ಬೆಂಗಳೂರಲ್ಲಿ ಮಳೆಯಿಂದ ಸಮಸ್ಯೆ ಆಗುವ ಪ್ರಮುಖ ಪ್ರದೇಶಗಳ ವಿವರ ಇಲ್ಲಿದೆ!
ಬೆಂಗಳೂರಿನಲ್ಲಿ ಸಣ್ಣ ಮಳೆ ಬಂದರೂ ಹಲವು ರಸ್ತೆಗಳು ಜಲಾವೃತವಾಗುತ್ತವೆ. ಇದೀಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಬೆಂಗಳೂರಿನಲ್ಲಿ ಯಾವೆಲ್ಲಾ ಭಾಗದಲ್ಲಿ ಮಳೆ ಬಂದರೆ ಸಮಸ್ಯೆ ಆಗಲಿದೆ ಎನ್ನುವುದನ್ನು ಗುರುತಿಸಿದೆ. ಈ ಪ್ರಮುಖ ಪ್ರದೇಶಗಳಲ್ಲಿ ಮಳೆ ಬಂದಾಗ ಸಾಧ್ಯವಾದಷ್ಟು ಓಡಾಡುವುದನ್ನು ತಪ್ಪಿಸಿ. ಇನ್ನು ಈ ಭಾಗದಲ್ಲಿ ಮಳೆ ಬಂದಾಗ ಸಮಸ್ಯೆ ಆಗದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತೆಗೆದುಕೊಂಡಿರುವ ಮುಂಜಾಗ್ರತಾ ಕ್ರಮಗಳೇನು ಎನ್ನುವ ವಿವರ ಇಲ್ಲಿದೆ.
ಮಳೆಗಾಲದ ವೇಳೆ ರಸ್ತೆಗಳು ಜಲಾವೃತವಾಗುವುದನ್ನು ತಪ್ಪಿಸಿ ಎಂದು ಬಿಬಿಎಂಪಿಯ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರದಲ್ಲಿ ಮಳೆಗಾಲದ ವೇಳೆ ರಸ್ತೆಗಳಲ್ಲಿ ಜಲಾವೃತ ಆಗುವುದನ್ನು ತಪ್ಪಿಸುವಂತೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಕೆಲವೊಂದು ಪ್ರಮುಖ ಸೂಚನೆಗಳನ್ನು ಕೊಟ್ಟಿದ್ದಾರೆ.

ನಗರದಲ್ಲಿ ವಿವಿಧ ವಿಷಯಗಳ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಬಿಬಿಎಂಪಿ ಕೇಂದ್ರ ಕಚೇರಿಯ ಮುಖ್ಯ ಆಯುಕ್ತರ ಕಚೇರಿಯಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದ್ದು, ಮಳೆಗಾಲದ ವೇಳೆ ಹೊರ ವರ್ತುಲ ರಸ್ತೆಗಳಲ್ಲಿ ಎಲ್ಲೆಲ್ಲಿ ಜಲಾವೃತವಾಗುತ್ತದೆಯೋ ಆ ಸ್ಥಳಗಳಲ್ಲಿ ಕೂಡಲೆ ಜಲಾವೃತವಾಗುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.
ಈ ಪ್ರದೇಶಗಳಲ್ಲಿ ಸಮಸ್ಯೆ: ಇನ್ನು ಬೆಂಗಳೂರಿನಲ್ಲಿ ಮಳೆಯಾದರೆ ನಗರದಲ್ಲಿ ಪ್ರಮುಖವಾಗಿ ಹೆಬ್ಬಾಳ ಜಂಕ್ಷನ್, ನಾಗವಾರ ಜಂಕ್ಷನ್, ವಿದ್ಯಾಶಿಲ್ಪ ಜಂಕ್ಷನ್, ರೂಪೇನ ಅಗ್ರಹಾರ, ಮಾರತಹಳ್ಳಿ ಪೊಲೀಸ್ ಠಾಣೆ, ಕಾರ್ತಿಕ್ ನಗರ, ಕಸ್ತೂರಿ ನಗರ ಮೇಲ್ಸೇತುವೆ, ಪ್ಯಾಲೆಸ್ ಗುಟ್ಟಹಳ್ಳಿ, ಪಣತ್ತೂರು ರೈಲ್ವೆ ಕೆಳಸೇತುವೆ, ನಾಯಂಡಹಳ್ಳಿ ಜಂಕ್ಷನ್, ಆರ್.ಆರ್ ನಗರ ಆರ್ಚ್ ಹಾಗೂ ಸುಮ್ಮನಹಳ್ಳಿ ಜಂಕ್ಷನ್ ಇನ್ನಿತರ ಪ್ರಮುಖ ಸ್ಥಳಗಳಲ್ಲಿ ಜಲಾವೃತವಾಗಲಿದೆ. ಇಲ್ಲಿ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಲು ಸೂಚಿಸಿದ್ದಾರೆ.
ಮೆಟ್ರೋ ಕಾಮಗಾರಿ ನಡೆಯುತ್ತಿರುವ ಕಡೆ ಮೆಟ್ರೋ ವಿಭಾಗದ ಜೊತೆ ಸಮನ್ವಯ ಸಾಧಿಸಿ ಇರುವ ಸಮಸ್ಯೆಗಳನ್ನು ಬಗೆಹರಿಸಬೇಕು. ರಸ್ತೆ ಬದಿಯ ಸೈಡ್ ಡ್ರೈನ್ ಗಳಲ್ಲಿ ಹೂಳನ್ನು ತೆಗೆದು ಸ್ವಚ್ಛಗೊಳಿಸಬೇಕು. ರಸ್ತೆಗಳ ಮೇಲೆ ಬೀಳುವ ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಲು ಹೇಳಿದ್ದಾರೆ.
ರಸ್ತೆ ಗುಂಡಿಗಳನ್ನು ಮುಚ್ಚಿ: ನಗರದ ಹೊರ ವರ್ತುಲ ರಸ್ತೆ ಹಾಗೂ ಪ್ರಮುಖ ರಸ್ತೆಗಳಲ್ಲಿ ಸಂಚಾರ ವಿಭಾಗದಿಂದ ರಸ್ತೆಗುಂಡಿಗಳ ಪಟ್ಟಿಯನ್ನು ನೀಡಿದ್ದು, ಆ ಪಟ್ಟಿಯ ಅನುಸಾರ ಆದ್ಯತೆ ಮೇರೆಗೆ ರಸ್ತೆ ಗುಂಡಿಗಳನ್ನು ಮುಚ್ಚಬೇಕು. ಇದರಿಂದ ವಾಹನಗಳ ಸಂಚಾರಕ್ಕೆ ಹೆಚ್ಚು ಅನುಕೂಲವಾಗಲಿದ್ದು, ಸಂಚಾರ ದಟ್ಟಣೆ ಆಗುವುದನ್ನು ನಿಯಂತ್ರಿಸಲು ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.
ಈ ವೇಳೆ ವಿಶೇಷ ಆಯುಕ್ತರಾದ, ಮುನಿಷ್ ಮೌದ್ಗೀಲ್, ಕರೀಗೌಡ, ಸುರಳ್ಕರ್ ವಿಕಾಸ್ ಕಿಶೋರ್, ವಲಯ ಆಯುಕ್ತರಾದ ರಮೇಶ್, ರಮ್ಯಾ, ದಿಗ್ವಿಜಯ್ ಬೋಡ್ಕೆ, ಸ್ನೇಹಲ್, ಮುಖ್ಯ ಎಂಜಿನಿಯರ್ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಇದ್ದರು.












Click it and Unblock the Notifications