ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಎಂ.ಬಿ. ಪಾಟೀಲ್
ಬೆಂಗಳೂರು, ಮಾರ್ಚ್ 28: ಕರ್ನಾಟಕ ಕಾಂಗ್ರೆಸ್ ಸಮಿತಿಯ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಹಿರಿಯ ಶಾಸಕ ಎಂ. ಬಿ. ಪಾಟೀಲ್ ಸೋಮವಾರ ಅಧಿಕಾರ ಸ್ವೀಕರಿಸಿದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿತ್ತು. ಈ ವೇಳೆ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ತಿಂಗಳ ಬಳಿಕ ಅಧಿಕೃತವಾಗಿ ಜವಾಬ್ದಾರಿ ತೆಗೆದುಕೊಂಡರು.

ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಸೇರಿದಂತೆ ಕೆಪಿಸಿಸಿ ಕಾರ್ಯಾಧ್ಯಕ್ಷರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷದ ಬಾವುಟ ಸ್ವೀಕರಿಸುವ ಮೂಲಕ ಮುಂದಿನ ವರ್ಷ ನಡೆಯುವ ವಿಧಾನಸಭೆ ಚುನಾವಣೆಗೆ ಕಹಳೆ ಊದಿದರು.
ಕೆಪಿಸಿಸಿ ನೂತನ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿದ ಎಂ.ಬಿ. ಪಾಟೀಲ್, "ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿಯವರು ಯಾರೂ ಭಾಗಿ ಆಗಿರಲಿಲ್ಲ. ಆದರೆ ಈಗ ನಮಗೇ ದೇಶಭಕ್ತಿ ಬಗ್ಗೆ ಹೇಳಿಕೊಡಲು ಬರುತ್ತಿದ್ದಾರೆ. ಕೋವಿಡ್ ನಿರ್ವಹಣೆಯಲ್ಲಿ ಕೇಂದ್ರ, ರಾಜ್ಯ ಸರ್ಕಾರ ವಿಫಲವಾಗಿದೆ. ಕೊರೊನಾ ವೇಳೆ ಚಿಕಿತ್ಸೆ ಸಿಗದೆ ಸಾವಿರಾರು ಜನರು ಮೃತಪಟ್ಟಿದ್ದಾರೆ," ಎಂದು ಆರೋಪಿಸಿದರು.
ಕೋವಿಡ್ ನಿರ್ವಹಣೆ ಹೆಸರಿನಲ್ಲಿ ಸಾವಿರಾರು ಕೋಟಿ ರೂ. ಲೂಟಿ ಆಗಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಉತ್ತಮ ಆಡಳಿತ ನೀಡಿತ್ತು. ರಾಜ್ಯದ ಏಕೈಕ ಮಹಿಳಾ ವಿವಿಯನ್ನು ಮುಚ್ಚಲು ಸರ್ಕಾರ ಯತ್ನಿಸುತ್ತಿದೆ. ಜನ ವಿರೋಧಿಯಾಗಿರುವ ರಾಜ್ಯ ಸರ್ಕಾರವನ್ನು ಕಿತ್ತೊಗೆಯಬೇಕಿದೆ. 150 ಸೀಟ್ ಗೆದ್ದು ಕಾಂಗ್ರೆಸ್ನ್ನು ಮತ್ತೆ ಅಧಿಕಾರಕ್ಕೆ ತರುತ್ತೇವೆ ಎಂದು ಎಂ.ಬಿ. ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರ: ರಣದೀಪ್ ಸುರ್ಜೇವಾಲಾ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಸರ್ಕಾರ 40 ಪರ್ಸೆಂಟೇಜ್ ಕಮಿಷನ್ ಸರ್ಕಾರವಾಗಿದೆ. ಪ್ರಧಾನಿ, ಬಿಜೆಪಿ ಹೈಕಮಾಂಡ್ ಈ ಬಗ್ಗೆ ಏಕೆ ಮಾತನಾಡುತ್ತಿಲ್ಲ. ಬಿಜೆಪಿ ಹೈಕಮಾಂಡ್ ಏಕೆ ಬಾಯಿ ಮುಚ್ಚಿಕೊಂಡು ಕುಳಿತಿದೆ. ಭ್ರಷ್ಟ ಸರ್ಕಾರದ ವಿರುದ್ಧ ಬಿಜೆಪಿ ವರಿಷ್ಠರು ಕ್ರಮಕೈಗೊಳ್ಳಲಿ. ಇಲ್ಲದಿದ್ದರೆ ಭ್ರಷ್ಟಾಚಾರದಲ್ಲಿ ವರಿಷ್ಠರಿಗೂ ಪಾಲಿದೆ ಎಂದರ್ಥ ಎಂದು ಸುರ್ಜೇವಾಲಾ ಆರೋಪಿಸಿದರು.












Click it and Unblock the Notifications