ಏಕಲವ್ಯ ಪ್ರಶಸ್ತಿ ಪುರಸ್ಕೃತ ಈಜು ಪಟು, ಶಿಕ್ಷಕಿ ನೇಣಿಗೆ ಶರಣು
ಬೆಂಗಳೂರು, ಏಪ್ರಿಲ್ 12: ಕೊರೋನಾ ಹೊಡೆತಕ್ಕೆ ಶಿಕ್ಷಕ ಸಮುದಾಯ ಸಂಕಷ್ಟಕ್ಕೆ ಒಳಗಾಗಿದೆ. ಈ ಕುರಿತು ಸರ್ಕಾರಕ್ಕೆ ನೂರು ಮನವಿ ನೀಡಿದರೂ ತಲೆ ಕೆಡಿಸಿಕೊಂಡಿಲ್ಲ. ಎಷ್ಟೋ ಮಂದಿ ಶಿಕ್ಷಕ ವೃತ್ತಿಯನ್ನೇ ತೊರೆದಿದ್ದಾರೆ. ಇನ್ನೂ ಕೆಲವರು ಆತ್ಮಹತ್ಯೆ ಮೊರೆ ಹೋಗಿದ್ದಾರೆ. ಒಂದು ವರ್ಷದಿಂದ ಕೆಲಸವಿಲ್ಲದೇ ಖಿನ್ನತೆಗೆ ಒಳಗಾಗಿದ್ದ ಏಕಲವ್ಯ ಪ್ರಶಸ್ತಿ ಪುರಸ್ಕೃತ ಈಜುಪಟು, ಶಿಕ್ಷಕಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ರಾಷ್ಟ್ರಮಟ್ಟದ ಈಜುಪಟು, 2019ರಲ್ಲಿ ಏಕಲವ್ಯ ಪ್ರಶಸ್ತಿ ಪುರಸ್ಕೃತ ಜಿ.ಬಿ. ಶಿಲ್ಪಾ (41) ಜಯನಗರದ ಮಾರೇನಹಳ್ಳಿ ನಿವಾಸಿಯಾಗಿದ್ದು, ಆತ್ಮಹತ್ಯೆಗೆ ಶರಣಾದ ಶಿಕ್ಷಕಿಯಾಗಿದ್ದಾರೆ. ಆತ್ಮಹತ್ಯೆಗೂ ಮುನ್ನ ಶಿಲ್ಪಾ ಅವರು ಡೆತ್ ನೋಟ್ ಬರೆದಿಟ್ಟಿದ್ದಾರೆ. ಶಿಲ್ಪಾ ಮತ್ತು ನೀಲ ಕೃಷ್ಣ ಪ್ರಸಾದ್ ದಂಪತಿ ಅನ್ಯೋನ್ಯವಾಗಿಯೇ ಇದ್ದರು. ನಾಲ್ಕು ತಿಂಗಳ ಹಿಂದಷ್ಟೇ ಶಿಲ್ಪಾ ಅವರ ತಾಯಿ ಸಾವನ್ನಪ್ಪಿದ್ದರು. ಪ್ರತಿಷ್ಠಿತ ಶಾಲೆಯಲ್ಲಿ ಕ್ರೀಡಾ ಶಿಕ್ಷಕಿಯಾಗಿದ್ದ ಶಿಲ್ಪಾ ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಕೆಲಸ ಕಳೆದುಕೊಂಡಿದ್ದರು. ಕೆಲವು ದಿನಗಳ ಹಿಂದಷ್ಟೇ ಆಡಳಿತ ಮಂಡಳಿಗೆ ಪತ್ರ ಬರೆದು ಕೆಲಸಕ್ಕೆ ಸೇರಿಸಿಕೊಳ್ಳುವಂತೆ ಮನವಿ ಮಾಡಿದ್ದರು. ಕೊರೋನಾ ಹಿನ್ನೆಲೆಯಲ್ಲಿ ಶಿಲ್ಪಾ ಅವರ ಮನವಿಯನ್ನು ಪರಿಗಣಿಸಿರಲಿಲ್ಲ. ಒಂದು ವರ್ಷದಿಂದ ಕೆಲಸವಿಲ್ಲದೇ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದ ಶಿಲ್ಪಾ ಅವರು ಖಿನ್ನತೆಗೆ ಒಳಗಾಗಿದ್ದರು.
ಭಾನುವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಿಟಕಿಗೆ ನೇಣು ಹಾಕಿಕೊಂಡು ಶಿಲ್ಫಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ ಮನೆಗೆ ಬಂದಾಗ ಈ ಪ್ರಕರಣ ಬೆಳಕಿಗೆ ಬಂದಿದ್ದು, ಜಯನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಡೆತ್ ನೋಟ್ : ಆತ್ಮಹತ್ಯೆಗೂ ಮುನ್ನ ಶಿಲ್ಪಾ ಡೆತ್ ನೋಟ್ ಬರೆದಿಟ್ಟಿದ್ದಾರೆ. ಅದರಲ್ಲಿ ಅಸಹಾಯಕ ಬದುಕಿನ ಬಗ್ಗೆ ವಿಷಾಧ ವ್ಯಕ್ತಪಡಿಸಿದ್ದಾರೆ. ಶಿಕ್ಷಣ ರಂಗದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಪ್ರಶಸ್ತಿ ಪಡೆದರೂ ಒಂದು ಶಾಲೆಯಲ್ಲಿ ಶಿಕ್ಷಕಿ ಕೆಲಸ ಪಡೆಯಲಾಗದ ಬಗ್ಗೆ ಬೇಸರ ತೋಡಿಕೊಂಡಿದ್ದಾರೆ. ಒಂದು ವರ್ಷದಿಂದ ಕೆಲಸ ವಿಲ್ಲದೇ ಕಂಗಾಲಾಗಿದ್ದ ಶಿಲ್ಪಾ ಖಿನ್ನತೆಗೆ ಒಳಗಾಗಿದ್ದಾರೆ. ನಾಲ್ಕು ತಿಂಗಳ ಹಿಂದೆ ತಾಯಿ ತೀರಿಕೊಂಡಿದ್ದರು. ಬದುಕಿನ ಪಯಣವನ್ನು ಅಂತ್ಯಗೊಳಿಸುತ್ತಿದ್ದೇನೆ ಎಂದು ಭಾವುಕ ಪದಗಳಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಿಕ್ಷಕ ಸಮುದಾಯದಲ್ಲಿ ವೈರಲ್: ಶಾಲೆಗಳಲ್ಲಿ ದೈಹಿಕ ಶಿಕ್ಷಕರು, ಭರತ ನಾಟ್ಯ ಶಿಕ್ಷಕಿಯರು, ಬೋಧಕೇತರ ಶಿಕ್ಷಕಿಯರ ಸಮುದಾಯದಲ್ಲಿ ಶಿಲ್ಪಾ ಆತ್ಮಹತ್ಯೆ ವಿಚಾರ ದೊಡ್ಡ ಮಟ್ಟದಲ್ಲಿ ವೈರಲ್ ಆಗಿದೆ. ಈ ಸಾವು ನ್ಯಾಯವೇ ? ಇದು ಶಿಕ್ಷಕ ಸಮುದಾಯಕ್ಕೆ ಸಿಗುತ್ತಿರುವ ಗೌರವವೇ ? ಎಂದು ಪ್ರಶ್ನೆ ಮಾಡಿರುವುದು ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತಿದೆ.
ಮಹಾ ಪ್ರಮಾದ: ಬೋಧಕೇತರ ಶಿಕ್ಷಕರು ರಾಜ್ಯದಲ್ಲಿ ಸಂಕಷ್ಟ ಎದುರಿಸುತ್ತಿದ್ದಾರೆ. ತೆಲಂಗಾಣ ಮಾದರಿಯಲ್ಲಿ ರಾಜ್ಯದಲ್ಲೂ ಖಾಸಗಿ ಶಾಲಾ ಶಿಕ್ಷಕರಿಗೆ ಅನುಕೂಲ ಕಲ್ಪಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ನೀಡಿದ್ದೇವೆ. ಖಾಸಗಿ ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಶಿಕ್ಷಕ ಸಚಿವ ಸುರೇಶ್ ಕುಮಾರ್ ಅವರ ಗಮನಕ್ಕೂ ತಂದಿದ್ದೇವೆ. ಸರ್ಕಾರಕ್ಕೆ ಮಠ ಮಾನ್ಯಗಳಿಗೆ ನೂರಾರು ಕೋಟಿ ಕೊಡಲಿಕ್ಕೆ ಹಣವಿದೆ. ಆದರೆ, ದೇಶ ಕಟ್ಟುವ ಶಿಕ್ಷಕರು ಸಂಕಷ್ಟದಲ್ಲಿದ್ದಾರೆ ಎಂದು ಅನೇಕ ಮನವಿ ಕೊಟ್ಟರು ಅದಕ್ಕೆ ಸ್ಪಂದನೆ ಮಾಡುತ್ತಿಲ್ಲ ಎಂದು ಮಾನ್ಯತೆ ಪಡೆದ ಖಾಸಗಿ ಶಾಲೆಗಳ ಒಕ್ಕೂಟ ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್ ಪ್ರಶ್ನೆ ಮಾಡಿದ್ದಾರೆ.
Recommended Video
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777