ಡಿಕೆಶಿ ಕೋಟೆ ಬೆಂಗಳೂರು ಗ್ರಾಮಾಂತರಕ್ಕೆ ಬಿಜೆಪಿ ಅಭ್ಯರ್ಥಿ ಅಂತಿಮ?
Recommended Video

ಬೆಂಗಳೂರು, ಜನವರಿ 04 : ಕರ್ನಾಟಕ ಬಿಜೆಪಿ 2019ರ ಲೋಕಸಭಾ ಚುನಾವಣೆಗೆ ಬಿರುಸಿನಿಂದ ತಯಾರಿ ನಡೆಸುತ್ತಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಪಕ್ಷದ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗಿದೆ?.
ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ನಾಯಕರ ಸಭೆ ನಡೆಸಲಾಯಿತು. ಸಭೆಯಲ್ಲಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ ಮತ್ತು ರಾಮನಗರ ಬಿಜೆಪಿ ಜಿಲ್ಲಾಧ್ಯಕ್ಷ ರುದ್ರೇಶ್ ಹೆಸರನ್ನು ಶಿಫಾರಸು ಮಾಡಲಾಗಿತ್ತು.
ಸಿ.ಪಿ.ಯೋಗೇಶ್ವರ ಅವರು ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿರುವ ಕಾರಣ ಎಂ.ರುದ್ರೇಶ್ ಹೆಸರನ್ನು ಅಂತಿಮಗೊಳಿಸಲಾಗಿದೆ?. ಚುನಾವಣಾ ಕಾರ್ಯವನ್ನು ಆರಂಭಿಸುವಂತೆ ಯಡಿಯೂರಪ್ಪ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು ಗ್ರಾಮಾಂತರ ಕ್ಷೇತ್ರ ಸದ್ಯ ಕಾಂಗ್ರೆಸ್ ವಶದಲ್ಲಿದೆ. ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಅವರು ಕ್ಷೇತ್ರದ ಸಂಸದರು. 2019ರ ಚುನಾವಣೆಯಲ್ಲಿಯೂ ಡಿ.ಕೆ.ಸುರೇಶ್ ಕಾಂಗ್ರೆಸ್ ಅಭ್ಯರ್ಥಿಯಾಗುವುದು ಖಚಿತವಾಗಿದೆ. ಕ್ಷೇತ್ರವನ್ನು ಕೈ ವಶ ಮಾಡಿಕೊಳ್ಳಬೇಕು ಎಂದು ಬಿಜೆಪಿ ತಂತ್ರ ರೂಪಿಸುತ್ತಿದೆ....

ಉಪ ಚುನಾವಣೆ ಟಿಕೆಟ್ ಆಕಾಂಕ್ಷಿಯಾಗಿದ್ದರು
ರಾಮನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ.ರುದ್ರೇಶ್ ನವೆಂವರ್ ತಿಂಗಳಿನಲ್ಲಿ ನಡೆದ ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಅವರಿಗೆ ಟಿಕೆಟ್ ನೀಡದೆ ಚಂದ್ರಶೇಖರ್ ಅವರಿಗೆ ಟಿಕೆಟ್ ನೀಡಲಾಗಿತ್ತು. ಕೊನೆ ಕ್ಷಣದಲ್ಲಿ ಅವರು ಕಣದಿಂದ ಹಿಂದೆ ಸರಿದು ಕಾಂಗ್ರೆಸ್ ಸೇರಿದ್ದರು.

ಯಡಿಯೂರಪ್ಪ ನೇತೃತ್ವದಲ್ಲಿ ಸಭೆ
ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ನಡೆಯಿತು. ಸಿ.ಪಿ.ಯೋಗೇಶ್ವರ, ಎಂ.ರುದ್ರೇಶ್ ಹೆಸರು ಪ್ರಸ್ತಾಪಿಸಲಾಯಿತು. ಎಂ.ರುದ್ರೇಶ್ ಹೆಸರಿಗೆ ಒಪ್ಪಿಗೆ ಸಿಕ್ಕಿದೆ ಎಂದು ತಿಳಿದುಬಂದಿದೆ. ತುಳಸಿ ಮುನಿರಾಜು ಗೌಡ ಅವರ ಹೆಸರು ಸಹ ಕೇಳಿಬರುತ್ತಿದೆ.

ಡಿ.ಕೆ.ಶಿವಕುಮಾರ್ ಭದ್ರಕೋಟೆ
ಬೆಂಗಳೂರು ಗ್ರಾಮಾಂತರ ಕ್ಷೇತ್ರ ಡಿಕೆಶಿ ಸಹೋದರರ ಭದ್ರಕೋಟೆ. ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರ ಸಹೋದರ ಡಿ.ಕೆ.ಸುರೇಶ್ ಕ್ಷೇತ್ರದ ಸಂಸದರು. 652723 ಮತಗಳನ್ನು ಪಡೆದು ಅವರು ಜಯಗಳಿಸಿದ್ದಾರೆ. ಈ ಬಾರಿಯೂ ಅವರೇ ಅಭ್ಯರ್ಥಿಯಾಗುವುದು ಖಚಿತವಾಗಿದೆ.

ಕಳೆದ ಬಾರಿ ಅಭ್ಯರ್ಥಿ ಯಾರು?
ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ 2014ರ ಚುನಾವಣೆಯಲ್ಲಿ ಬಿಜೆಪಿಯಿಂದ ಪಿ.ಮುನಿರಾಜು ಗೌಡ ಅವರು ಕಣಕ್ಕಿಳಿದಿದ್ದರು. 421243 ಮತಗಳನ್ನು ಪಡೆದು ಸೋಲು ಅನುಭವಿಸಿದ್ದರು. ಆದರೆ, ಈ ಬಾರಿ ಎಂ.ರುದ್ರೇಶ್ ಅವರು ಕಣಕ್ಕಿಳಿಯುವ ಸಾಧ್ಯತೆ ಇದೆ.











Click it and Unblock the Notifications