

ಕರ್ನಾಟಕದಲ್ಲಿ 2019 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ರಾಜ್ಯದ ಒಟ್ಟು 28 ಸ್ಥಾನಗಳಲ್ಲಿ 25 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯ ಗಳಿಸಿದೆ. ಇದರ ಜೊತೆಗೆ ಬಿಜೆಪಿ ಬೆಂಬಲಿತ ಸ್ವತಂತ್ರ ಒಂದು ಸ್ಥಾನದಲ್ಲಿ, ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ ಒಂದು ಸ್ಥಾನ ಪಡೆದುಕೊಂಡಿವೆ.












Click it and Unblock the Notifications