ಕೆರಗೋಡು ಘಟನೆ ಬಿಜೆಪಿ ಧ್ರುವೀಕರಣ ತಂತ್ರದ ಭಾಗ: ಗ್ಯಾರೆಂಟಿಗಳು ರದ್ದಾಗಲ್ಲ: ಎಂಬಿಪಾ
ಬೆಂಗಳೂರು, ಜನವರಿ 31: ಮಂಡ್ಯದಲ್ಲಿ ಹನುಮ ಧ್ವಜ ಇಳಿಸಿದ ಬಳಿಕ ನಡೆದ ಬೆಳವಣಿಗಗಳು ಭಾರೀ ಚರ್ಚೆ ಹುಟ್ಟು ಹಾಕಿದೆ. ಬಿಜೆಪಿ-ಜೆಡಿಎಸ್ ಜಂಟಿಯಾಗಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಈ ಘಟನೆ ಬಿಜೆಪಿಯ ಧ್ರುವೀಕರಣ ತಂತ್ರದ ಭಾಗವೇ ಆಗಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಬೆಂಗಳೂರಿನಲ್ಲಿ ತಮ್ಮ ನಿವಾಸದ ಬಳಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತಿರಿಸಿದ ಅವರು, ಕರ್ನಾಟಕವು ರಾಷ್ಟ್ರಕವಿ ಕುವೆಂಪು ಹೇಳಿದಂತೆ ಸರ್ವ ಜನಾಂಗದ ಶಾಂತಿಯ ತೋಟವಾಗಿದೆ. ಇಲ್ಲಿ ಲೋಕಸಭಾ ಚುನಾವಣೆಯ ಮೇಲೆ ಕಣ್ಣಿಟ್ಟುಕೊಂಡು, ಬಿಜೆಪಿ ಧರ್ಮದ ಆಧಾರದ ಮೇಲೆ ಜನರ ಧ್ರುವೀಕರಣ ಮಾಡುತ್ತ, ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹೊರಟಿದೆ.

ಎಲ್ಲ ಧರ್ಮದವರನ್ನು ಸರ್ಕಾರ ರಕ್ಷಿಸುತ್ತದೆ
ಮಂಡ್ಯದ ಕೆರೆಗೋಡಿನಲ್ಲಿ ನಡೆದ ಘಟನೆ ಇಂತಹ ಬಿಜೆಪಿಯ ಷಡ್ಯಂತ್ರದ ಭಾಗವಾಗಿದೆ. ನಾವು ಹಿಂದೂ ಧರ್ಮವನ್ನು ಪ್ರೀತಿಸಬೇಕು. ಉಳಿದ ಧರ್ಮಗಳನ್ನು ಗೌರವಿಸಬೇಕು. ಶ್ರೀರಾಮ, ಭಗವಂತ ಶಿವ, ಮಹಾವೀರ, ಶರಣ ಬಸವಣ್ಣ ಯಾರ ಸ್ವತ್ತೂ ಅಲ್ಲ. ನಮ್ಮ ಸರ್ಕಾರ ಪ್ರತಿಯೊಂದು ಧರ್ಮದ ಜನರನ್ನೂ ರಕ್ಷಿಸಲಿದೆ ಎಂದು ಅವರು ಪ್ರತಿಪಾದಿಸಿದರು.
ಎಚ್ಡಿಕೆ ವಿರುದ್ಧ ಸಚಿವ ವಾಗ್ದಾಳಿ
ಜೆಡಿಎಸ್ ರಾಜ್ಯಾಧ್ಯಕ್ಷರು ಆದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಈಗ ಬಿಜೆಪಿ ಪರ ಮಾತನಾಡುತ್ತಿದ್ದಾರೆ. ಹಿಂದೆ ಇದೇ ವ್ಯಕ್ತಿ ಬಿಜೆಪಿಯನ್ನು ಹಿಗ್ಗಾಮುಗ್ಗ ಟೀಕಿಸಿದ್ದರು. ಆಗ ಅಪಾಯಕಾರಿಯಾಗಿ ಕಾಣುತ್ತಿದ್ದ ಬಿಜೆಪಿ, ಅವರಿಗೆ ಈಗೇಕೆ ಹಿತಕರವಾಗಿ ಕಾಣುತ್ತಿದೆ? ಜನರು ಇದನ್ನೆಲ್ಲ ಅರ್ಥ ಮಾಡಿಕೊಳ್ಳುವಷ್ಟು ಬುದ್ಧಿವಂತರಾಗಿದ್ದಾರೆ ಎಂದು ಹೇಳಿದರು.
ಚುನಾವಣೆಗೆ-ಗ್ಯಾರಂಟಿಗೆ ಸಂಬಂಧವಿಲ್ಲ: ಪಾಟೀಲ್
ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೂ ಲೋಕಸಭಾ ಚುನಾವಣೆಗೂ ಸಂಬಂಧವಿಲ್ಲ. ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಕಡಿಮೆ ಸೀಟುಗಳು ಬಂದರೆ ಗ್ಯಾರಂಟಿಗಳನ್ನು ನಿಲ್ಲಿಸಲಾಗುವುದು ಎಂದಿರುವ ಮಾಗಡಿ ಶಾಸಕರ ಮಾತು ಸರಿಯಲ್ಲ. ಈಗಾಗಲೇ ಜಾರಿಗೊಳಿಸಿರುವ ಗ್ಯಾರಂಟಿಗಳೆಲ್ಲವೂ ಐದು ವರ್ಷಗಳ ಕಾಲ ಮುಂದುವರಿಯಲಿವೆ ಎಂದು ಪಾಟೀಲ್ ಸ್ಪಷ್ಪಪಡಿಸಿದರು.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಸೋಲಾದರೆ ಸರ್ಕಾರದ ಈಗಿನ ಗ್ಯಾರೆಂಟಿ ಯೋಜನೆಗಳು ರದ್ದಾಗಬಹುದು ಎಂದು ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ಹೇಳಿದ್ದಾರೆ. ಬಿಜೆಪಿಯವರು ಅಕ್ಷತೆ ನೀಡಿ ಮತ ಕೇಳುತ್ತಿದ್ದಾರೆ. ನಾವು ಗ್ಯಾರೆಂಟಿ ಯೋಜನೆ ಜಾರಿ ಮಾಡಿ ಮತ ಕೇಳುತ್ತಿದ್ದೇವೆ. ಒಂದು ವೇಳೆ ಚುನಾವಣೆಯಲ್ಲಿ ಗೆಲ್ಲದಿದ್ದರೆ ಜನರಿಗೆ ಗ್ಯಾರೆಂಟಿಗಳ ಇಷ್ಟವಿಲ್ಲ ಎಂದಂತಾಗುತ್ತದೆ. ಈ ಬಗ್ಗೆ ಸಿಎಂ ಜತೆ ಚರ್ಚಿಸಲಾಗುವುದು ಎಂದು ಅವರು ತಿಳಿಸಿದ್ದರು.












Click it and Unblock the Notifications