ಯಡಿಯೂರಪ್ಪ, ಎಸ್.ಎಂ.ಕೃಷ್ಣ ಭೇಟಿಯಾದ ಸುಮಲತಾ ಅಂಬರೀಶ್
ಬೆಂಗಳೂರು, ಮೇ 26 : ಮಂಡ್ಯದ ಸಂಸದೆ ಸುಮಲತಾ ಅಂಬರೀಶ್ ಅವರು ಬಿಜೆಪಿ ನಾಯಕರನ್ನು ಭೇಟಿಯಾದರು. 2019ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಸುಮಲತಾ ಅವರಿಗೆ ಬಿಜೆಪಿ ಬೆಂಬಲ ನೀಡಿತ್ತು.
ಭಾನುವಾರ ಸುಮಲತಾ ಅಂಬರೀಶ್ ಅವರು ಕರ್ನಾಟಕ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ, ಬಿಜೆಪಿ ಹಿರಿಯ ನಾಯಕ ಎಸ್.ಎಂ.ಕೃಷ್ಣ ಅವರನ್ನು ಭೇಟಿ ಮಾಡಿದರು. ಲೋಕಸಭಾ ಚುನಾವಣೆಯಲ್ಲಿ ಬೆಂಬಲ ನೀಡಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು.
ಮೊದಲು ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದರು. ಬಳಿಕ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ ಯಡಿಯೂರಪ್ಪ, ಆರ್.ಅಶೋಕ ಅವರ ಜೊತೆ ತೆರಳಿದರು.
2019ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು 1,25,876 ಮತಗಳಿಂದ ಸೋಲಿಸಿ ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದ್ದಾರೆ.

ಮುಂದಿನ ಹೆಜ್ಜೆ ಇಡುವೆ
ಮಾಧ್ಯಮಗಳ ಜೊತೆ ಮಾತನಾಡಿದ ಸುಮಲತಾ ಅವರು, 'ನನಗೆ ಬೆಂಬಲ ನೀಡಿದ ಪ್ರತಿಯೊಬ್ಬರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸುವುದು ನನ್ನ ಕರ್ತವ್ಯ. ಕೇಂದ್ರದಲ್ಲಿ ಬಿಜೆಪಿಗೆ ವಿಷಯಾಧಾರಿತ ಬೆಂಬಲ ನೀಡಲು ಅವಕಾಶವಿದೆ. ಮಂಡ್ಯ ಅಭಿವೃದ್ಧಿಗಾಗಿ ಜನರ ಅಭಿಪ್ರಾಯ ಪಡೆದು ಮುಂದಿನ ಹೆಜ್ಜೆ ಇಡುವೆ' ಎಂದು ಹೇಳಿದರು.

ಮಂಡ್ಯ ಜನ ಬೆಂಬಲ ನೀಡಿದ್ದಾರೆ
ಯಡಿಯೂರಪ್ಪ ಅವರು ಮಾತನಾಡಿ, 'ಬಿಜೆಪಿ ಬೆಂಬಲ ನೀಡಿದ ಕಾರಣಕ್ಕಾಗಿ ಮತ್ತು ನರೇಂದ್ರ ಮೋದಿ ಅವರು ಮೈಸೂರಿಗೆ ಬಂದಾಗ ಸುಮಲತಾ ಅವರ ಹೆಸರು ಹೇಳಿದ್ದರಿಂದ, ಮಂಡ್ಯ ಜನ ಪಕ್ಷಾತೀತವಾಗಿ ಬೆಂಬಲ ನೀಡಿದ್ದರಿಂದ ಸುಮಲತಾ ಅವರು ಜಯಗಳಿಸಿದ್ದಾರೆ' ಎಂದರು.

ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ
2019ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಸುಮಲತಾ ಅಂಬರೀಶ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಬಿಜೆಪಿ ಅವರಿಗೆ ಬೆಂಬಲ ನೀಡಿತ್ತು. ಸುಮಲತಾ ಅಂಬರೀಶ್ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು 1,25,876 ಮತಗಳಿಂದ ಸೋಲಿಸಿ ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದ್ದಾರೆ.

ಯಾರು ಎಷ್ಟು ಮತ ಪಡೆದರು?
ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರು 703660 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ನಿಖಿಲ್ ಕುಮಾರಸ್ವಾಮಿ ಅವರು 5,77,784 ಮತಗಳನ್ನು ಪಡೆದು ಸೋಲು ಅನುಭವಿಸಿದ್ದರು.












Click it and Unblock the Notifications